ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕು ದೇಶವ್ಯಾಪಿ ಎರಡನೇ ಬಾರಿಗೆ ಹರಡುತ್ತಿದೆ. ಬೆಂಗಳೂರು ನಗರದಲ್ಲಿ ದಿನಕ್ಕೆ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿ ಜನರಲ್ಲಿ ಭಯವನ್ನು ಸೃಷ್ಟಿ ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಬಿಬಿಎಂಪಿ ಚುನಾವಣಾ ಉಸ್ತುವಾರಿ ಶಾಂತಲಾ ದಾಮ್ಲೆ ಹೇಳಿದ್ದಾರೆ.
ನಗರದ ಎನ್ .ಆರ್ .ರಸ್ತೆಯಲ್ಲಿನ ಬಿಬಿಎಂಪಿ ಕೇಂದ್ರ ಕಚೇರಿಯ ಮುಂಭಾಗದ ಬಸ್ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಆಯೋಜಿಸಿದ್ದ ಸೋಂಕು ನಿವಾರಕ ಸಿಂಪಡಣೆ (ಸ್ಯಾನಿಟೇಷನ್) ಮಾಡುವ ಕಾರ್ಯಕ್ರಮವನ್ನು ಸುರಕ್ಷಿತ ಯುಗಾದಿ – ಸಂತಸ ಯುಗಾದಿ ಎಂಬ ಘೋಷವಾಕ್ಯದೊಂದಿಗೆ ಚಾಲನೆ ನೀಡಿ ಮಾತನಾಡಿದರು.
ಕಳೆದ ವರ್ಷದ ಯುಗಾದಿ ಸೋಂಕಿನ ಮಧ್ಯೆ ಸಂಭ್ರಮದಿಂದ ಆಚರಿಸ ಸಾಧ್ಯವಾಗಲಿಲ್ಲ. ಈ ಬಾರಿಯೂ ಅದೇ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ನಾಮ್ಮ ಪಕ್ಷ ಈ ಬಾರಿ ವಿನೂತನ ರೀತಿಯಲ್ಲಿ ಯುಗಾದಿಯನ್ನು ಬರಮಾಡಿಕೊಳ್ಳುತ್ತಿದೆ. ಪಕ್ಷದ ದೇಶಭಕ್ತ ಕಾರ್ಯಕರ್ತರು ನಗರದ ಎಲ್ಲಾ ವಾರ್ಡುಗಳಲ್ಲಿನ ಮಾರುಕಟ್ಟೆಗಳು, ಧಾರ್ಮಿಕ ಕ್ಷೇತ್ರಗಳು, ಬಸ್ ಹಾಗೂ ರೈಲು ನಿಲ್ದಾಣಗಳು ಸೇರಿದಂತೆ ಹಲವಾರು ಜನ ನಿಬಿಡ ಪ್ರದೇಶಗಳಲ್ಲಿ ಸೋಂಕು ನಿವಾರಕ ಸಿಂಪಡಣೆ (ಸ್ಯಾನಿಟೇಷನ್) ಮಾಡುವ ಕಾರ್ಯಕ್ಕೆ ಮುಂದಾಗಿದ್ದು, ಇಂದಿನಿಂದ ಎಲ್ಲಾ ವಾರ್ಡ್ಗಳಲ್ಲೂ ಸೋಂಕು ನಿವಾರಕ ಸಿಂಪಡಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಇನ್ನು ಸೋಂಕು ಹರಡದಂತೆ ತಡೆಯಲು ಸಾರ್ವಜನಿಕರು ಕಡ್ಡಾಯ ನಿಯಮಗಳನ್ನು ಅನುಸರಿಸಬೇಕು, ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸಭೆ ಸಮಾರಂಭಗಳಿಗೆ ಕಡಿವಾಣ ಹಾಕಬೇಕು. ಆಗ ಮಾತ್ರ ಸೋಂಕು ಹರಡುವುದನ್ನು ನಿಯಂತ್ರಿಸಲು ಸಾಧ್ಯ ಎಂದು ಸಲಹೆ ನೀಡಿದರು.
ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ, ಪಕ್ಷದ ಬೆಂಗಳೂರು ನಗರದ ಉಪಾಧ್ಯಕ್ಷ ಸುರೇಶ್ ರಾಥೋಡ್ ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಿ ಮಾಸ್ಕ್ ವಿತರಿಸಿ ಸೋಂಕಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.