ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಾರ್ಟಿ ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಎಪಿ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಕುಮಾರ್, ಗ್ರಾಮ ಪಂಚಾಯಿತಿ ನೌಕರರು ಮೂಲಭೂತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಬಿಜೆಪಿ ಸರ್ಕಾರ ಇತ್ತ ಗಮನ ಹರಿಸದಿರುವುದು ದುರಂತ ಎಂದರು.
ಇನ್ನು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಚುನಾವಣೆ ಗೆಲ್ಲುವುದೊಂದೇ ಮುಖ್ಯವಾಗಿದ್ದು, ಜನಸಾಮಾನ್ಯರು ಹಾಗೂ ನೌಕರರ ಹಿತವು ಅವರಿಗೆ ಆದ್ಯತೆಯ ವಿಷಯವೇ ಆಗಿಲ್ಲ. ರಾಜ್ಯದಲ್ಲಿ ಆಮ್ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬಂದರೆ ಗ್ರಾಮ ಪಂಚಾಯಿತಿ ನೌಕರರ ಎಲ್ಲ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
![](https://vijayapatha.in/wp-content/uploads/2023/02/7-Jan-AAP-Gp-Employees-protest-300x161.jpg)
ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಗಳಿಗೆ ಸಿ ದರ್ಜೆ ಸ್ಥಾನಮಾನ ನೀಡಬೇಕು. ಟೆಂಡರ್, ಕ್ಲೀನರ್, ವಾಟರ್ ಮ್ಯಾನ್ ಮುಂತಾದವರಿಗೆ ಡಿ ದರ್ಜೆ ಸ್ಥಾನಮಾನ ನೀಡಬೇಕು.
ಜೊತೆಗೆ, ಇವರಿಗೆ ನಗರ ಹಾಗೂ ಪಟ್ಟಣ ಪಂಚಾಯಿತಿಯಂತೆ ಸೇವಾ ನಿಯಮಾವಳಿ ರಚಿಸಬೇಕು ಹಾಗೂ ಕನಿಷ್ಠ ವೇತನದ ಬದಲು ವೇತನ ಶ್ರೇಣಿಯನ್ನು ನಿಗದಿಪಡಿಸಬೇಕು. ನೌಕರರು ಹಾಗೂ ಅವರನ್ನು ಅವಲಂಬಿಸಿದವರಿಗೆ ಆರೋಗ್ಯ ಭದ್ರತೆ ಒದಗಿಸಬೇಕು. ಗ್ರಾಮ ಪಂಚಾಯಿತಿ ನೌಕರರು ಇನ್ನೂ ಅನೇಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಶೀಘ್ರವೇ ಈಡೇರಿಸಬೇಕು ಎಂದು ಡಾ. ಸತೀಶ್ ಕುಮಾರ್ ಒತ್ತಾಯಿಸಿದರು.
ಎಎಪಿ ಮುಖಂಡರಾದ ಮಾಗಡಿ ಕ್ಷೇತ್ರದ ಸ್ಪರ್ಧಾಕಾಂಕ್ಷಿ ರವಿಕಿರಣ್ ಮತ್ತಿತರರು ಭಾಗವಹಿಸಿದ್ದರು.
![](https://vijayapatha.in/wp-content/uploads/2024/02/QR-Code-VP-1-1-300x62.png)