
ಬೆಂ.ಗ್ರಾ.: ಬಾಬು ಜಗಜೀವನರಾಂ ಅವರು ನಮಗೆಲ್ಲರಿಗೂ ಮಾರ್ಗದರ್ಶಕರು, ಅವರ ಬದುಕು ನಮಗೆ ಪ್ರೇರಣೆಯಾಗಬೇಕು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜಯಂತಿಯನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಆಡು ಮುಟ್ಟದ ಸೊಪ್ಪಿಲ್ಲ ಬಾಬೂಜೀ ನಿರ್ವಹಿಸದ ಖಾತೆಗಳಿಲ್ಲ’ ಎಂಬ ಮಾತೇ ಇದೆ. ಭಾರತದ ಉಪ ಪ್ರಧಾನಿಗಳಾಗಿ, ವಾರ್ತಾ ಮತ್ತು ಪ್ರಚಾರ, ಸಾರಿಗೆ, ರೈಲ್ವೆ, ಕಾರ್ಮಿಕ ಮತ್ತು ಪುನರ್ವಸತಿ, ಆಹಾರ, ಕೃಷಿ, ಸಹಕಾರ, ನೀರಾವರಿ ಇತ್ಯಾದಿ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಬಾಬು ಜಗಜೀವನರಾಮ್ ಅವರು ವಿಶೇಷವಾಗಿ 1970-74ರಲ್ಲಿ ರಕ್ಷಣಾ ಸಚಿವರಾಗಿ ಅಮೋಘ ಸಾಧನೆ ಮಾಡಿದರು. ಅವರ ಕಾಯಕ ನಿಷ್ಠೆ ನಮ್ಮೆಲ್ಲರಿಗೂ ಪ್ರೇರಣೆ ಎಂದರು.
ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್.ಅನುರಾಧ ಮಾತನಾಡಿ, ಡಾ.ಬಾಬು ಜಗಜೀವನ ರಾಮ್ ಅವರು ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ. ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು. ಅವರ ದಕ್ಷ ಆಡಳಿತದಿಂದ ನಮ್ಮ ಮುಂದೆ ಅವರು ಆದರ್ಶಪ್ರಾಯರಾಗಿದ್ದಾರೆ. ಕೃಷಿ ಸಚಿವರಾಗಿ ಅವರು ಮಾಡಿದ ವಿನೂತನ, ಅಮೋಘ ಸೇವೆಗೆ ದೇಶ ಅವರನ್ನು ‘ಹಸಿರು ಕ್ರಾಂತಿಯ ಹರಿಕಾರ’ ಎಂದೇ ಕರೆಯಿತು. ಇಂದು ಭವಿಷ್ಯದ ಭಾರತಕ್ಕೆ ನಮ್ಮೆಲ್ಲರಿಗೂ ಆದರ್ಶರಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಟಿ.ಎಲ್.ಎಸ್.ಪ್ರೇಮಾ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಶಂಕರ್ ಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
