ಬಾಗಲಕೋಟೆ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಲಾಜಿಸ್ಟಿಕ್ ಗೂಡ್ಸ್ ಲಾರಿ ನಡುವೆ ಮುಧೋಳ ತಾಲೂಕಿನ ಲೋಕಾಪುರ ಬಳಿ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬಸ್ ಚಾಲಕನ ಕಾಲು ಕಟ್ಟಾಗಿದ್ದು ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು ಗಾಯಾಳುಗಳನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
NWKRT ಬಾಗಲಕೋಟೆ ವಿಭಾಗದ ಇಳಕಲ್ ಘಟಕದ ಬಸ್ ಹಾಗೂ ಸಾಯಿ ಲಾಜಿಸ್ಟಿಕ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಚಾಲಕನ ಕಾಲು ತುಂಡಾಗಿದೆ. ಜತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾವೂರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಡಿಕ್ಕಿಯ ರಭಸಕ್ಕೆ ಬಸ್ನ ಅರ್ಧಕ್ಕೂ ಹೆಚ್ಚು ಭಾಗ ಚಾಲಕನ ಸೈಡಿನಲ್ಲಿ ಕಿತ್ತುಬಂದಿದ್ದರೆ ಲಾರಿಯ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ.
ಇತ್ತ ಈ ಭೀಕರ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಲೋಕಾಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ರಸ್ತೆ ಅಪಘಾತಗಳು: ರಾಜ್ಯದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೆದ್ದಾರಿಗಳಲ್ಲಿ ವೇಗ ಮಿತಿ ಪಾಲನೆ, ಸುರಕ್ಷತಾ ನಿಯಮಗಳು ಮತ್ತು ಚಾಲಕರ ಆರೋಗ್ಯ ಪರೀಕ್ಷೆ ಕಡ್ಡಾಯಗೊಳಿಸಬೇಕು ಎಂಬ ಬೇಡಿಕೆಗಳು ಗಟ್ಟಿಯಾಗಿವೆ.
ಸಾರಿಗೆ ಬಸ್ಗಳು ಜನರ ಜೀವನದಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಆದರೆ ಯಾರೋ ಚಾಲಕರು ಮಾಡುವ ತಪ್ಪುಗಳಿಂದ ಅಮಾಯಕರು ಬಲಿಯಾಗುತ್ತಿದ್ದಾರೆ.
Related










