NEWSಕೃಷಿ

ರೈತರಿಂದ ಖರೀದಿಸಿ ದುಪ್ಪಟ್ಟು ಬೆಲೆಗೆ  ಮಾರಾಟ ಮಾಡಿದಲ್ಲಿ ಕಠಿಣ ಕ್ರಮ

ಅಂತರಸನಹಳ್ಳಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕೊರೊನಾ ಸೋಂಕು ಹರಡದಂತೆ ಜಾರಿಯಲ್ಲಿರುವ ಲಾಕ್ಡೌನ್ ಸಂದರ್ಭದಲ್ಲಿ ರೈತರಿಂದ  ಖರೀದಿಸಿದ ಹಣ್ಣು, ತರಕಾರಿಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುವ ವರ್ತಕರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಎಚ್ಚರಿಕೆ ನೀಡಿದರು.

ನಗರದ ಅಂತರಸನಹಳ್ಳಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರೈತರು ಬೆಳೆದಂತಹ ತರಕಾರಿ, ಹಣ್ಣುಗಳನ್ನು ನೇರವಾಗಿ ಮಾರಾಟ ಮಾಡಲು  ಎಪಿಎಂಸಿ.ಗೆ ತರುವ ಸಮಯದಲ್ಲಿ ಚೆಕ್ಪೋಸ್ಟ್ಗಳಲ್ಲಿ ಹಾಗು  ಪೊಲೀಸರಿಂದ ಅಡಚಣೆ ಉಂಟಾಗಬಾರದೆಂದು   ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಬಂಧಿಸಿದವರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ.  ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಎಪಿಎಂಸಿಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರದ ಕಟ್ಟುನಿಟ್ಟಿನ ಆದೇಶವಿದ್ದರೂ ಸಹ ರಾಜ್ಯದ ಕೆಲವು ಕಡೆ ಚೆಕ್ಪೋಸ್ಟ್ಗಳಲ್ಲಿ ರೈತರು ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ.  ರೈತರು ಯಾವುದೇ ಬೆಳೆ ಬೆಳೆಯಲಿ, ಮಾರಕಟ್ಟೆಗೆ ತಂದು ಮಾರಾಟ ಮಾಡಲು ಯಾವುದೇ ರೀತಿ ಸಮಸ್ಯೆಯಾಗಬಾರದು.  ರೈತರಿಂದ ಖರೀದಿಸಿ ಹಣ್ಣು, ತರಕಾರಿಯನ್ನು ವರ್ತಕರು   ತಮಗಿಷ್ಟ ಬಂದ ದರದಲ್ಲಿ ಮಾರಾಟ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.

ಮುಂಜಾಗ್ರತಾ ಕ್ರಮವಾಗಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾರಾಟ ಮಾಡಲು ಬರುವ ಪ್ರತಿಯೊಬ್ಬ ರೈತರಿಗೂ ಕಡ್ಡಾಯವಾಗಿ ಮಾಸ್ಕ್ ವಿತರಣೆ, ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಬೇಕು.  ಎಪಿಎಂಸಿಗಳಲ್ಲಿ ಸಾಮಾಜಿಕ ಅಂತರ ಕಾಪಾಡಲು ಸಮಸ್ಯೆಯಾಗುತ್ತಿದ್ದು, ರೈತರಿಗೆ ಅರಿವು ಮೂಡಿಸುತ್ತಿರುವುದರಿಂದ ಸಮಸ್ಯೆ ಬಗೆಹರಿಯುತ್ತಿದೆ.  ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾರ್ವಜನಿಕರೂ ಸಹ ಸಹಕರಿಸಬೇಕೆಂದು ಮನವಿ ಮಾಡಿದರು.

ರೈತರಿಂದ ಖರೀದಿಸಿದ ಹಣ್ಣು, ತರಕಾರಿಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು,  ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ಮಾಹಿತಿ ಕಲೆ ಹಾಕಲು   ಅಧಿಕಾರಿಗಳಿಗೆ ಸೂಚಿಸಲಾಗಿದೆ.  ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೆನ್ನೆ ಬೆಂಗಳೂರಿನ ತರಕಾರಿ, ಹಣ್ಣಿನ ಅಂಗಡಿಗಳಿಗೆ ಭೇಟಿ ನೀಡಿ ಎಪಿಎಂಸಿ ಮಾರುಕಟ್ಟೆ ದರ ಹಾಗೂ ವರ್ತಕರು ಮಾರಾಟ ಮಾಡುವ ದರಗಳ   ವ್ಯತ್ಯಾಸದ ಮಾಹಿತಿ ಪಡೆದಿದ್ದಾರೆ.  ದುಪ್ಪಟ್ಟು ಹಾಗೂ ಅದಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಅವಕಾಶ ನೀಡುವುದಿಲ್ಲವೆಂದು ತಿಳಿಸಿದರು.

ರೈತರು ಬೆಳೆದ ಬೆಳೆ ನಷ್ಟವಾಗದೆ ಮಾರಾಟವಾಗಬೇಕೆನ್ನುವ ದೃಷ್ಟಿಯಿಂದ ಮನೆ-ಮನೆಗೆ ಹೋಗಿ ಮಾರಾಟ ಮಾಡಲು ರೈತರಿಗೆ ಅವಕಾಶ ಮಾಡಿಕೊಡಲಾಗಿದೆ.  ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಬಾರದೆನ್ನುವ ನಿಟ್ಟಿನಲಿ ಜನವಾಸಿ ಪ್ರದೇಶಗಳಿಗೆ ನೇರವಾಗಿ ಸ್ವಂತ/ಬಾಡಿಗೆ ವಾಹನಗಳಲ್ಲಿ ರೈತರು ಹೋಗಿ ಮಾರಾಟ ಮಾಡಬಹುದಾಗಿದೆ ಎಂದು ತಿಳಿಸಿದರು.

ಲಾಕ್ಡೌನ್ ಘೋಷಣೆಯಾಗಿರುವ ಸಂದರ್ಭದಲ್ಲಿ ಆಂಧ್ರಪ್ರದೇಶದ ಗಡಿಭಾಗವನ್ನು ಹಾದು ಬರುವಂತಹ ಪಾವಗಡ ತಾಲೂಕಿನ ರೈತರು ತಮ್ಮ ಬೆಳೆಯನ್ನು ಎಪಿಎಂಸಿ.ಗೆ ತರಲು ಸಮಸ್ಯೆಯಾಗುತ್ತಿದೆ.  ಆಂಧ್ರದ ಪೊಲೀಸರು ಜಿಲ್ಲೆಗೆ ಪ್ರವೇಶಿಸಲು ಅಡ್ಡಿಯುಂಟು ಮಾಡುತ್ತಿದ್ದಾರೆಂಬ ಪ್ರಶ್ನೆಗೆ ಸ್ಪಂದಿಸಿದ ಸಚಿವರು ಎಪಿಎಂಸಿಯಲ್ಲಿ ಮಾರಾಟ ಮಾಡುವ ಎಲ್ಲ ರೈತರಿಗೂ ಕೃಷಿ ಇಲಾಖೆಯಿಂದ ಪಾಸ್ ನೀಡಲಾಗುತ್ತಿದ್ದು, ಅಂತರ ರಾಜ್ಯಗಳಲ್ಲೂ ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿರುವುದರಿಂದ  ಈ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ