ಕರ್ನಾಟಕ ಸರ್ಕಾರದ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ: ಸಂಪುಟ ತೀರ್ಮಾನ

ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡುವ ಬಗ್ಗೆ ಸರ್ಕಾರ ಮಹತ್ವದ ನಿರ್ಣಯವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿದೆ.

ಹೌದು! 2027ರ ಡಿಸೆಂಬರ್ 31 ರವರೆಗೆ ಸರ್ಕಾರ ಹೊರಡಿಸಿರುವ ಎಲ್ಲ ಅಧಿಸೂಚನೆಗಳಿಗೆ ಅನ್ವಯವಾಗುವಂತೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಈ ಸಚಿವ ಸಂಪುಟ ಸಭೆಯ ನಿರ್ಧಾರದಿಂದ ಸಾಮಾನ್ಯ ವರ್ಗಕ್ಕೆ ಈಗ ಇರುವ 35 ವರ್ಷದ ವಯೋಮಿತಿ ಬದಲಿಗೆ ಅದು 40 ವರ್ಷಕ್ಕೆ ಅನ್ವಯ ಆಗುವಂತೆ ವಿಸ್ತರಣೆಯಾಗಿದೆ. ಇನ್ನು ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಈಗ ಇರುವ 38 ವರ್ಷ ವಯೋಮಿತಿ 43 ವರ್ಷಗಳಿಗೆ ಅನ್ವಯವಾಗುವಂತೆ ವಿಸ್ತರಣೆ ಆಗಿದೆ.
ಗೋ ಬ್ಯಾಕ್ ಗವರ್ನರ್ ನಿರ್ಣಯ ಮಾಡಲು ಚರ್ಚೆ: ಇಂದು ನಡೆದ ಜಂಟಿ ಅಧಿವೇಶನದಲ್ಲಿ ಸರ್ಕಾರ ಭಾಷಣ ಓದದೇ ತೆರಳಿದ ರಾಜ್ಯಪಾಲರ ನಡೆಗೆ ಸಚಿವ ಸಂಪುಟ ಸಭೆಯಲ್ಲಿ ಅಸಮಾಧಾನ ಹೊರಹಾಕಲಾಗಿದೆ. ಗೋ ಬ್ಯಾಕ್ ಗವರ್ನರ್ ನಿರ್ಣಯ ಮಾಡಲು ಚರ್ಚೆ ನಡೆಸಲಾಗಿದೆ. ರಾಜ್ಯಪಾಲರನ್ನ ವಾಪಸ್ ಕರೆಸಿಕೊಳ್ಳುವಂತೆ ನಿರ್ಣಯ ತೆಗೆದುಕೊಳ್ಳುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ.
ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಸಂಬಂಧ ಚರ್ಚೆ ನಡೆಸಲಾಗಿದೆ. ಗವರ್ನರ್ ಗೋ ಬ್ಯಾಕ್ ಅಭಿಯಾನ ನಡೆಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಇಂದಿನ ಘಟನೆಯನ್ನು ರಾಜ್ಯ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ.
ಇದೇ ವೇಳೆ, ರಾಜ್ಯದ 22 ಹಿಂದುಳಿದ ಹಾಗೂ ದಲಿತ ಮಠಗಳಿಗೆ ಜಾಗ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಬೆಂಗಳೂರು ನಗರ ಜಿಲ್ಲೆ, ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರಿಗೆ ಒಪ್ಪಿಗೆ ನೀಡಲಾಗಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57 ಮತ್ತು 58 ರಲ್ಲಿರುವ ಸರ್ಕಾರಿ ಜಮೀನು ದಲಿತ ಹಾಗೂ ಹಿಂದೂಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡಲು ಸಮ್ಮತಿ ಸೂಚಿಸಿದೆ.
Related









