ಇ-ಖಾತಾ ತಿದ್ದುಪಡಿ ಜವಾಬ್ದಾರಿ ಉಪ ಆಯುಕ್ತರಿಗೆ ಕೊಡಿ: ಮಹೇಶ್ವರ್ ರಾವ್
ಇ-ಖಾತಾ ಹಾಗೂ ಆಸ್ತಿ ತೆರಿಗೆ ಸಂಗ್ರಹಣೆಗೆ ಸಂಬಂಧಿಸಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 2026ರ ಜೂನ್ ತಿಂಗಳ ಪ್ರಸ್ತುತ ದಿನಾಂಕದವರೆಗೆ 3,000 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 2,800 ಕೋಟಿ ರೂ. ಸಂಗ್ರಹಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಈ ವರ್ಷ ಆಸ್ತಿ ತೆರಿಗೆ ಸಂಗ್ರಹದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ

ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಇ-ಖಾತಾ ತಿದ್ದುಪಡಿಯ ಜವಾಬ್ದಾರಿಯನ್ನು ಉಪ ಆಯುಕ್ತರಿಗೆ ನೀಡಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ ಕಂದಾಯ ವಿಭಾಗಕ್ಕೆ ಸಂಬಂಧಿಸಿದಂತೆ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಲಯ ಜಂಟಿ ಆಯುಕ್ತರಿಗೆ ಇ-ಖಾತಾದಲ್ಲಿ ತಿದ್ದುಪಡಿ ಮಾಡುವ ಜವಾಬ್ದಾರಿಯನ್ನು ನೀಡಲಾಗಿತ್ತು. ಅವರ ಕಾರ್ಯವ್ಯಾಪ್ತಿ ಹೆಚ್ಚಿರುವ ಕಾರಣ, ಆ ಜವಾಬ್ದಾರಿಯನ್ನು ಆಯಾ ವಲಯದ ಉಪ ಆಯುಕ್ತರಿಗೆ ವಹಿಸಿ ಎಂದು ಸೂಚನೆ ನೀಡಿದರು.
ಇನ್ನು ಪ್ರತಿ ನಗರ ಪಾಲಿಕೆಯಿಂದ ಬಂದಿರುವ ಸಲಹೆಗಳ ಆಧಾರದ ಮೇಲೆ ಕಂದಾಯ ವಿಭಾಗದ ಉಪ ಆಯುಕ್ತರಿಗೆ ಹೆಚ್ಚಿನ ಜವಾಬ್ದಾರಿ ವಹಿಸಿ, ವಿಶೇಷ ಅಭಿಯಾನದ ರೂಪದಲ್ಲಿ ಬಾಕಿ ಇರುವ ಎಲ್ಲ ತಿದ್ದುಪಡಿ ಹಾಗೂ ದೂರುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಇದರಿಂದ ನಾಗರಿಕರಿಗೆ ಇ-ಖಾತಾ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಒದಗಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.
ಇ-ಖಾತಾಗೆ ಸಂಬಂಧಿಸಿದಂತೆ ಖಾತಾ ಬದಲಾವಣೆ, ಮಾಲೀಕರ ಹೆಸರಿನ ತಿದ್ದುಪಡಿ ಹಾಗೂ ಇತರ ವಿವರಗಳ ತಿದ್ದುಪಡಿ ಕುರಿತಾಗಿ ಸಾರ್ವಜನಿಕರಿಂದ ಹೆಚ್ಚಿನ ಸಂಖ್ಯೆಯಲ್ಲಿ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ತಿದ್ದುಪಡಿ ಮಾಡ್ಯೂಲ್ ಅನ್ನು ಇನ್ನಷ್ಟು ವೇಗಗೊಳಿಸಿ, ಸರಿಪಡಿಸಿದ ಇ-ಖಾತಾಗಳನ್ನು ಶೀಘ್ರದಲ್ಲಿ ವಿತರಿಸುವುದರ ಜತೆಗೆ ದೂರುಗಳ ತ್ವರಿತ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ನಗರದಲ್ಲಿ ಇ-ಖಾತಾ ಹಾಗೂ ಆಸ್ತಿ ತೆರಿಗೆ ಸಂಗ್ರಹಣೆಗೆ ಸಂಬಂಧಿಸಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 2026ರ ಜೂನ್ ತಿಂಗಳ ಪ್ರಸ್ತುತ ದಿನಾಂಕದವರೆಗೆ 3,000 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 2,800 ಕೋಟಿ ರೂ. ಸಂಗ್ರಹಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಈ ವರ್ಷ ಆಸ್ತಿ ತೆರಿಗೆ ಸಂಗ್ರಹದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಜೊತೆಗೆ ಮತ್ತಷ್ಟು ಪರಿಣಾಮಕಾರಿಯಾಗಿ ಆಸ್ತಿ ತೆರಿಗೆ ಸಂಗ್ರಹಿಸಿ ಎಂದು ಅಧಿಕಾರಿಗಳಿಗೆ ಹೇಳಿದರು.
ಇ-ಖಾತಾ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಲು ಹಾಗೂ ಸಾರ್ವಜನಿಕರಿಗೆ ಸುಲಭ ಸೇವೆ ಒದಗಿಸುವ ಉದ್ದೇಶದಿಂದ ಪ್ರತಿ ನಗರ ಪಾಲಿಕೆಯ ಕಾರ್ಯವೈಖರಿಯನ್ನು ಸಮಗ್ರವಾಗಿ ಪರಿಶೀಲಿಸಲಾಗಿದೆ. ಸಾಫ್ಟ್ವೇರ್ನಲ್ಲಿ ಅಗತ್ಯ ಬದಲಾವಣೆಗಳನ್ನು ತರುವಂತೆ ತಾಕೀತು ಮಾಡಿದರು.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಹೊಸ ಖಾತೆಗಾಗಿ ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ತೆರಿಗೆ ವ್ಯಾಪ್ತಿಗೆ ತರಬೇಕು. ಜೊತೆಗೆ ಬಿ-ಖಾತಾದಿಂದ ಎ-ಖಾತಾಗೆ ಬದಲಾವಣೆಗಾಗಿ ಬಂದಿರುವ ಅರ್ಜಿಗಳನ್ನು ಸಹ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರು ಮಾತನಾಡಿ, ಹೆಚ್ಚಿನ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಂದ ಪಾಲಿಕೆಗಳಿಗೆ ಬರಬೇಕಿರುವ ತೆರಿಗೆಯನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಇ-ಖಾತಾ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಿ: ಜಿಬಿಎ ವ್ಯಾಪ್ತಿಯಲ್ಲಿ ಭೂ ಗ್ಯಾರಂಟಿ ಯೋಜನೆಯಡಿ ಹಮ್ಮಿಕೊಂಡಿರುವ “ನನ್ನ ಇ-ಖಾತಾ ನನ್ನ ಅಭಿಯಾನ” ವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಇ-ಖಾತಾ ಅಭಿಯಾನದ ಕುರಿತು ನಾಗರಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ವಿಶೇಷ ಆಯುಕ್ತ ಡಾ.ಕೆ.ಹರೀಶ್ ಕುಮಾರ್, ಆಯುಕ್ತರಾದ ರಮೇಶ್ ಡಿ.ಎಸ್., ಜಿ. ಜಗದೀಶ್, ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಕಂದಾಯ ವಿಭಾಗದ ಅಪರ ಆಯುಕ್ತರು, ಜಂಟಿ ಆಯುಕ್ತರು, ಉಪ ಆಯುಕ್ತರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Related









