ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಆಡಳಿತ ವೈಖರಿಗೆ ಬೇಸರಗೊಂಡಿರುವ ಮತದಾರರು ಸ್ಥಳೀಯ ಚುನಾವಣೆಯಲ್ಲಿ ಉತ್ತರ ನೀಡುವ ಮೂಲಕ ಚಾಟಿ ಬೀಸಿದ್ದಾರೆ. ಇನ್ನಾದರು ಉಳಿದ ಅಧಿಕಾರಾವಧಿಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಎಚ್ಚೆತ್ತುಕೊಂಡು ರಾಜ್ಯದ ಜನತೆಯ ಸಮಸ್ಯೆ ಆಲಿಸುವತ್ತ ಕಿವಿಯಾಗಬೇಕಿದೆ.
ಹೌದು! ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು ಆಡಳಿತರೂಢ ಬಿಜೆಪಿಗೆ ಭಾರಿ ಮುಖಭಂಗವಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಭಾವಿ ಸಚಿವ-ಶಾಸಕರು ಇರುವ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು ಬಿಎಸ್ವೈಗೆ ಭಾರಿ ಮುಖಭಂಗವಾಗಿದೆ.
10 ಸ್ಥಳೀಯ ಸಂಸ್ಥೆಗಳಿಗೆ ಕಳೆದ ಏ.27ರಂದು ಚುನಾವಣೆ ನಡೆದಿತ್ತು. ನಿನ್ನೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ 7, ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಆಡಳಿತರೂಢ ಪಕ್ಷದ ಚುನಾವಣೆಯಲ್ಲಿ ಒಂದು ಕಡೆಯಷ್ಟೇ ಆಡಳಿತ ಚುಕ್ಕಾಣಿ ಹಿಡಿಯಲು ಶಕ್ತವಾಗಿದೆ. ಆಡಳಿತ ರೂಢ ಪಕ್ಷ ಗೆಲುವು ಸಾಧಿಸುವುದು ವಾಡಿಕೆ. ಆದರೆ ಈ ಬಾರಿ ಸಿಎಂ ತವರು ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಯಡಿಯೂರಪ್ಪ ಅವರಿಗೆ ಭಾರಿ ಹಿನ್ನಡೆಯುಂಟಾಗಿದೆ.
ಇನ್ನು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ನಡೆಯಲ್ಲಿ ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲುವು ಕಂಡರೆ 6 ವಾರ್ಡ್ಗಳಲ್ಲಿ ಅಷ್ಟೇ ಬಿಜೆಪಿ ಗೆದ್ದಿದೆ. ಶಿವಮೊಗ್ಗ ಜಿಲ್ಲೆಯ ಎರಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲಿಸುವ ಮೂಲಕ ಮತದಾರರು ಶಾಕ್ ಕೊಟ್ಟಿದ್ದಾರೆ. ಇದು ಒಂದು ರೀತಿ ಬಿಜೆಪಿಗೆ ಎಚ್ಚರಿಕೆ ಗಂಟೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಮಡಿಕೇರಿ ಪುರಸಭೆಯಲ್ಲಿ ಮಾತ್ರ ಗೆಲುವು ಸಾಧಿಸಿದೆ. ಬಿಜೆಪಿ ಪರವಾದ ಅಲೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಂಡುಬಂದಿಲ್ಲ. ಬಳ್ಳಾರಿ ಮಹಾನಗರ ಪಾಲಿಕೆ 39 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 21 ಸ್ಥಾನ ಗೆದ್ದುಕೊಳ್ಳುವ ಮೂಲಕ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಕೇವಲ 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಭಾರಿ ಮುಖಭಂಗ ಅನುಭವಿಸಿದೆ.
ಭದ್ರಾವತಿಯಲ್ಲಿ 35 ಸ್ಥಾನಗಳಲ್ಲಿ 34 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆದಿದೆ. ಒಂದು ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ. ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಒಟ್ಟು 35 ವಾರ್ಡುಗಳಲ್ಲಿ ಕಾಂಗ್ರೆಸ್ 18 ವಾರ್ಡಗಳಲ್ಲಿ ಗೆಲುವು ಸಾಧಿಸಿದೆ. ನಾಲ್ಕು ವಾರ್ಡ್ಗಳಲ್ಲಿ ಬಿಜೆಪಿಗೆ ಗೆದ್ದಿದ್ದು, ಇನ್ನು 25 ವರ್ಷಗಳಿಂದ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧಿಪತ್ಯ ಸಾಧಿಸಿಕೊಂಡು ಬಂದಿದ್ದ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.
ರಾಮನಗರ ನಗರಸಭೆ ಕಾಂಗ್ರೆಸ್ ತೆಕ್ಕೆಗೆ ಸೇರಿದೆ. ಈ ಮೂಲಕ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಒಟ್ಟು 31 ವಾರ್ಡುಗಳ ಪೈಕಿ ಕಾಂಗ್ರೆಸ್ 19, ಜೆಡಿಎಸ್ 11 ವಾರ್ಡ್ಗಳಲ್ಲಿ ಗೆಲುವು ಸಾಧಿಸಿದ್ದರೆ, ಒಂದು ವಾರ್ಡ್ನಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ. ಬಿಜೆಪಿ ಒಂದು ವಾರ್ಡ್ಅನ್ನು ಜಯ ಸಾಧಿಸಿಲ್ಲ. ಇದರಿಂದ ರಾಮನಗರ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ ಗೆ ಭಾರಿ ಮುಖಭಂಗವಾಗಿದೆ.
ಹಾಸನದ ಬೇಲೂರು ಪುರಸಭೆ ಮೊದಲ ಬಾರಿಗೆ ಕಾಂಗ್ರೆಸ್ ತೆಕ್ಕೆಗೆ ಸೇರಿದೆ. ಶತಾಯಗತಾಯ ಗೆಲುವು ಸಾಧಿಸಬೇಕು ಎಂದುಕೊಂಡಿದ್ದ ಜೆಡಿಎಸ್ಗೆ ಮುಖಭಂಗವಾಗಿದೆ. 25 ವಾರ್ಡ್ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು ಐದು ವಾರ್ಡಗಳಲ್ಲಿ ಜೆಡಿಎಸ್ ಗೆಲುವು. ಆದರೆ ಕೇವಲ ಒಂದು ಕಡೆ ಬಿಜೆಪಿ ಗೆದ್ದಿದೆ.