NEWSದೇಶ-ವಿದೇಶಶಿಕ್ಷಣ-

ಸರ್ಕಾರಿ, ಬಿಬಿಎಂಪಿ ಶಾಲೇಲಿ ಓದಿದ ವಿದ್ಯಾರ್ಥಿಗಳು ‘ನೀಟ್‌’ನಂತಹ ಉನ್ನತ ಪರೀಕ್ಷೆಗಳಲ್ಲಿ ಸಾಧನೆ ತೋರುವುದು ಯಾವಾಗ: ಎಎಪಿ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಓದಿದ 1,414 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಇವರಂತೆ ಬಿಬಿಎಂಪಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಇಂಥ ಉನ್ನತ ಪರೀಕ್ಷೆಗಳಲ್ಲಿ ಸಾಧನೆ ತೋರುವುದು ಯಾವಾಗ ಎಂದು ಎಎಪಿ ಪ್ರಶ್ನೆ ಮಾಡಿದೆ.

ನೀಟ್ ಫಲಿತಾಂಶದ ಹಿನ್ನೆಲೆ ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಡಾ. ಬಿ.ಆರ್‌. ಅಂಬೇಡ್ಕರ್‌ ಸ್ಕೂಲ್‌ ಆಫ್‌ ಸ್ಪೆಷಲೈಸ್ಡ್‌ ಎಕ್ಸೆಲೆನ್ಸ್‌ (ಎಸ್ಒಎಸ್ಇ) ಶಾಲೆಯಲ್ಲಿ ಓದಿದ 255 ಅಭ್ಯರ್ಥಿಗಳ ಪೈಕಿ 243 ಅಭ್ಯರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 95.2 ರಷ್ಟು ಸಾಧನೆ ಮಾಡಿದ್ದಾರೆ ಎಂದು ಹೇಳಿದರು.

ಇನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸರ್ಕಾರ ದೆಹಲಿಯ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶಿಕ್ಷಣ ಸಂಸ್ಥೆಗಳನ್ನಾಗಿ ಮಾರ್ಪಡಿಸಿದ್ದರ ಫಲವಿದು. ಇದೊಂದು ಮಹತ್ವದ ಶಿಕ್ಷಣ ಕ್ರಾಂತಿಯಾಗಿದೆ ಎಂದು ಸಂತಸ ವ್ಯಕ್ತ ಪಡಿಸಿದರು.

2020ರಲ್ಲಿ ದೆಹಲಿ ಸರ್ಕಾರಿ ಶಾಲೆಗಳಲ್ಲಿ ಓದಿದ 569 ಅಭ್ಯರ್ಥಿಗಳಷ್ಟೇ ನೀಟ್ ಅರ್ಹತೆ ಪಡೆದಿದ್ದರು. ಕೇವಲ ನಾಲ್ಕು ವರ್ಷಗಳಲ್ಲಿ ಈ ಸಂಖ್ಯೆ 1414ಕ್ಕೆ ಏರಿಕೆಯಾಗಿದೆ. ಕೇಜ್ರಿವಾಲ್‌ ಅವರು ಬಡವರ ಮಕ್ಕಳೂ ಜೆಇಇ, ನೀಟ್‌ನಂತಹ ಉನ್ನತ ಪರೀಕ್ಷೆಗಳನ್ನು ಎದುರಿಸುವ ಮೂಲಕ ವೈದ್ಯಕೀಯ, ಇಂಜಿನಿಯರಿಂಗ್‌ ಕ್ಷೇತ್ರದಲ್ಲಿ ಸಾಧನೆ ಮಾಡುವಂತಾಗಬೇಕು ಎಂಬ ಕಾರಣಕ್ಕೆ ಖಾಸಗಿ ಸಂಸ್ಥೆಗಳಿಗೆ ಪೈಪೋಟಿ ನೀಡುವಂತೆ ಸರ್ಕಾರಿ ಶಾಲೆಗಳನ್ನು ಬೆಳೆಸಿದ್ದಾರೆ ಎಂದರು.

ಇನ್ನು ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿದ್ದರಿಂದ ವರ್ಷದಿಂದ ವರ್ಷಕ್ಕೆ ನೀಟ್‌ ಉತ್ತೀರ್ಣರಾದ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಪಟ್ಟಿ ಬೆಳೆಯುತ್ತ ಹೋಗುತ್ತಿದೆ. ಕಳೆದ ವರ್ಷ 1,361 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಇದು ದೇಶಕ್ಕೆ ಮಾದರಿಯಾಗಿದ್ದು, ಈ ಸಾಧನೆಯನ್ನು ಮನಗಂಡು ಬಿಬಿಎಂಪಿ ಶಾಲೆಗಳನ್ನು ಅತ್ಯುನ್ನತ ಶಿಕ್ಷಣ ಸಂಸ್ಥೆಗಳನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಸರ್ಕಾರಿ ಶಾಲಾ- ಕಾಲೇಜುಗಳು ಹಾಗೂ ಬಿಬಿಎಂಪಿ ಶಾಲೆಯ ಮಕ್ಕಳು ಎಸ್ಎಸ್‌ಎಲ್‌ಸಿ ಪರೀಕ್ಷೆಗಳಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಕನ್ನಡ ವಿಷಯದಲ್ಲೇ ಫೇಲ್‌ ಆಗುತ್ತಿದ್ದಾರೆ. ಆದರೂ ಎಚ್ಚೆತ್ತುಕ್ಕೊಳ್ಳದ ರಾಜ್ಯ ಸರ್ಕಾರ ಈ ಶಾಲೆಗಳಿಗೆ ಸೆಕ್ಯೂರಿಟಿ ಏಜೆನ್ಸಿಗಳ ಮೂಲಕ ಶಿಕ್ಷಕರನ್ನು ನೇಮಿಸಲು ಮುಂದಾಗುತ್ತಿದೆ.

ಮಕ್ಕಳ ಶೈಕ್ಷಣಿಕ ಪ್ರವಾಸ, ವಾರ್ಷಿಕೋತ್ಸವ, ಪರೀಕ್ಷೆ ವೆಚ್ಚಕ್ಕೆ ಸರ್ಕಾರ ನೀಡುವ ಧನಸಹಾಯವನ್ನು ಲೂಟಿ ಮಾಡಲಾಗುತ್ತಿದೆ. ಈಗಾಗಲೇ ತರಗತಿಗಳು ಆರಂಭವಾಗಿವೆ. ಆದರೆ ಶಿಕ್ಷಕರ ನೇಮಕಾತಿಯಾಗಿಲ್ಲ. ಇಂತಹ ಅಧ್ವಾನಗಳ ನಡುವೆ ಸರ್ಕಾರಿ ಶಾಲೆ ಮಕ್ಕಳು ಭವಿಷ್ಯದಲ್ಲಿ ಸಾಧನೆ ತೋರಲು ಹೇಗೆ ಸಾಧ್ಯ ಎಂದು ಕಿಡಿಕಾರಿದರು.

ಈ ಬಾರಿ ಬಿಬಿಎಂಪಿ ಶಾಲೆಗಳಿಗೆ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಯಲ್ಲೂ ಭಾರಿ ಇಳಿಕೆಯಾಗಿದೆ. ಒಂದು ಕಡೆ ರಾಜ್ಯದ ಶಾಸಕರೊಬ್ಬರು ಪ್ರತಿಷ್ಠಿತ ನೀಟ್ ಸಂಸ್ಥೆಯನ್ನು ಸ್ಥಾಪಿಸಿ ವರ್ಷಪೂರ್ತಿ ನೂರಾರು ಕೋಟಿ ಆದಾಯಗಳಿಸುತ್ತಿದ್ದರೆ ಮತ್ತೊಂದು ಕಡೆ ಖಾಸಗಿ ಸಂಸ್ಥೆಗಳ ಲಾಬಿಗೆ ಒಳಗಾಗಿರುವ ರಾಜ್ಯ ಸರ್ಕಾರ ಕಳೆಪೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಸರ್ಕಾರಿ ಶಾಲೆಗಳನ್ನು ವ್ಯವಸ್ಥಿತವಾಗಿ ಮುಗಿಸುತ್ತಿದೆ. ಬಡವರ ಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದೆ ಎಂದು ಜಗದೀಶ್‌ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ