NEWSಕೃಷಿನಮ್ಮರಾಜ್ಯ

ರೈತರ ಸಮಸ್ಯೆಗಳ ಬಗೆಹರಿಸಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಇಂದು ಸಭೆ ನಡೆಸಿ ಅವರು ಮಾತನಾಡಿದರು.

ನಮ್ಮ ಸರ್ಕಾರ ಬಂದ ಬಳಿಕ ಪ್ರತಿ ಲೀಟರ್ ಹಾಲಿಗೆ ₹5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಖರೀದಿಗೆ ₹5 ಕೋಟಿ ಪ್ರೋತ್ಸಾಹ ಧನವನ್ನು ರೈತರಿಗೆ ನೀಡುತ್ತಿದ್ದೇವೆ. ಕಬ್ಬಿನ ತೂಕದಲ್ಲಿ ಸಕ್ಕರೆ ಕಾರ್ಖಾನೆಗಳು ಮಾಡುವ ಮೋಸವನ್ನು ತಪ್ಪಿಸಲು, ಇಳುವರಿ ನಿಗದಿಯನ್ನು ವೈಜ್ಞಾನಿಕವಾಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಇನ್ನು ಭೂ ಸುಧಾರಣಾ ಕಾಯ್ದೆಗೆ ಹಿಂದಿನ ಸರ್ಕಾರ ಮಾಡಿರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರೈತರ ಬೇಡಿಕೆಗಳೇನು?: ನೀರಾವರಿಗೆ ವಿದ್ಯುತ್‌ ಸಮಸ್ಯೆಯಿದ್ದು, 12 ತಾಸು ನಿರಂತರ ವಿದ್ಯುತ್‌ ಪೂರೈಕೆ ಮಾಡಬೇಕು, ಅಕ್ರಮ – ಸಕ್ರಮ ಯೋಜನೆಯನ್ನು ಪುನಾರಂಭಿಸಬೇಕು, ಕಾಡುಪ್ರಾಣಿಗಳಿಂದ ಬೆಳೆ ಹಾನಿ ಪರಿಹಾರ ಧನ ಹೆಚ್ಚಿಸಬೇಕು.

ರೈತರ ಉತ್ಪನ್ನಗಳ ಖರೀದಿಗೆ ಕಾರ್ಪಸ್‌ ಫಂಡ್‌ ಆರಂಭಿಸಬೇಕು. ಪಂಚಾಯಿತಿ ಮಟ್ಟದಲ್ಲಿ ಪಶು ವೈದ್ಯರ ನೇಮಕ ಮಾಡಬೇಕು. ಬೆಳಗಾವಿಯಲ್ಲಿ ಆರಂಭಿಸಲಾಗಿರುವ ಸಕ್ಕರೆ ಆಯುಕ್ತರ ಕಚೇರಿಗೆ ಅಗತ್ಯ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ರೈತ ಪ್ರತಿನಿಧಿಗಳು ಬೇಡಿಕೆಯ ಈಡೇರಿಕೆಯ ಮನವಿ ಸಲ್ಲಿಸಿದರು. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಲಾಗುವುದು ಸಿಎಂ ಹೇಳಿದರು.

ಇನ್ನು ರೈತರಿಗೆ 7 ಗಂಟೆ ಕಾಲ ನಿರಂತರ ವಿದ್ಯುತ್‌ ಒದಗಿಸಲು ಸರ್ಕಾರ ಬದ್ಧವಾಗಿದೆ. ವಿದ್ಯುತ್‌ ಉತ್ಪಾದನೆ ಹೆಚ್ಚಾದಾಗ ವಿದ್ಯುತ್‌ ಪೂರೈಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ರೈತರ ವಿಷಯದಲ್ಲಿ ಸರ್ಕಾರ ಯಾವುದೇ ಆತ್ಮವಂಚನೆ ಮಾಡುವುದಿಲ್ಲ. ನಮ್ಮ ಸರ್ಕಾರ ರೈತ ಪರವಿದ್ದು, ಅನ್ನದಾತರ ಎಲ್ಲ ಸಮಸ್ಯೆಗಳಿಗೂ ನ್ಯಾಯಯುತ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದರು.

ಈ ವೇಳೆ ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿದರು.

Megha
the authorMegha

Leave a Reply

error: Content is protected !!