NEWSಶಿಕ್ಷಣ-

ಊರಿಗೆ ತೆರಳಿದ ಮಕ್ಕಳಿಗೆ ಅಲ್ಲೇ SSLC ಪರೀಕ್ಷೆಗೆ ಅನುವುಮಾಡಿಕೊಡಿ

ಅಧಿಕಾರಿಗಳಿಗೆ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಿಂದ ಸ್ಥಗಿತಗೊಂಡಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು  ನಡೆಸಲು ಅನುವಾಗುವಂತೆ ಎಲ್ಲ ಸಿದ್ದತೆಗಳನ್ನು ಈಗಿನಿಂದಲೇ   ಪ್ರಾರಂಭಿಸಬೇಕೆಂದು ಪ್ರಾಥಮಿಕ ಮತ್ತು  ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ರಾಜ್ಯದ ಎಲ್ಲ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದವನ್ನು ಸಚಿವರು ನಡೆಸಿದರು. ಎಲ್ಲ ಜಿಲ್ಲೆಗಳಿಂದ ಬಂದ ಒಟ್ಟಾಭಿಪ್ರಾಯದಂತೆ ಮಕ್ಕಳು ತಮ್ಮ ಪರೀಕ್ಷಾ  ದಿನಾಂಕ ತಿಳಿಯಲು ಉತ್ಸುಕರಾಗಿದ್ದು  ಮತ್ತು ತಮ್ಮ ಪರಿಶ್ರಮದ ಆಧಾರದಲ್ಲಿ ಪರೀಕ್ಷಾ ಫಲಿತಾಂಶವನ್ನು ಪಡೆಯಬೇಕೆಂದು ಬಯಸುತ್ತಿರುವ ಹಿನ್ನೆಲೆಯಲ್ಲಿ   ಪರೀಕ್ಷಾ ಕೇಂದ್ರಗಳಲ್ಲಿ  ಕೊರೊನಾ ನಂತರದ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ಅವಶ್ಯಕವಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆಗಳನ್ನು ನಿರ್ವಹಿಸುವ ಬಗ್ಗೆ ಕೂಡಲೇ ಗಮನ ಹರಿಸಬೇಕೆಂದು  ಸೂಚಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲೆಗಳನ್ನು ಕೆಂಪು, ಕಿತ್ತಳೆ, ಹಸಿರು ಮತ್ತು ಕಂಟೇನ್ ಮೆಂಟ್ ಜಿಲ್ಲೆಗಳೆಂದು ಗುರುತಿಸಿರುವ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಸ್ಥಳೀಯ ಅವಶ್ಯಕತೆಗೆ ಅನುಗುಣವಾಗಿ ಕೈಗೊಳ್ಳಬೇಕಿರುವ ಪರೀಕ್ಷಾ ಸಿದ್ಧತೆ ಕುರಿತು    ಅಭಿಪ್ರಾಯ ಪಡೆದ ಸಚಿವರು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿರುವ ಈ ದಿನಮಾನಗಳಲ್ಲಿ ಮಕ್ಕಳ ಮಾನಸಿಕ  ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪರೀಕ್ಷಾ ಸಿದ್ಧತೆಯನ್ನು ಜಾರಿಯಲ್ಲಿಡಬೇಕೆಂದು ಸೂಚಿಸಿದರು.

ಮಾಸ್ಕ್ , ಸ್ಯಾನಿಟೈಜರ್ ಹಾಗೂ ಜ್ವರ ತಪಾಸಣೆ ಕಡ್ಡಾಯ: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ  ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಜರ್ ಗಳನ್ನು ಒದಗಿಸಿ ಥರ್ಮಲ್ ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಲು ಕ್ರಮ ಕೈಗೊಳ್ಳಬೇಕು. ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ  ಪ್ರತ್ಯೇಕ ಕೊಠಡಿಯನ್ನು ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.   ಯಾವುದೇ ವಿದ್ಯಾರ್ಥಿಯೂ ನೆಲದ ಮೇಲಾಗಲೀ, ಬಯಲಿನಲ್ಲಾಗಲೀ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದರು.

ಆಂಗ್ಲ ಮಾಧ್ಯಮ ಪುನರ್ಮನನ ತರಗತಿಗಳ ಪ್ರಾರಂಭ
ಶಿಕ್ಷಣ ಇಲಾಖೆ ಚಂದನವಾಹಿನಿಯಲ್ಲಿ ಈಗಾಗಲೇ ಪರೀಕ್ಷಾರ್ಥಿಗಳಿಗೆ ಪುನರ್ಮನನ ತರಗತಿಗಳನ್ನು ನಡೆಸುತ್ತಿದ್ದು, ಈ ವಾರದಿಂದಲೇ  ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೂ ಪುನರ್ಮನನ ತರಗತಿಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  ಇಲಾಖೆಯ ಮಕ್ಕಳವಾಣಿ ಯೂ-ಟ್ಯೂಬ್ ಚಾನೆಲ್ ನಲ್ಲಿಯೂ ಸಹ ಪುನರ್ಮನನ ತರಗತಿಗಳು ವಿದ್ಯಾರ್ಥಿಗಳಿಗೆ ಲಭ್ಯವಿದ್ದು, ಎಸ್ಎಸ್ ಎಲ್ ಸಿ ಪರೀಕ್ಷೆ  ಕುರಿತು ಮಕ್ಕಳಲ್ಲಿ ಅನುಮಾನಗಳಿದ್ದರೆ ಪರೀಕ್ಷೆ ಇಷ್ಟರಲ್ಲೇ ನಡೆಯಲಿದೆ ಎಂಬ ಕುರಿತು ಮಕ್ಕಳಿಗೆ ಮತ್ತು ಪೋಷಕರಿಗೆ ಮನವರಿಕೆ ಮಾಡಬೇಕೆಂದು  ಸಚಿವರು ಡಿಡಿಪಿ ಐಗಳಿಗೆ ಸೂಚಿಸಿದರು.

ಪರೀಕ್ಷೆ ಸಿದ್ಧತೆಗೆ ಸಮಯ
ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲು ವಿಷಯವಾರು  ಅವಶ್ಯಕ  ಅಂತರವನ್ನು   ಕಾಪಾಡಿಕೊಳ್ಳಲು ಯೋಜನೆ ರೂಪಿಸಬೇಕೆಂದು ಇಲಾಖಾ ಆಯುಕ್ತರಿಗೆ ಸೂಚಿಸಿದ ಸುರೇಶ್ ಕುಮಾರ್, ಈಗಾಗಲೇ ಬೇರೆ ಊರುಗಳಿಗೆ ತೆರಳಿರುವ ವಿದ್ಯಾರ್ಥಿಗಳಿಗೆ ಅವರು ಪ್ರಸ್ತುತ ಇರುವ ಸ್ಥಳಗಳಲ್ಲಿಯೇ ಹತ್ತಿರದ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಕುರಿತಂತೆ ಕ್ರಿಯಾಯೋಜನೆ ರೂಪಿಸಬೇಕೆಂದು ಸೂಚಿಸಿದರು.

ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲ ಜಿಲ್ಲೆಗಳ ಡಿಡಿಪಿಐಗಳೊಂದಿಗೆ ಪ್ರಾಥಮಿಕ ಮತ್ತು  ಪ್ರೌಢಶಿಕ್ಷಣ ಶಿಕ್ಷಣ  ಸಚಿವ ಎಸ್ ಸುರೇಶ್ ಕುಮಾರ್ ವಿಡಿಯೋ ಸಂವಾದ ನಡೆಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ವಿಡಿಯೋ ಸಂವಾದ ಸಂದರ್ಭದಲ್ಲಿ ಇಲಾಖೆಯ ಆಯುಕ್ತ ಡಾ. ಕೆ.ಜಿ. ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ