NEWSನಮ್ಮಜಿಲ್ಲೆನಮ್ಮರಾಜ್ಯ

ನಂದಿ ಬೆಟ್ಟದಲ್ಲಿ 14ನೇ ಸಚಿವ ಸಂಪುಟ ಸಭೆ: ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ

ವಿಜಯಪಥ ಸಮಗ್ರ ಸುದ್ದಿ
  • ಎತ್ತಿನಹೊಳೆ ಯೋಜನೆಗೆ ಒಟ್ಟು 23,251 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17,147 ಕೋಟಿ ರೂ. ಖರ್ಚಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಬೆಳಗ್ಗೆ ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ ನಂತರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಎತ್ತಿನಹೊಳೆ ಯೋಜನೆಯಡಿ 24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ನಿರ್ಧರಿಸಿದೆ ಎಂದರು.

ಇನ್ನು 9,807 ಕೋಟಿ ರೂ. ಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್‌ನ‌ ಕೆಲಸ 85% ಮಗಿದಿದೆ. ಹೆಚ್ಚುವರಿಯಾಗಿ ಇದಕ್ಕೆ 8,000 ಕೋಟಿ ರೂ.ಗಳು ಬೇಕಾಗಿದೆ. ಬಾಕಿ ಉಳಿದಿರುವುದು 6,000 ಚಿಲ್ಲರೆ ಕೋಟಿ. ಎತ್ತಿನಹೊಳೆ ಯೋಜನೆಯಿಂದ ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ವಿವರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ ಗೊಳಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಶುಭಾಶಯ ಕೋರಿದ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ.

ಬೆಂಗಳೂರು ಭಾಗದ ಜಿಲ್ಲೆಗಳ 31 ವಿಷಯಗಳು ಚರ್ಚೆಯಾಗಿ 2050 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1,125.25 ಕೋಟಿ ರೂ. ಮಂಜೂರು ಮಾಡಲಾಗಿದೆ. ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಬೇತಿಗೆ 10 ಕೋಟಿ ರೂ. ವೆಚ್ಚದ ಎರಡು ವಸತಿ ಶಾಲೆಗಳನ್ನು ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಇನ್ನು ಬೆಂಗಳೂರು ಕೇಂದ್ರ ವಿವಿಗೆ ದಿವಂಗತ ಮಾಜಿ ಪ್ರಧಾನಿ “ಡಾ.ಮನಮೋಹನ್ ಸಿಂಗ್ ಅವರ ಹೆಸರಿಡಲು ತೀರ್ಮಾನ ಮಾಡಲಾಯಿತು. ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ. ಜತೆಗೆ ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ ಎಂದರು.

ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಲಾಗಿದೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಎಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು / ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಗೃಹ ಮಂತ್ರಿ ಎಚ್.ಕೆ. ಪಾಟೀಲ್, ಸಚಿವ ಮುನಿಯಪ್ಪ, ಎಂ.ಸಿ. ಸುಧಾಕರ್, ಬೈರತಿ ಸುರೇಶ್, ಸಚಿವ ಸಂಪುಟ ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!