ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಮಸ್ಯೆ ಕುರಿತು ಚರ್ಚಿಸುವ ಸಲುವಾಗಿ KSRTC ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಾಳೆ (ನ.30) ಕರೆಯಲಾಗಿದೆ.
ನಾಳೆ ಮಧ್ಯಾಹ್ನ 3 ಗಂಟೆಗೆ ನಿಗಮದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಸಭೆ ಆಯೋಜಿಸಿದ್ದು ಪ್ರತಿ ಸಂಘಟನೆಯಿಂದ ಇಬ್ಬರಂತೆ ಹಾಜರಾಬೇಕು ಎಂದು ನಿಗಮದ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಸಭೆಗೆ ಪ್ರಮುಖವಾಗಿ ಕೆಎಸ್ಆರ್ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಶನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಫೆಡರೇಶನ್, ಕರ್ನಾಟಕ ರಸ್ತೆ ಮಜ್ದೂರ್ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ನಾಳೆ ನಡೆಯುವ ಸಭೆಯಲ್ಲಿ ಬಹಳ ಮುಖ್ಯವಾಗಿ ನೌಕರರ ಪರ ಸಂಘಟನೆಗಳ ಪದಾಧಿಕಾರಿಗಳಿಂದ ವೇತನ ಪರಿಷ್ಕರಣೆ ಮಾಡುವ ಕುರಿತು ಸಲಹೆ ಸೂಚನೆಗಳನ್ನು ಪಡೆಯಬಹುದು. ಜತೆಗೆ ಮುಷ್ಕರದ ವೇಳೆ ಆಗಿರುವ ಪೊಲೀಸ್ ಪ್ರಕರಣಗಳು ಸೇರಿ ನೌಕರರು ಅನುಭವಿಸುತ್ತಿರುವ ಬಹುತೇಕ ಸಮಸ್ಯೆಗಳಿಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.
ಇನ್ನು ನೌಕರರ ಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ತುಂಬ ಕಾಳಜಿ ತೋರುತ್ತಿದ್ದು, ಪ್ರತಿ ನಾಲ್ಕು ವರ್ಷಕೊಮ್ಮೆ ವೇತನ ಪರಿಷ್ಕರಣೆ ವೇಳೆ ಆಗುತ್ತಿರುವ ಹೋರಾಟಕ್ಕೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲೂ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.
![](https://vijayapatha.in/wp-content/uploads/2022/11/29-Nov-ksrtc-1-251x300.jpg)
![](https://vijayapatha.in/wp-content/uploads/2024/02/QR-Code-VP-1-1-300x62.png)