NEWSನಮ್ಮಜಿಲ್ಲೆನಮ್ಮರಾಜ್ಯ

ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಂಗಳೂರು ಏರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: “ಬ್ರ್ಯಾಂಡ್ ಬೆಂಗಳೂರು” ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಲು ನಮ್ಮ ಸರ್ಕಾರ ಮುಂದಾಗಿದೆ. ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ ವ್ಯವಸ್ಥೆ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಮಾಣಿಕ್​ಷಾ ಪರೇಡ್​ ಮೈದಾನದಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತ್ರಿವಣ ಧ್ವಜಾರೋಹಣ ಮಾಡಿದ ಬಳಿಕ ಮಾತನಾಡಿದರು.

ನಗರ ಪ್ರದೇಶದ ಬಡವರು, ವಲಸೆ ಕಾರ್ಮಿಕರು, ಶ್ರಮಿಕರ ಕ್ಷೇಮಾಭಿವೃದ್ಧಿಗೆ ಕೂಡ ನಮ್ಮ ಸರ್ಕಾರ ಕಾಳಜಿ ವಹಿಸಿದೆ. ಇದಕ್ಕಾಗಿ ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್‍ಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದಕ್ಕಾಗಿ 100 ಕೋಟಿ ರೂ. ಮೀಸಲಿಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮನಗಂಡು ಸರ್ಕಾರವು ಪ್ರತಿ ಪ್ಲೇಟ್‍ಗೆ 5 ರಿಂದ 10 ರೂ. ಗಳಷ್ಟು ಹೆಚ್ಚುವರಿ ಮೊತ್ತ ನೀಡಿ, ಜನರಿಗೆ ಹಿಂದಿನ ದರದಲ್ಲಿಯೆ ಉತ್ತಮ ಆಹಾರವನ್ನು ಒದಗಿಸಲು ತೀರ್ಮಾನಿಸಿದೆ.

ಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆಗೊಳಿಸಲು ನಗರದ ಹೊರವಲಯದಲ್ಲಿ ಜನರು ಪ್ರತಿದಿನ ಪ್ರಯಾಣಿಸಲು ಅನುಕೂಲವಾಗುವಂತೆ ರಸ್ತೆ, ರೈಲು ಸಂಪರ್ಕದೊಂದಿಗೆ ಉಪನಗರಗಳನ್ನು ಅಭಿವೃದ್ಧಿ ಪಡಿಸಲಾಗುವುದು. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿಗಳಲ್ಲಿ ಉಪನಗರ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು.

ನಗರ ಪ್ರದೇಶದ ಕೆರೆಗಳು ಮತ್ತಿತರ ಜಲಮೂಲಗಳ ಸಂರಕ್ಷಣೆ ಮಾಡುವುದರೊಂದಿಗೆ ಜನರಿಗೆ ಸ್ವಚ್ಛ ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರವು 3400 ಕೋಟಿ ರೂ.ಗಳ ಯೋಜನೆಯನ್ನು ರೂಪಿಸಲಿದೆ.

ಬೆಂಗಳೂರು ಮೆಟ್ರೋ ಪ್ರಸ್ತುತ 69.66 ಕಿ.ಮೀ. ಕಾರ್ಯಾಚರಣೆ ನಡೆಸುತ್ತಿದ್ದು, ಪ್ರತಿದಿನ 6.1 ಲಕ್ಷ ಪ್ರಯಾಣಿಕರು ಮೆಟ್ರೋ ರೈಲು ಸೇವೆಯನ್ನು ಪಡೆಯುತ್ತಿದ್ದಾರೆ. 2023ರ ಸೆಪ್ಟೆಂಬರ್‍ನಲ್ಲಿ ಬೈಯಪ್ಪನಹಳ್ಳಿ-ಕೃಷ್ಣರಾಜಪುರ ಮಾರ್ಗ, ಕೆಂಗೇರಿ-ಚಲ್ಲಘಟ್ಟ ವಿಸ್ತರಣೆ, ಡಿಸೆಂಬರ್ ವೇಳೆಗೆ ನಾಗಸಂದ್ರ-ಮಾದಾವರ ವಿಸ್ತರಣೆ, ಆರ್.ವಿ.ರಸ್ತೆ-ಬೊಮ್ಮನಹಳ್ಳಿ ಹೊಸಮಾರ್ಗ ಕಾರ್ಯಾಚರಣೆ ಪ್ರಾರಂಭಿಸಲಾಗುವುದು. 2026ರ ವೇಳೆಗೆ ಬೆಂಗಳೂರಿನಲ್ಲಿ 175.55 ಕಿ.ಮೀ. ಮೆಟ್ರೋ ಜಾಲ ಕಾರ್ಯಾಚರಣೆ ನಡೆಸಲಿದೆ. ಈಗ ಬೆಂಗಳೂರಿನ ಮೆಟ್ರೋ ಜಾಲವು ದೇಶದಲ್ಲಿ ಎರಡನೆ ಸ್ಥಾನದಲ್ಲಿದೆ.

ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿರುವ ಸುಮಾರು 70 ರಿಂದ 80 ಲಕ್ಷ ಅಸಂಘಟಿತ ಅದರಲ್ಲೂ ವಿಶೇಷವಾಗಿ ಸಾರಿಗೆ ವಲಯದ ಕಾರ್ಮಿಕರಿಗೆ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಉದ್ದೇಶಿಸಲಾಗಿದೆ.

ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿದೆ.

38. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾಯ್ದೆ 1993 ಜಾರಿ ಹಾಗೂ ಸಂವಿಧಾನದ 73ನೇ ವಿಧಿಯ ತಿದ್ದುಪಡಿ ಮಾಡಿದ 30ನೇ ವರ್ಷದಲ್ಲಿ ನಾವಿದ್ದೇವೆ. ಪ್ರಜಾಪ್ರಭುತ್ವದ ವಿಕೇಂದ್ರೀಕರಣದಲ್ಲಿ ಕರ್ನಾಟಕ ಎಂದಿಗೂ ಮುಂಚೂಣಿಯಲ್ಲಿದೆ. ಪಂಚಾಯತ್‍ರಾಜ್ ಸಂಸ್ಥೆಗಳ ಮೂಲಕ ಸ್ಥಳೀಯಾಡಳಿತ ವ್ಯವಸ್ಥೆಯನ್ನು ಬಲಪಡಿಸಲು ಹಾಗೂ ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ.

ರಾಜ್ಯದ ಜನತೆಗೆ ಜೀವನೋಪಾಯವನ್ನು ಕಲ್ಪಿಸಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಭಿನ್ನ ಕಾರ್ಯತಂತ್ರಗಳನ್ನು ನಮ್ಮ ಸರ್ಕಾರವು ಅಳವಡಿಸಿಕೊಳ್ಳಲಿದೆ. ಗ್ರಾಮೀಣ ಪ್ರದೇಶದಲ್ಲಿ ಕೌಶಲ್ಯ ತರಬೇತಿ, ಸಾಲ ಸೌಲಭ್ಯದ ಲಭ್ಯತೆ ಮತ್ತು ಸ್ವ-ಸಹಾಯ ಸಂಘಗಳು ಹಾಗೂ ಜಂಟಿ ಬಾಧ್ಯತಾ ಗುಂಪುಗಳನ್ನು ಬಲಪಡಿಸುವ ಮೂಲಕ ಗ್ರಾಮೀಣ ಉದ್ಯಮಶೀಲತೆಗೆ ಪ್ರೋತ್ಸಾಹ ನೀಡಲಾಗುವುದು. ಹೊಸ ಉದ್ಯಮ ಸ್ಥಾಪನೆಯ ಪ್ರಕ್ರಿಯೆಗಳನ್ನು ಸರಳಗೊಳಿಸುವುದರೊಂದಿಗೆ ಪ್ರತಿ ತಾಲೂಕಿನಲ್ಲಿ ಇದಕ್ಕಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಜನೆ ಮಾಡಲು ಹಾಗೂ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ ಮಾಡಲು ಕೃಷಿ ಸಂಸ್ಕರಣೆ ಉದ್ಯಮಗಳ ಸ್ಥಾಪನೆಗೆ ಬೆಂಬಲ ನೀಡಲಾಗುವುದು. ಇದರಿಂದ ರೈತರ ಆದಾಯ ಹೆಚ್ಚುವುದಲ್ಲದೆ ಗ್ರಾಮೀಣ ಪ್ರದೇಶದ ಬೆಳವಣಿಗೆಗೆ ನೆರವಾಗಲಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು