NEWSನಮ್ಮಜಿಲ್ಲೆನಮ್ಮರಾಜ್ಯ

ದುರಂಹಕಾರಿ ಶಿವಾನಂದ ಪಾಟೀಲರ ತಕ್ಷಣ ಸಂಪುಟದಿಂದ ಕೈಬಿಡಬೇಕು: ಎಎಪಿಯ ಜಗದೀಶ್ ವಿ. ಸದಂ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾಲಮನ್ನಾದ ಆಸೆಗಾಗಿ ರೈತರು ಬರಗಾಲವನ್ನು ಬಯಸುತ್ತಾರೆ ಎಂಬ ಉದ್ಧಟತನದ ಹೇಳಿಕೆ ನೀಡಿರುವ ಸಚಿವ ಶಿವಾನಂದ ಪಾಟೀಲ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡುವಂತೆ ಕರ್ನಾಟಕ ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ. ಸಚಿವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, ರೈತ ಸಮುದಾಯದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.

ಇತ್ತೀಚೆಗೆ ಚಿಕ್ಕೋಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಶಿವಾನಂದ ಪಾಟೀಲ್ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಸೋಮವಾರ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಅನ್ನದಾತರನ್ನು ಪದೇಪದೆ ಅವಮಾನಿಸುವ, ರೈತರ ಜೀವನ ಹಾಳು ಮಾಡುವ, ರೈತರನ್ನು ನಿಂದಿಸುವ ಸಂಸ್ಕೃತಿಯನ್ನು ಕಾಂಗ್ರೆಸ್ ಸಚಿವ ಶಿವಾನಂದ ಪಾಟೀಲ ಅಳವಡಿಸಿಕೊಂಡಂತಿದೆ.

ಪದೇಪದೆ ರೈತರನ್ನು ಅವಮಾನಿಸುವ ಮತ್ತು ಕೀಳಾಗಿ ಕಾಣುತ್ತಿದ್ದಾರೆ. ಇತ್ತೀಚೆಗಷ್ಟೇ ಬೆಳೆ ಪರಿಹಾರ ಘೋಷಣೆ ನಂತರ ರೈತರ ಆತ್ಮಹತ್ಯೆ ಪ್ರಮಾಣ ಹೆಚ್ಚಾಗಿದೆ ಎಂದು ನಾಲಿಗೆ ಹರಿಬಿಟ್ಟಿದ್ದರು. ರೈತರು ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದಾದರೆ ಅದೇ ಪರಿಹಾರವನ್ನು ದುಪ್ಪಟ್ಟಾಗಿ ಹಿಂತಿರುಗಿಸಿ ಕೊಟ್ಟರೆ ಶಿವಾನಂದ ಪಾಟೀಲರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಯೇ? ಎಂದು ಕಿಡಿಕಾರಿದರು.

ಕೃಷ್ಣಾ ನದಿ ನೀರು ಉಚಿತ, ಉತ್ತರ ಕರ್ನಾಟಕದ ಹಲವು ಪ್ರದೇಶಗಳು ಬರಗಾಲದಿಂದ ತತ್ತರಿಸಿರುವುದರಿಂದ ಮುಖ್ಯಮಂತ್ರಿಗಳು ಉಚಿತವಾಗಿ ಬಿತ್ತನೆಬೀಜ, ಗೊಬ್ಬರವನ್ನೂ ನೀಡುತ್ತಿದ್ದಾರೆ. ಈಗ ರೈತರು ತಮ್ಮ ಸಾಲವನ್ನು ಮನ್ನಾ ಆಗುವುದರಿಂದ ರಾಜ್ಯದಲ್ಲಿ ಪದೇ ಪದೇ ಬರಗಾಲ ಬರಲಿ ಎಂದು ಬಯಸುತ್ತಿದ್ದಾರೆ, ಇದು ಸರಿಯಾದ ಕ್ರಮವಲ್ಲ ಎಂದು ಶಿವಾನಂದ ಪಾಟೀಲ ಹೇಳಿಕೆ ನೀಡಿದ್ದರು.

ಸಚಿವ ಶಿವಾನಂದ ಪಾಟೀಲ ಅವರು ಕೂಡಲೇ ಕ್ಷಮೆಯಾಚಿಸಬೇಕು. ರೈತರ ಬಗ್ಗೆ ಅವರು ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು.

ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ತಮ್ಮ ಸಂಪುಟದಿಂದ ಶಿವಾನಂದ ಪಾಟೀಲರನ್ನು ಕೈಬಿಡಬೇಕು. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಜಗದೀಶ್ ವಿ. ಸದಂ ಒತ್ತಾಯಿಸಿದರು.

ದೇಶದಲ್ಲಿ ದಿನಕ್ಕೆ 30 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮೋದಿ ಸರ್ಕಾರದ 2ನೇ ಅವಧಿಯಲ್ಲಿ, ಒಟ್ಟು 11,290 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕೃಷಿ ಕಾರ್ಮಿಕರ ಆತ್ಮಹತ್ಯೆಗಳು ಮಿತಿಮೀರಿವೆ. ರೈತರ ಆತ್ಮಹತ್ಯೆಯಲ್ಲಿ ನಮ್ಮ ರಾಜ್ಯ 2ನೇ ಸ್ಥಾನದಲ್ಲಿದೆ. ಬೆಳೆ ನಷ್ಟ, ಬೆಳೆಗೆ ಸಿಗದ ಬೆಂಬಲ ಬೆಲೆ, ಸಕಾಲದಲ್ಲಿ ಸಾಲ ಮರುಪಾವತಿಸಲು ಆಗದೆ ಇರುವುದು, ಹೀಗೆ ನಾನಾ ಕಾರಣಗಳಿಂದ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 2082 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿಯಲ್ಲಿ 200 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರುನಲ್ಲಿ 191 ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವರ್ಷ ಕಂಡೂಕೇಳರಿಯದ ಬರಗಾಲ ರಾಜ್ಯವನ್ನು ಆವರಿಸಿದೆ. ಕೇಂದ್ರ ಸರ್ಕಾರ ಇದುವರೆಗೆ ಬಿಡಿಗಾಸು ಬರ ಪರಿಹಾರ ನೀಡಿಲ್ಲ. ರಾಜ್ಯ ಸರ್ಕಾರ ಘೋಷಿಸಿದ್ದ ಮೊದಲ ಕಂತಿನ ₹ 2000 ಕೂಡ ತಲುಪಿಲ್ಲ. ಇಂತಹ ಸಂದರ್ಭದಲ್ಲಿ ರೈತರನ್ನು ಮಾನಸಿಕವಾಗಿ ದುರ್ಬಲರಾಗಿಸುವುದು ಸರಿಯಲ್ಲ.

ರೈತರಿಗೆ ಪರಿಹಾರ ಕೊಡಿಸುವ ಯೋಗ್ಯತೆಯಿಲ್ಲದ ಸಚಿವ ಶಿವಾನಂದ ಪಾಟೀಲ ದುರಹಂಕಾರದಿಂದ ಮಾತನಾಡುತ್ತಾರೆ. ಇತ್ತೀಚೆಗೆ ಹೈದರಾಬಾದ್ ನಲ್ಲಿ ನಡೆದ ಯಾವುದೋ ಕಾರ್ಯಕ್ರಮದಲ್ಲಿ ದುಡ್ಡಿನ ಮೇಲೆ ಕಾಲಿಟ್ಟುಕೊಂಡು ದರ್ಪ ತೋರಿಸಿದ್ದರು. ಸಚಿವರಾದ ಮೇಲೆ ಅಧಿಕಾರ ಮತ್ತು ಹಣದ ಮದ ತಲೆಗೇರಿದೆ. ಅವತ್ತೇ ಪಾಟೀಲರ ವಿರದ್ಧ ಕ್ರಮ ತೆಗೆದುಕೊಂಡಿದ್ದಿದ್ದರೆ ರೈತರ ವಿರುದ್ಧ ಹೀಗೆ ಕೇವಲವಾಗಿ ನಾಲಿಗೆ ಹರಿಬಿಡುತ್ತಿರಲಿಲ್ಲ ಎಂದು ಜಗದೀಶ್ ಅವರು ವಾಗ್ದಾಳಿ ನಡೆಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ