ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು (ಏ.7) ಮಂಗಳವಾರ ಬಿಡುಗಡೆಯಾಗಬೇಕಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಇರುವುದರಿಂದ ಫಲಿತಾಂಶ ಪ್ರಕಟಿಸಲು ತಾಂತ್ರಿಕ ಅಡಚಣೆ ಉಂಟಾಗಿದೆ ಎಂದು ಮಂಡಳಿ ಹೇಳಿದೆ.
ಇನ್ನು ಚುನಾವಣಾ ಆಯೋಗದಿಂದ ಅಧಿಕೃತ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ವಿಳಂಬವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿರೀಕ್ಷಿತ ಫಲಿತಾಂಶ ಪ್ರಕಟಣೆಯ ಹೊಸ ದಿನಾಂಕವನ್ನು ಮಂಡಳಿ ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸಲಿದ್ದು, ಮೂಲಗಳ ಪ್ರಕಾರ, ಫಲಿತಾಂಶ ಪ್ರಕಟಿಸಲು ಆಯೋಗವು ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನಾಳೆಯೇ ಅಂದರೆ ಏಪ್ರಿಲ್ 8ರಂದು ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.
ಇಂದು ಸಂಜೆಯೊಳಗೆ ಮಂಡಳಿಯು ಮುಂದಿನ ದಿನಾಂಕದ ಬಗ್ಗೆ ಸ್ಪಷ್ಟನೆ ನೀಡುವ ನಿರೀಕ್ಷೆಯಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಬೇಗನೆ ಫಲಿತಾಂಶ ನೀಡಲು ಶಿಕ್ಷಣ ಇಲಾಖೆ ಸಜ್ಜಾಗಿತ್ತು. ಆದರೆ ಉಪಚುನಾವಣೆ ಇರುವುದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಒಂದೆರಡು ದಿನ ಕಾಯುವುದು ಅನಿವಾರ್ಯವಾಗಿದೆ.
Related










