ಬೆಂಗಳೂರು ಗ್ರಾಮಾಂತರ: ಸರ್ಕಾರಿ ಜಮೀನು ಹಾಗೂ ಅರಣ್ಯದ ಅಂಚಿನ ಜಾಗಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿರುವ ಅರ್ಹ ಬಡ ಜನರನ್ನು ಅಲ್ಲಿಂದ ಎತ್ತಂಗಡಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವರಾದ ಆರ್.ಅಶೋಕ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಸಹಯೋಗದಲ್ಲಿ ಇಂದು ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ರಾಗಿಯ ರಾಶಿಪೂಜೆ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು,
ಮನೆಗಳನ್ನು ನಿರ್ಮಿಸಿಕೊಂಡಿರುವವರು 94 ಸಿ ಹಾಗೂ 94 ಸಿಸಿ ಅಡಿ ಅವರು ಅರ್ಜಿ ನೀಡಿದರೆ ಅವರಿಗೆ ನಿವೇಶನದ ಹಕ್ಕುಗಳನ್ನು ನೀಡಲಾಗುವುದು. ಬರುವ ತಿಂಗಳಿನಿಂದ ಪಡಿತರ ವಿತರಣೆ ಪ್ರಮಾಣವನ್ನು ಪುನಃ 10 ಕೆಜಿಗೆ ಹೆಚ್ಚಿಸಲಾಗುವುದು. ಹೊಸಕೋಟೆ ನಗರದವರೆಗೆ ಮೆಟ್ರೊ ಹಾಗೂ ಕಾವೇರಿ ನೀರು ಪೂರೈಕೆ ವಿಸ್ತರಿಸುವ ಕಾರ್ಯವನ್ನು ಸಚಿವಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬರುತ್ತಿದ್ದ ಪಡಿತರ ಸ್ಥಗಿತವಾಗಿರುವುದರಿಂದ ಪಡಿತರ ವಿತರಣೆ ಪ್ರಮಾಣ ಇಳಿಕೆಯಾಗಿದೆ. ಪುನಃ ಈ ಪ್ರಮಾಣ ಹೆಚ್ಚಿಸಲು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು. ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪ್ರತಿ ತಿಂಗಳು ಸುಮಾರು 10 ಸಾವಿರ ಕೋಟಿ ರೂ. ಪಿಂಚಣಿಗಳ ವಿತರಣೆಯಾಗುತ್ತಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರು ತಮ್ಮ ಜಮೀನುಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರೆ ತಕ್ಷಣ ಭೂ ಪರಿವರ್ತನೆ ಮಾಡಿಕೊಡಲು ಸುಧಾರಣೆ ಕಾಯ್ದೆ ತರಲಾಗಿದೆ. ಯುವಕರು, ವಿದ್ಯಾವಂತರು, ಐಟಿಬಿಟಿಗಳಲ್ಲಿ ತೊಡಗಿಸಿಕೊಂಡವರು ರಾಜ್ಯದ ಯಾವುದೇ ಭಾಗದಲ್ಲಿಯಾದರೂ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಲಾಗಿದೆ. ಕೃಷಿಯಲ್ಲಿ ಆಧುನಿಕತೆ ತರುವ ಉದ್ದೇಶದಿಂದ ಹಿಂದೆ ಇದ್ದ ಕಾಯ್ದೆಗಳನ್ನು ರದ್ದುಗೊಳಿಸಲಾಗಿದೆ.
ತಾಂಡಾ, ಮುಜುರೆ, ಹಟ್ಟಿ, ಕ್ಯಾಂಪ್ಗಳಿಗೆ ಕಂದಾಯ ಹಕ್ಕುಗಳನ್ನು ನೀಡಿ ಗ್ರಾಮಗಳನ್ನಾಗಿ ಪರಿವರ್ತಿಸಿ ಬಡಜನರಿಗೆ ನ್ಯಾಯ ಒದಗಿಸಲಾಗುತ್ತಿದೆ. ಎಸ್.ಸಿ. ಹಾಗೂ ಎಸ್.ಟಿ.ಮೀಸಲು ಹೆಚ್ಚಳಕ್ಕೆ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ. ಹಿಂದುಳಿದ ಲಿಂಗಾಯತರು ಮತ್ತು ಒಕ್ಕಲಿಗರಿಗೂ ನ್ಯಾಯ ಒದಗಿಸಲು ಹೊಸ ಪ್ರವರ್ಗ ಸೃಜನೆಗೆ ಮುಂದಾಗಿರುವುದು ಸರ್ಕಾರದ ಸಾಮಾಜಿಕ ನ್ಯಾಯ ಬದ್ಧತೆಗೆ ಸಾಕ್ಷಿಯಾಗಿದೆ.
ಬೆಂಗಳೂರಿಗೆ ಹೊಂದಿಕೊಂಡು ಅಭಿವೃದ್ಧಿ ಹೊಂದುತ್ತಿರುವ ಹೊಸಕೋಟೆಯವರೆಗೂ ಮುಂಬರುವ ದಿನಗಳಲ್ಲಿ ಮೆಟ್ರೋ ರೈಲು ವಿಸ್ತರಣೆ ಮಾಡಲಾಗುವುದು. ನಿವೇಶನ ರಹಿತರಿಗೆ ಹಕ್ಕುಪತ್ರ ನೀಡುವ ಸಂದರ್ಭದಲ್ಲಿ ಈಗಾಗಲೇ ಸಾಗುವಳಿ ಚೀಟಿ ಹೊಂದಿರುವ ಜನರ ಜಮೀನುಗಳನ್ನು ಪಡೆಯದಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಕಂದಾಯ ಸಚಿವರು ಬದಲಾಗಬಹುದು ಆದರೆ, ಜಿಲ್ಲಾಧಿಕಾರಿಗಳು ನಿರಂತರವಾಗಿ ಇರುತ್ತಾರೆ. ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು ಎಂಬ ಮಹತ್ವಾಕಾಂಕ್ಷೆಯಿಂದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಶೀರ್ಷಿಕೆ ನೀಡಲಾಗಿದೆ. ಈ ಕಾರ್ಯಕ್ರಮ ಇರದಿದ್ದರೆ ಯಾವುದೇ ಜಿಲ್ಲಾಧಿಕಾರಿಗಳು ಗ್ರಾಮಗಳಿಗೆ ಬಂದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಿರಲಿಲ್ಲ.
ರಾಜ್ಯದ ಎಲ್ಲ ಕಡೆ ಈ ಕಾರ್ಯಕ್ರಮ ನಡೆಯುತ್ತಿರುವುದರಿಂದ ಅನೇಕ ಸೌಕರ್ಯಗಳು ಬಡ, ಅರ್ಹ ಫಲಾನುಭವಿಗಳಿಗೆ ಅವರಿರುವ ಕಡೆಗಳಲ್ಲಿಯೇ ದೊರೆಯುತ್ತಿವೆ ಎಂದರು. ಇದುವರೆಗೆ ಸುಮಾರು 15 ಗ್ರಾಮವಾಸ್ತವ್ಯ ಕೈಗೊಳ್ಳಲಾಗಿದ್ದು ಸುಮಾರು 1 ಲಕ್ಷ 18 ಸಾವಿರಕ್ಕೂ ಅಧಿಕ ಫಲಾನುಭವಿಗಳಿಗೆ ವೈಯಕ್ತಿಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
![](https://vijayapatha.in/wp-content/uploads/2024/02/QR-Code-VP-1-1-300x62.png)