NEWSನಮ್ಮರಾಜ್ಯರಾಜಕೀಯ

ಯಾವುದೇ ಕಾರಣಕ್ಕೂ ಬೆಂಗಳೂರನ್ನು ಮತ್ತಷ್ಟು ವಿಸ್ತರಿಸಲು ಅವಕಾಶ ನೀಡಬೇಡಿ: ಸಿಎಂಗೆ ಮುಖ್ಯಮಂತ್ರಿ ಚಂದ್ರು ಪತ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಮಸಮಾಜ ನಿರ್ಮಾಣದ ಸದುದ್ದೇಶ ಹೊಂದಿರುವುದಾಗಿ ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯಂತಹ ಅಸಮಾನ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬಾರದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲೇನಿದೆ?: ರಾಜ್ಯದ ಜನರ ತೆರಿಗೆ ಹಣವನ್ನು ಕೇವಲ ಬೆಂಗಳೂರನ್ನು ವಿಸ್ತರಿಸಲು ವಿನಿಯೋಗಿಸಿದರೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ ಭಾಗದ ಜನರು ಏನು ಮಾಡಬೇಕು? ಈಗಾಗಲೇ ಹೆಚ್ಚಿನ ಯುವಕರು ಉದ್ಯೋಗಕ್ಕಾಗಿ ದೂರದ ಬೆಂಗಳೂರನ್ನು ಆಯ್ಕೆ ಮಾಡುವ ಬದಲು ಹೈದರಾಬಾದ್‌, ಪುಣೆ, ಮುಂಬೈ, ಪಣಜಿಯಂತಹ ನೆರೆ ರಾಜ್ಯದ ನಗರಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯಿಂದ ಯುವಕರೆಲ್ಲ ಬೇರೆ ರಾಜ್ಯಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ನೂತನ ವಿಮಾನ ನಿಲ್ದಾಣವನ್ನು ತುಮಕೂರು ಅಥವಾ ರಾಮನಗರದಲ್ಲಿ ನಿರ್ಮಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದೂ ಕೂಡ ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯ ಭಾಗವಾಗಿದೆ. ಮಧ್ಯ ಕರ್ನಾಟಕಕ್ಕೆ ಪ್ರಾಶಸ್ತ್ಯ ನೀಡಬೇಕಿದೆ. ನೂತನ ವಿಮಾನ ನಿಲ್ದಾಣವು ಮಧ್ಯ ಕರ್ನಾಟಕ ಭಾಗದಲ್ಲಿ ನಿರ್ಮಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಇಡೀ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿದ್ದಾರೆಯೋ ಅಥವಾ ಕೇವಲ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿಗಳಿಗೆ ಸೀಮಿತಗೊಂಡ ಉಪಮುಖ್ಯಮಂತ್ರಿಯಾಗಿದ್ದಾರೆಯೋ ಎಂಬ ಅನುಮಾನ ಮೂಡುತ್ತಿದೆ.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಹೊರಟಿರುವ ನಿರ್ಧಾರ ಆಕ್ಷೇಪಾರ್ಹವಾಗಿದೆ. ಕೇವಲ ಹೆಸರು ಬದಲಿಸುವುದರಿಂದ ಅಭಿವೃದ್ಧಿಯಾಗುವುದಿದ್ದರೆ ಕರ್ನಾಟಕದ ಹೆಸರನ್ನೇ ಬೆಂಗಳೂರು ಎಂದು ಮಾಡುವುದು ಒಳಿತಲ್ಲವೇ? ಆಗ ಇಡೀ ಕರ್ನಾಟಕವೇ ಅಭಿವೃದ್ಧಿಯಾದಂತೆ ಆಗುತ್ತದೆಯಲ್ಲವೇ?

ಡಿ.ಕೆ. ಶಿವಕುಮಾರ್‌ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿರುವುದು ಕೇವಲ ಜಿಲ್ಲೆಯ ಹೆಸರು ಬದಲಾವಣೆಯಾಗಿಲ್ಲ, ಕರಾಳ ರಿಯಲ್‌ ಎಸ್ಟೇಟ್‌ ದಂಧೆಗೆ ಪರವಾನಗಿ ಪಡೆಯುವ ಪ್ರಸ್ತಾವನೆಯಾಗಿದೆ.

ರಾಮನಗರವನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸಿ, ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಿದರೆ ಕೆಲವೇ ಕೆಲವು ಭೂಮಾಲೀಕರಿಗೆ ಅನುಕೂಲವಾಗಲಿದೆಯೇ ಹೊರತು ಸಾಮಾನ್ಯ ಜನರಿಗೆ ಯಾವುದೇ ಉಪಯೋಗವಿಲ್ಲ. ತಮ್ಮ ಆಧಾರ್‌ ಸೇರಿದಂತೆ ಮತ್ತಿತರ ದಾಖಲೆ ಪತ್ರಗಳಲ್ಲಿ ಜಿಲ್ಲೆ ಹೆಸರನ್ನು ತಿದ್ದಿಸುವ ಸಲುವಾಗಿ ಸರ್ಕಾರಿ ಕಚೇರಿಗಳನ್ನು ಅಲೆಯಬೇಕಾದ ಪರಿಸ್ಥಿತಿ ಬಂದೊದಗುತ್ತದೆ.

ನಿಜಕ್ಕೂ ಅಭಿವೃದ್ಧಿಪಡಿಸುವುದಿದ್ದರೆ, ಹೊಸ ಇಂಡಸ್ಟ್ರಿಗಳನ್ನು ಸ್ಥಾಪಿಸಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದಿದ್ದರೆ, ಜನಸಾಮಾನ್ಯರಿಗೆ ನೆರವಾಗುವುದಿದ್ದರೆ ಹುಬ್ಬಳ್ಳಿ-ಧಾರವಡ ಅವಳಿ ನಗರಗಳಂತೆ ರಾಮನಗರ-ಚನ್ನಪಟ್ಟಣವನ್ನು ಅಭಿವೃದ್ಧಿ ಪಡಿಸಬಹುದು. ಆದರೆ ಆ ಭಾಗದ ಜನರನ್ನು ಉದ್ಧರಿಸುವ ಯಾವ ಯೋಚನೆಯೂ ಶಿವಕುಮಾರ್‌ ಅವರಿಗೆ ಇದ್ದಂತಿಲ್ಲ.

ಇನ್ನು ಅಲ್ಲಿನ ಭೂಮಾಲೀಕರಿಗೆ ಲಾಭವನ್ನು ಮಾಡಿಕೊಡುವ ಮೂಲಕ ತನ್ನ ರಾಜಕೀಯ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳುವ ತಂತ್ರವನ್ನು ಹೆಣೆದಿದ್ದಾರೆ. ಈ ಭಾಗವು ಹೆಚ್ಚಿನ ರಾಜಕಾರಣಿಗಳ ಲ್ಯಾಂಡ್‌ ಬ್ಯಾಂಕ್‌ ಆಗಿರುವುದರಿಂದ ಅವರಿಗೆ ಅನುಕೂಲ ಮಾಡಿಕೊಟ್ಟರೆ ತನ್ನ ಭವಿಷ್ಯದ ರಾಜಕೀಯ ಆಕಾಂಕ್ಷೆಯನ್ನು ಈಡೇರಿಸಿಕೊಳ್ಳಬಹುದು ಎಂಬ ಕೇಡು ಆಲೋಚನೆ ಹೊಂದಿದ್ದಾರೆ.

ರಾಮನಗರ, ಚನ್ನಪಟ್ಟಣಗಳನ್ನು ಬೆಂಗಳೂರಿಗೆ ಸೇರಿಸುವ ಪ್ರಸ್ತಾವವನ್ನು ತಿರಸ್ಕರಿಸಬೇಕು. ಹುಬ್ಬಳ್ಳಿ-ಧಾರವಾಡ ಮಾದರಿಯಲ್ಲಿ ಉಭಯ ನಗರಗಳನ್ನು ಅಭಿವೃದ್ಧಿ ಪಡಿಸಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂಬ ಅಂಶಗಳನ್ನು ಮುಖ್ಯಮಂತ್ರಿ ಚಂದ್ರು ತಮ್ಮ ಪತ್ರವನ್ನು ಕಟು ಪದಗಳಿಂದ ಟೀಕಿಸಿ ಬರೆದಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ