ಪೆಟ್ರೋಲ್ ಡೀಸೆಲ್ ದರ ಏರಿಕೆ ಪರಿಣಾಮ: KSRTC ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ !
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಬಸ್ ಪ್ರಯಾಣ ದರ ಹೆಚ್ಚಳ ಕುರಿತು ಅಂತಿಮ ನಿರ್ಧಾರವನ್ನು ನಾಲ್ಕೂ ಸಾರಿಗೆ ನಿಗಮಗಳು ಸಲ್ಲಿಸುವ ಪ್ರಸ್ತಾವದ ಮೇಲೆ ಕೈಗೊಳ್ಳಲಾಗುತ್ತದೆ.

ಬೆಂಗಳೂರು: ಕಳೆದ 10 ದಿನಗಳಿಂದ ಪೆಟ್ರೋಲ್ ಡೀಸೆಲ್ ಏರಿಕೆಯಾಗುತ್ತಿರುವುದರಿಂದ ಸಾರಿಗೆ ನಿಗಮಗಳ ನಷ್ಟದ ಪ್ರಮಾಣ ಹೆಚ್ಚುತ್ತಿದ್ದು, ಸರ್ಕಾರಿ ಬಸ್ಗಳ ಟಿಕೆಟ್ ದರವೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೀಗಾಗಿ ಅತೀಶೀಘ್ರದಲ್ಲೇ ದರ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿದು ಬಂದಿದ್ದು, ಈ ಕುರಿತು ಈಗಾಗಲೇ ಚರ್ಚೆಗಳು ನಡೆದಿವೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಅಧಿಕೃತ ನಿರ್ಧಾರ ಹೊರಬೀಳುವ ನಿರೀಕ್ಷೆಯೂ ಇದೆ. ಡೀಸೆಲ್ ದರದಲ್ಲಿ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಟಿಕೆಟ್ ದರ ಕೂಡ ಹೆಚ್ಚಳವಾಗುವ ಸಾಧ್ಯತೆಗಳು ದಟ್ಟವಾಗಿವೆ.
ಡೀಸೆಲ್ ದರ ಏರಿಕೆಯ ಪರಿಣಾಮವಾಗಿ ಮತ್ತೊಮ್ಮೆ ಬಸ್ ಪ್ರಯಾಣ ದರ ಹೆಚ್ಚಳವಾದರೆ, ದಿನ ನಿತ್ಯ ಸರ್ಕಾರಿ ಬಸ್ಗಳನ್ನು ಅವಲಂಬಿಸಿರುವ ಲಕ್ಷಾಂತರ ಪ್ರಯಾಣಿಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. ಇದರಿಂದ ಪ್ರಯಾಣಿಕರಲ್ಲಿ ಆತಂಕವೂ ಹೆಚ್ಚಾಗಿದೆ. ಇನ್ನು ಕಳೆದ ಹತ್ತು ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಆಗಿರುವ ಸರಣಿ ಏರಿಕೆಯು ರಾಜ್ಯದ ಸಾರಿಗೆ ವ್ಯವಸ್ಥೆಯ ಮೇಲೆ ತೀವ್ರ ಪರಿಣಾಮ ಬೀರಿದೆ.
ಕಳೆದ ಎರಡು ವಾರಗಳಲ್ಲಿ ನಾಲ್ಕು ಬಾರಿ ಇಂಧನ ದರ ಪರಿಷ್ಠ ರಣೆಯಾಗಿದ್ದು, ಲೀಟರ್ ಡೀಸೆಲ್ ಬೆಲೆಯಲ್ಲಿ ಒಟ್ಟಾರೆ 7.50 ರೂ. ಗಳಿಗೂ ಹೆಚ್ಚು ಏರಿಕೆಯಾಗಿದೆ ಇದು ಸಾರಿಗೆ ನಿಗಮಗಳ ಮೇಲೆ ಬೃಹತ್ ಆರ್ಥಿಕ ಹೊರೆಯನ್ನು ಹೊರಿಸಿದೆ. ಕೆಎಸ್ಆರ್ಟಿಸಿ, ಕಲ್ಯಾಣ ಕರ್ನಾ ಟಕ, ವಾಯವ್ಯ ಕರ್ನಾಟಕ ಹಾಗೂ ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಈ ಏರಿಕೆಯಿಂದ ವಾರ್ಷಿಕ ಸುಮಾರು 480 ಕೋಟಿ ರೂ.ಗೂ ಅಧಿಕ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಅಂದಾಜಿದೆ.
ಸಾರಿಗೆ ನಿಗಮಗಳು ಕಾರ್ಯಾಚರಣೆ ವೆಚ್ಚವನ್ನು ಸರಿ ದೂಗಿಸಲು ಪ್ರಯಾಣ ದರ ಪರಿಷ್ಕರಣೆ ಒಂದೇ ಏಕೈಕ ಆಯ್ಕೆ ಎಂದು ಅಭಿಪ್ರಾಯಪಟ್ಟಿವೆ. ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ನಿಗಮಗಳಿಗೆ ಇಂಧನ ದರ ಏರಿಕೆ ಮತ್ತಷ್ಟು ಸಂಕಷ್ಟವಾಗಿ ಪರಿಣಮಿಸಿದ್ದು, ಈ ಹಿನ್ನೆಲೆಯಲ್ಲಿ ದರ ಪರಿಷ್ಕರಣೆಯ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವ ಕುರಿತು ಚಿಂತನೆ ನಡೆಸುತ್ತಿವೆ.
ಸಚಿವರ ಸ್ಪಷ್ಟನೆ: ಈ ಕುರಿತು ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಬಸ್ ಪ್ರಯಾಣ ದರ ಹೆಚ್ಚಳ ಕುರಿತು ಅಂತಿಮ ನಿರ್ಧಾರವನ್ನು ನಾಲ್ಕೂ ಸಾರಿಗೆ ನಿಗಮಗಳು ಸಲ್ಲಿಸುವ ಪ್ರಸ್ತಾವದ ಮೇಲೆ ಕೈಗೊಳ್ಳಲಾಗುತ್ತದೆ. ಇದೂವರೆಗೆ ಯಾವುದೇ ನಿಗಮವು ಅಧಿಕೃತವಾಗಿ ದರ ಹೆಚ್ಚಳಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿಲ್ಲ. ನಿಗಮಗಳು ಆರ್ಥಿಕ ಒತ್ತಡ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ಉಲ್ಲೇಖಿಸಿ ಪ್ರಯಾಣ ದರ ಪರಿಷ್ಕರಣೆ ಕೋರಿ ಪ್ರಸ್ತಾವನೆ ಸಲ್ಲಿಸಿದರೆ ಸರ್ಕಾರ ಆ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Related









