ಮೈಸೂರು: ಬೆಂಗಳೂರು- ಮೈಸೂರು ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸದಿರುವುದೆ ವಾಹನಗಳ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ನಿನ್ನೆ (ಜು.26) ಮಾತನಾಡಿದ ಅವರು, ಕಾಮಗಾರಿ ಅಪೂರ್ಣವಾಗಿದೆ, ಹೆದ್ದಾರಿಯಲ್ಲಿ ಉಂಟಾಗುವ ಅಪಘಾತ, ಸಾವು ನೋವುಗಳನ್ನು ತಡೆಯಲೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಈ ಅಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.
ಹೆದ್ದಾರಿಯಲ್ಲಿ 20 ರಿಂದ 25 ಅಪಘಾತ ವಲಯಗಳು ಇವೆ. ಎಲ್ಲ ಕಡೆಗೆ ನಾನು ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ ಎಂದರು.
ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಹಲವಾರು ಕಾಮಗಾರಿಗಳು ಬಾಕಿ ಉಳಿದಿವೆ. ಪ್ರಮುಖವಾಗಿ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಆ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅವುಗಳಲ್ಲಿ ಸಿಸಿ ಕ್ಯಾಮರಾಗಳ ಅಳವಡಿಕೆ ಬಾಕಿ ಇದೆ. ಈಗಾಗಲೇ ಹೆದ್ದಾರಿ ಉದ್ಘಾಟನೆ ಆಗಿದೆ. ಬಾಕಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ತಂದು ಕೆಲಸ ಮಾಡಿಸುವುದು ಎನ್ಎಚ್ಎಐ ಅಧಿಕಾರಿಗಳ ಕೆಲಸ ಎಂದರು.
ಇನ್ನು ಸರ್ಕಾರದ ನಿಯಮಗಳ ಪ್ರಕಾರ ಪ್ರಸ್ತಾವನೆ, ಟೆಂಡರ್ ಮಾಡಿ ಕೆಲಸ ಮಾಡಿಸಬೇಕಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪೊಲೀಸರನ್ನು ಕೇಳಿ ಕಾಮಗಾರಿ ಮಾಡಿಲ್ಲ. ಸಮಸ್ಯೆ ಆದಾಗ ಸರಿ ಮಾಡಿ ಅಂತ ನಮ್ಮನ್ನು ಕರೆಯುತ್ತಾರೆ ಎಂದು ಹೇಳಿದರು.
ಬೆಂಗಳೂರಿನಿಂದ ಮೈಸೂರುವರೆಗಿನ 118.6 ಕಿಮೀ ವ್ಯಾಪ್ತಿಯಲ್ಲಿ 20ರಿಂದ 25 ಅಪಘಾತ ಸ್ಥಳಗಳನ್ನು ಗಮನಿಸಿದ್ದೇನೆ. NHAI ಪ್ರಾಯೋಗಿಕ ಆಧಾರದ ಮೇಲೆ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತು ಹಚ್ಚುವ ಕ್ಯಾಮೆರಾವನ್ನು ಸ್ಥಾಪಿಸಿದೆ ಅದು ಸಾಕಾಗುವುದಿಲ್ಲ. ಅಪಘಾತಗಳನ್ನು ತಡೆಗಟ್ಟಲು ಅವರು ಎಲ್ಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದರು.
ಶೀಘ್ರವೇ ವರದಿ ಸಲ್ಲಿಕೆ: ಇತ್ತೀಚೆಗೆ ಮೂರು ದಿನಗಳ ಕಾಲ ಎಕ್ಸ್ಪ್ರೆಸ್ವೇ ಪರಿಶೀಲಿಸಿದ ತಜ್ಞರ ತಂಡವು ಸಮಸ್ಯೆಗಳ ಬಗ್ಗೆ ವೀಕ್ಷಣೆ ಮಾಡಿದ್ದು, ಶೀಘ್ರವೇ ವರದಿ ಸಲ್ಲಿಸಲಿದೆ. ವರದಿ ಆಧರಿಸಿ ಎನ್ಎಚ್ಎಐ ಕಾಮಗಾರಿ ಕೈಗೆತ್ತಿಕೊಳ್ಳಲಿದೆ ಎಂದು ಎಡಿಜಿಪಿ ತಿಳಿಸಿದ್ದಾರೆ.
ನಾವು ಹೆದ್ದಾರಿಯಲ್ಲಿ ಕನಿಷ್ಠ ಅವಶ್ಯಕತೆಗಳನ್ನು ಪೂರೈಸಲು NHAI ಅಧಿಕಾರಿಗಳಿಗೆ ಒತ್ತಡ ಹೇರುತ್ತಿದ್ದೇವೆ. ಒಂದು ವೇಳೆ ಅವರು ಅವಶ್ಯಕತೆ ಈಡೇರಿಸಲು ವಿಫಲವಾದರೆ ಅಥವಾ ದೊಡ್ಡ ಅಪಘಾತ ಸಂಭವಿಸಿದಲ್ಲಿ ನಿರ್ಲಕ್ಷ್ಯದ ಅಡಿಯಲ್ಲಿ ಅವರನ್ನು ಬಂಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಎಕ್ಸ್ಪ್ರೆಸ್ ಹೈವೇ ಉದ್ಘಾಟನೆಗೂ ಮುನ್ನವೇ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಬೇಕಿತ್ತು, ಆದರೆ ಈಗ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಅವಕಾಶವಿರುವುದರಿಂದ ಎನ್ಎಚ್ಎಐ ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ತಿಳಿಸಿದರು.
![](https://vijayapatha.in/wp-content/uploads/2024/02/QR-Code-VP-1-1-300x62.png)