ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಯುವಕನೋರ್ವ ಸಜೀವ ದಹನಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ನಡೆದಿದೆ.
ಅರಳೀಕಟ್ಟೆ ಗ್ರಾಮದ ಸಿದ್ದೇಶ್ವರ್ (35) ಅವಘಡದಲ್ಲಿ ಮೃತಪಟ್ಟವರು. ಸಿದ್ದೇಶ್ವರ್ ಟಾಟಾ ನೆಕ್ಸಾನ್ ಕಾರಿನಲ್ಲಿ ಹಿರಿಯೂರಿನಿಂದ ಅರಳೀಕಟ್ಟೆಗೆ ಮರಳುತ್ತಿದ್ದರು.
ಈ ವೇಳೆ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅವರು ಇಳಿಯಲು ಪ್ರಯತ್ನಪಟ್ಟರು ಸಾಧ್ಯವಾಗಿಲ್ಲ. ಹೀಗಾಗಿ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದ್ದು, ಬೆಂಕಿಯಲ್ಲಿ ಸಿಲುಕಿ ಸಜೀವದಹನವಾಗಿದ್ದಾರೆ.
ಬೆಂಕಿಯ ಕೆನ್ನಾಲಿಗೆ ಸಿಲುಕಿದ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದ್ದು ಕಾರಿನಲ್ಲಿದ್ದ ಸಿದ್ದೇಶ್ವರ್ ಸಂಪೂರ್ಣ ಸುಟ್ಟು ಹೋಗಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಕಸ್ಮಿಕವಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರ ಕಾರಣ ಏನು ಎಂದು ತಾಂತ್ರಿಕ ನಿಪುಣರಿಂದ ತಿಳಿದು ಬರಬೇಕಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Related
