NEWSಕೃಷಿನಮ್ಮರಾಜ್ಯ

ತಿಮ್ಮಕ್ಕ ವಸ್ತು ಸಂಗ್ರಹಾಲಯ ಬಗ್ಗೆ ಸರ್ಕಾರ ಪರಿಶೀಲಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸಾಲುಮರದ ತಿಮ್ಮಕ್ಕನವರು 114 ವರ್ಷಗಳ ಕಾಲ ಬದುಕಿ ದೈವಾಧೀನರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇತ್ತೀಚೆಗೆ ಅಗಲಿದ ತಿಮ್ಮಕ್ಕನವರಿಗೆ ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಆದರಂಭವಾದ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಂತಾಪ ಸೂಚಿಸಿದರು.

ಇವರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ್ದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತು ಜನರಿಗೆ ನೆರಳು ನೀಡುತ್ತಿವೆ. ಸುಮಾರು 4,000 ಕ್ಕೂ ಹೆಚ್ಚು ಮರಗಳನ್ನು ಬೆಳೆಸುವ ಮೂಲಕ ಸಾಲುಮರದ ತಿಮ್ಮಕ್ಕ ಎಂದೇ ಹೆಸರುವಾಸಿಯಾಗಿದ್ದರು.

ತಿಮ್ಮಕ್ಕನವರು ಬೆಳೆಸಿದ ಮರಗಳು ದಶಕಗಳಷ್ಟು ಹಳೆಯದಾಗಿದ್ದು, ಅವುಗಳು ಪರಿಸರಕ್ಕೆ ಮತ್ತು ಜೀವವೈವಿಧ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

ತಿಮ್ಮಕ್ಕ ಅವರು ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ತಮ್ಮ ಕೊನೆಯ ಆಸೆಯನ್ನು ಪತ್ರ ಮುಖೇನ ತಿಳಿಸಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ ಎಂದು ಹೇಳಿದರು.

ಇನ್ನು ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ ಬೆಳೆಸಿದ್ದ ತಿಮ್ಮಕ್ಕ ಅವರ ಸಾಧನೆಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ ಸಂದಿದೆ. 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಹಾಗೂ ನಾಡೋಜ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ಪರಿಸರದ ಬಗೆಗಿನ ಇವರ ಅತೀವ ಕಾಳಜಿಯನ್ನು ಪರಿಗಣಿಸಿ ಸರ್ಕಾರವು ಇವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಪರಿಸರ ರಾಯಭಾರಿಯನ್ನಾಗಿ ನೇಮಿಸಿತ್ತು. ಅರಣ್ಯ ಇಲಾಖೆಯ ವತಿಯಿಂದ ಪರಿಸರವಾದಿಗಳಿಗೆ ಪ್ರತಿವರ್ಷ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಕೊಡುವ ಬಗ್ಗೆ ಈಗಾಗಲೇ ಘೋಷಣೆ ಮಾಡಿದ್ದೇವೆ.

ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು.

Megha
the authorMegha

Leave a Reply

error: Content is protected !!