ಕೊಟ್ಟ ಮಾತು ತಪ್ಪಿದ ಸಿಎಂ ಡಿಕೆಶಿ: ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ!
ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ರಚನೆ ಸಂದರ್ಭದಲ್ಲಿ ಹೈಕಮಾಂಡ್ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಲು ನಿರ್ಧರಿಸಿತ್ತು. ಆದರೆ, ಆಗಿನ ಉಪಮುಖ್ಯಮಂತ್ರಿಯಾಗಿದ್ದ ಇಂದಿನ ಸಿಎಂ ಶಿವಕುಮಾರ್ ರಾಮಲಿಂಗಾರೆಡ್ಡಿ ಅವರ ಮನವೊಲಿಸಿ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಾನು ಪಡೆಯುತ್ತೇನೆ. ನಾನು ಮುಖ್ಯಮಂತ್ರಿಯಾದ ನಂತರ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಿಮಗೆ ಕೊಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಅವರಿಗೆ ಮಾತು ಕೊಟ್ಟಿದ್ದರು.

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 24ಗಂಟೆ ಕಳೆಯುವ ಮೊದಲೇ ಸಚಿವರ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ನ ಪ್ರಭಾವಿ ಹಾಗೂ ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆ ಮೇಲೆ ಕಣ್ಣಿಟ್ಟಿದ್ದರು. ಆದರೆ, ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದು, ಇದು ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಇಂದು ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ತಮ್ಮ ಸಚಿವ ಸ್ಥಾನದ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ರಚನೆ ಸಂದರ್ಭದಲ್ಲಿ ಹೈಕಮಾಂಡ್ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಲು ನಿರ್ಧರಿಸಿತ್ತು. ಆದರೆ, ಆಗಿನ ಉಪಮುಖ್ಯಮಂತ್ರಿಯಾಗಿದ್ದ ಇಂದಿನ ಸಿಎಂ ಶಿವಕುಮಾರ್ ರಾಮಲಿಂಗಾರೆಡ್ಡಿ ಅವರ ಮನವೊಲಿಸಿ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಾನು ಪಡೆಯುತ್ತೇನೆ. ನಾನು ಮುಖ್ಯಮಂತ್ರಿಯಾದ ನಂತರ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನಿಮಗೆ ಕೊಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಅವರಿಗೆ ಮಾತು ಕೊಟ್ಟಿದ್ದರು.
ಆದರೆ ಈಗ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ನೀಡಿರುವುದು ರಾಮಲಿಂಗಾರೆಡ್ಡಿ ಅವರಲ್ಲಿ ಬೇಸರ ಮೂಡಿಸಿದೆ. ಹೀಗಾಗಿ ನನಗೆ ಸಚಿವ ಸ್ಥಾನವೇ ಬೇಡ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ರೆಡ್ಡಿ ಮುಖ್ಯಮಂತ್ರಿ ಅವರಿಗೆ ತಿಳಿಸಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ವಿಧಾನಸೌಧದಲ್ಲಿ ಕೊಟ್ಟಿದ್ದಾರೆ ಎಂದು ಬಲ್ಲ ಮೂಗಳಿಂದ ತಿಳಿದು ಬಂದಿದೆ.
ಇನ್ನು ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು 13 ಸಚಿವರು ಪ್ರಮಾಣ ವಚನ ಸ್ವೀಕರಿಸಿ ಇನ್ನೂ ಒಂದು ದಿನ ಕಳೆದಿಲ್ಲ ಅಷ್ಟರಲ್ಲೇ ಅಸಮಾಧಾನ ಸ್ಫೋಟಿಸಿರುವುದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದ್ದು, ಈ ನಡುವೆ ಕೊಟ್ಟ ಮಾತಿನಂತೆ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡಿ ಇಲ್ಲದಿದ್ದರೆ ಸಚಿವ ಸ್ಥಾನವೇ ಬೇಡ ಎಂದು ಕಡ್ಡಿ ಮುರಿದಂತೆ ರಾಮಲಿಂಗಾರೆಡ್ಡಿ ಹೇಳಿ ಬಂದಿದ್ದಾರೆ ಎನ್ನಲಾಗಿದೆ.
ಸಚಿವ ರಾಮಲಿಂಗಾರೆಡ್ಡಿ ಅವರನ್ನು ಸಮಾಧಾನಿಸಿ ಅವರ ಮನವೊಳಿಸಲು ಡಿ.ಕೆ. ಶಿವಕುಮಾರ್ ಪ್ರಯತ್ನ ಪಟ್ಟಿದ್ದಾರೆ. ಆದರೆ ಅದಕ್ಕೆ ಒಪ್ಪದ ಸಚಿವರು ಅಸಮಾಧಾನ, ಬೇಸರಗೊಂಡಿದ್ದು ಯಾರ ಸಂಪರ್ಕಕ್ಕೂ ಈಗ ಸಿಗುತ್ತಿಲ್ಲ. ವರಿಷ್ಠರು ಅವರಿಗೆ ಕರೆ ಮಾಡಿ ಅವರ ಮನವೊಲಿಸುವ ಕೆಲಸ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
Related









