ಪಿರಿಯಾಪಟ್ಟಣ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ಬೆಟ್ಟದಪುರದಲ್ಲಿ ನಡೆದಿದೆ.

ಹರೀನಹಳ್ಳಿ ಗ್ರಾಮದ ನಿವಾಸಿ ಜಗದೀಶ್ (66) ಮೃತ ಬೈಕ್ ಸವಾರ ಎಂದು ತಿಳಿದು ಬಂದಿದೆ. ಜಗದೀಶ್ ಅವರು ಪಿರಿಯಾಪಟ್ಟಣದಿಂದ ಬೆಟ್ಟದಪುರ ಕಡೆಗೆ ಹೋಗುತ್ತಿದ್ದಾಗ ಡಿಟಿಎಂಎನ್ ಶಾಲಾ ಮುಂಭಾಗ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ಜಗದೀಶ್ ಅವರು ಬಸ್ ಚಕ್ರದಡಿ ಸಿಲುಕಿದ್ದಾರೆ. ಈ ವೇಳೆ ತಲೆ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗಿದೆ. ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ತಕ್ಷಣ ಆಂಬುಲೆನ್ಸ್ ಮೂಲಕ ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು. ಆದರೆ ಮಾರ್ಗಮಧ್ಯೆಯೇ ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದರು.
ಮೃತರ ಪುತ್ರ ಎಚ್.ಜಿ. ದೀಲಿಪ್ ಸಾರಿಗೆ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ತಮ್ಮ ತಂದೆಯ ಸಾವಿಗೆ ಕಾರಣ ಎಂದು ಆರೋಪಿಸಿ, ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೆಟ್ಟದಪುರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Related










