KSRTC ಬಸ್ ಟೈಯರ್ ಸ್ಫೋಟ: ನಿವೃತ್ತ ಶಿಕ್ಷಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ- ಆಸ್ಪತ್ರೆಗೆ ದಾಖಲು
ಅಪಘಾತದಲ್ಲಿ ಪ್ರಕಾಶ್ ಹಾಗೂ ನಿವೃತ್ತ ಶಿಕ್ಷಕಿ ಪುಟ್ಟನಂಜಮ್ಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಸ್ನಲ್ಲಿದ್ದ 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದರೆ, 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಕೊಳ್ಳೇಗಾಲ ಉಪವಿಭಾಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಚಾಮರಾಜನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ಟೈಯರ್ ಸ್ಪೋಟಗೊಂಡು ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯ ಬೈಪಾಸ್ ಬಳಿ ನಡೆದಿದೆ.
ಕೊಳ್ಳೇಗಾಲ ಪಟ್ಟಣದ ನಿವಾಸಿ, ತಿಂಗಳ ಹಿಂದೆ ನಿವೃತ್ತಿ ಹೊಂದಿದ್ದ ಶಿಕ್ಷಕಿ ಪುಟ್ಟನಂಜಮ್ಮ (60), ಕುದುರೆ ಗ್ರಾಮದ ನಿವಾಸಿ ಪುಟ್ಟಸ್ವಾಮಿ ಅವರ ಪುತ್ರ ಪ್ರಕಾಶ್ (50) ಮೃತಪಟ್ಟ ಪ್ರಯಾಣಿಕರು. ಇನ್ನು ಈ ಅಪಘಾತದಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನೆ ವಿವರ: ಮಲೆ ಮಹದೇಶ್ವರನ ದರ್ಶನ ಪಡೆದು ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆ ಹಿಂದಿರುಗುತ್ತಿದ್ದಾಗ ಮಧುವನಹಳ್ಳಿ ಬೈಪಾಸ್ ಬಳಿ ಬಸ್ ಟೈಯರ್ ಸಿಡಿದ ಪರಿಣಾಮ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ. 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಪ್ರಕಾಶ್ ಹಾಗೂ ನಿವೃತ್ತ ಶಿಕ್ಷಕಿ ಪುಟ್ಟನಂಜಮ್ಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಸ್ನಲ್ಲಿದ್ದ 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದರೆ, 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಕೊಳ್ಳೇಗಾಲ ಉಪವಿಭಾಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇನ್ನು ಅಪಘಾತದ ರಭಸಕ್ಕೆ ಬಸ್ನ ಮುಂದಿನ ಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಇತ್ತ ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಕೊಳ್ಳೇಗಾಲ ಡಿವೈಎಸ್ಪಿ ತಿಳಿಸಿದ್ದಾರೆ.







