NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29) ಕ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ಬಹುತೇಕ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆಯು ಆಯಾಯ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಾರಿಗೆ ನೌಕರರು ಈ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಇದಕ್ಕೆ ಸಮಸ್ತ ಅಧಿಕಾರಿ ವರ್ಗವದವರು ಬೆಂಬಲ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅಲ್ಲದೆ ಬಸ್‌ ನಿಲ್ಲಿಸಿ ಮುಷ್ಕರ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಅಧಿಕಾರಿಗಳು ನಮ್ಮ ಶಾಂತಿಯುತ ಹೋರಾಟವನ್ನು ಬೆಂಬಲಿಸುವುದಾಗಿ ಈ ಹಿಂದೆಯೇ ವಿಜಯಪಥಕ್ಕೆ ತಿಳಿಸಿದ್ದರು. ಅದಂತೆ ನಾಳೆಯಿಂದ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಕ್ಕೆ ಬೇಷರತ್ತಾಗಿ ನಾವು ಬೆಂಬಲ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಹೀಗಾಗಿ ಸಾರಿಗೆ ನೌಕರರಿಗೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಅಂದರೆ ವಿಧಾನಸಭಾ ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿ ಮಾಡಬೇಕು ಎಂದು ಬೇಡಿಕೆ ಸಮಸ್ತ ಅಧಿಕಾರಿಗಳು ಹಾಗೂ ನೌಕರರ ಆಗ್ರಹವಾಗಿದೆ.

ಇದರ ಜತೆಗೆ 01/01/2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡಬೇಕು (ನಿವೃತ್ತ ನೌಕರರಿಗೆ ಮೊದಲ ಅದ್ಯತೆಯಲ್ಲಿ ಅವರ ಹಿಂಬಾಕಿ ಮತ್ತು ಇತರೆ ಸೇವಾ ಆರ್ಥಿಕ ಸೌಲಭ್ಯಗಳನ್ನು ನೀಡುವುದು) ಎಂಬ ಬೇಡಿಕೆಯೂ ಇದೆ.

ಇನ್ನು ಪ್ರಮುಖವಾಗಿ 2020 ಮತ್ತು 2021ರ ಸಾರಿಗೆ ಮುಷ್ಕರದ ಸಮಯದಲ್ಲಿ ಆಗಿರುವ ವಜಾ ಮತ್ತು ಇತರೆ ಪ್ರಕರಣಗಳ ಶಿಕ್ಷಾದೇಶಗಳನ್ನು ರದ್ದು ಪಡಿಸಿ ಸೌಹರ್ದ ರೀತಿಯಲ್ಲಿ ಇತ್ಯರ್ಥ ಪಡಿಸುವುದು ಹಾಗೂ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಇದರ ನಡುವೆ ಸಾರಿಗೆ ಸಂಘಟನೆಗಳ ಮುಖಂಡರು ಅದರಲ್ಲೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು 1992 ನಂತರ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಯದೆ ಇರುವುದರಿಂದ, ಕೂಡಲೆ” ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ಮಾಡಲು ಆದೇಶ ಮಾಡಬೇಕು ಎಂದು ಒತ್ತಾಯಿಸಿ ಈ ಧರಣಿ ಹಮ್ಮಿಕೊಳ್ಳುತ್ತಿದ್ದಾರೆ.

ಅಲ್ಲದೆ ಈ ಧರಣಿ ಸತ್ಯಾಗ್ರಹಕ್ಕೆ ಸಮಸ್ತ ಮಾಧ್ಯಮದವರು ನಮ್ಮ ಬೆಂಬಲಕ್ಕೆ ನಿಲ್ಲುವ ಮೂಲಕ ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಸಿಕೊಳ್ಳಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Megha
the authorMegha

Leave a Reply

error: Content is protected !!