NEWSನಮ್ಮರಾಜ್ಯ

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನಕ್ಕೆ ಸಿಎಂ ಸೇರಿ ಗಣ್ಯರಿಂದ ಸಂತಾಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಜನಪ್ರಿಯ ಕಾರ್ಮಿಕ ಮುಖಂಡ ಎಚ್‌.ವಿ. ಅನಂತ ಸುಬ್ಬರಾವ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು ಮುನ್ನಡೆಸಿದ್ದ ಹೋರಾಟಗಾರ ಅನಂತ ಸುಬ್ಬರಾವ್ ನನಗೂ ಆತ್ಮೀಯರಾಗಿದ್ದರು. ಅವರ ದಣಿವರಿಯದ ಹೋರಾಟದ ಛಲ ಮತ್ತು ಸೈದ್ಧಾಂತಿಕ‌ ಬದ್ಧತೆ ಹೋರಾಟಗಾರರಿಗೆ ಒಂದು ಮಾದರಿ.

ಅವರ ನಿರ್ಗಮನದಿಂದ ಸಮಾಜಕ್ಕೆ, ಮುಖ್ಯವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಸಿಎಂ ಪ್ರಾರ್ಥಿಸಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಂತಾಪ: ರಾಜ್ಯದ ಹಿರಿಯ ಕಾರ್ಮಿಕ ನಾಯಕರು ಹಾಗೂ ಕೆ.ಎಸ್.ಆರ್.ಟಿ.ಸಿ. ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷರಾದ ಕಾಂ.ಎಚ್. ವಿ. ಅನಂತ ಸುಬ್ಬರಾವ್ ಅವರ ನಿಧನಕ್ಕೆ ತೀವ್ರ ಸಂತಾಪಗಳನ್ನು ಸೂಚಿಸುತ್ತೇನೆ.

ಅನಂತ ಸುಬ್ಬರಾವ್ ಅವರು ದಶಕಗಳ ಕಾಲ ಸಾರಿಗೆ ಸಂಸ್ಥೆಯ ನೌಕರರ ಹಿತರಕ್ಷಣೆಗಾಗಿ ಮತ್ತು ಕಾರ್ಮಿಕ ವರ್ಗದ ನ್ಯಾಯಯುತ ಹಕ್ಕುಗಳಿಗಾಗಿ ಅವಿರತವಾಗಿ ಹೋರಾಡಿದವರು. ಅವರ ಅಗಲಿಕೆಯಿಂದ ರಾಜ್ಯದ ಕಾರ್ಮಿಕ ಚಳುವಳಿಯ ಒಂದು ಪ್ರಬಲ ಧ್ವನಿ ಇಲ್ಲದಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂತಾಪ: ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಮಿಕ ಮುಖಂಡರಾಗಿದ್ದ ಎಚ್‌.ವಿ. ಅನಂತ ಸುಬ್ಬರಾವ್ ಅವರ ನಿಧನದ ವಾರ್ತೆ ತಿಳಿದು ಬಹಳ ದುಃಖವಾಯಿತು.

ಕಾರ್ಮಿಕ ಹೋರಾಟಗಾರಾಗಿ ಸುದೀರ್ಘ ಕಾಲ ಹೋರಾಟ ನಡೆಸಿದ್ದ ಶ್ರೀಯುತರು, ನಾಲ್ಕು ದಶಕಗಳ ಕಾಲ ಕಾರ್ಮಿಕ ಚಳವಳಿಗಳನ್ನು ಮುನ್ನಡೆಸಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ವಿಪಕ್ಷ ನಾಯಕ ಆರ್‌.ಅಶೋಕ್‌ ಸಂತಾಪ: ಹಿರಿಯ ಕಾರ್ಮಿಕ ನಾಯಕರು, ನನಗೆ ಆತ್ಮೀಯರೂ ಆಗಿದ್ದ ಅನಂತ ಸುಬ್ಬರಾವ್ ಅವರ ನಿಧನಕ್ಕೆ ನನ್ನ ಅತೀವ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ.

ಎಐಟಿಯುಸಿ ಸಂಘಟನೆಯಲ್ಲಿ ಸುಮಾರು 5 ದಶಕಗಳ ಕಾಲ ಸಕ್ರಿಯರಾಗಿದ್ದ ಸುಬ್ಬರಾವ್ ಅವರು ಕರ್ನಾಟಕ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ನಂತರ ಅಧ್ಯಕ್ಷರಾಗಿ ಕರ್ನಾಟಕದಲ್ಲಿ ಸಂಘಟನೆಯನ್ನು ಕೆಳಮಟ್ಟದಿಂದ ಕಟ್ಟಿದ್ದರು. ಸುಮಾರು ಐದು ದಶಕಗಳ ಕಾಲ ಬೀದಿಯಿಂದ ಹಿಡಿದು ಸರ್ಕಾರದ ಉನ್ನತ ಮಟ್ಟದ ಸಂಧಾನ ಸಭೆಗಳವರೆಗೆ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡಿದ ಬದ್ಧತೆಯುಳ್ಳ ನಾಯಕಾರಾಗಿದ್ದರು.

ನಾನು ಸಾರಿಗೆ ಸಚಿವನಾಗಿದ್ದ ಸಂದರ್ಭದಲ್ಲಿಯೂ ಸಹ ಹಲವಾರು ಬಾರಿ ಸಾರಿಗೆ ನೌಕರರ ಸಮಸ್ಯೆಗಳ ಸಂಧಾನ ಸಭೆಗಳಲ್ಲಿ ಅವರನ್ನು ಭೇಟಿಯಾಗುವ ಅವಕಾಶ ದೊರಕಿತ್ತು. ಕಾರ್ಮಿಕರ ಪರ ಅಚಲವಾದ ನಿಲುವು ಹೊಂದಿದ್ದರೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಹಕರಿಸಬೇಕು ಎಂದು ಮನವಿ ಮಾಡಿದಾಗ ಸಹಕರಿಸುತ್ತಿದ್ದರು.

2025ರ ಡಿಸೆಂಬರ್‌ನಲ್ಲಿ ವಯೋಸಹಜ ಕಾರಣಗಳಿಂದ ಎಐಟಿಯುಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರಾದರೂ, ತಮ್ಮ ಕಡೆಯ ಕ್ಷಣದವರೆಗೂ ಕಾರ್ಮಿಕರ ಪರವಾದ ಗಟ್ಟಿ ದನಿಯಾಗಿ ನಿಂತಿದ್ದೇ ಅವರ ಬದ್ಧತೆಯ ಬದುಕಿಗೆ ಸಾಕ್ಷಿ.

ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬಕ್ಕೆ, ಅಸಂಖ್ಯಾತ ಅಭಿಮಾನಿ ಬಳಗಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Megha
the authorMegha

Leave a Reply

error: Content is protected !!