ಬೆಂಗಳೂರು: ದೇಶದ ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರೂ ಆದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿ ಸಿ.ಎನ್.ಮಂಜುನಾಥ್ ಅವರು ಭಾರಿ ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ.
ಮಂಜುನಾಥ್ ಅವರ ಮುನ್ನಡೆ ಅಂತರ ನಿರಂತರವಾಗಿ ಏರುತ್ತಲೇ ಇದೆ. ಇದನ್ನು ಗಮನಿಸಿದರೆ ಬಹುತೇಕ ಮಂಜುನಾಥ್ ಅವರಿಗೆ ಗೆಲುವು ಸುಲಭವಾಗಲಿದೆ ಎಂದು ಹೇಳಲಾಗುತ್ತಿದ್ದು, ಬೆಳಗ್ಗೆ 10.28ರ ಹೊತ್ತಿಗೆ ಕಾಂಗ್ರೆಸ್ನ ಡಿ.ಕೆ.ಸುರೇಶ್ ಅವರಿಗಿಂತ ಮಂಜುನಾಥ್ ಅವರು 73.000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದೇ ಟ್ರೆಂಡ್ ಮುಂದುವರಿದರೆ ಮಂಜುನಾಥ್ ಅವರಿಗೆ ಗೆಲುವು ಭಾರಿ ಸುಲಭವಾಗಲಿದೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಅಳಿಯರಾಗಿರುವ ಮಂಜುನಾಥ್ ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆ ಸ್ಪರ್ಧಿಸಿದ್ದಾರೆ. ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಂಜುನಾಥ್ ಹಾಲಿ ಸಂಸದ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ವಿರುದ್ಧ ಪ್ರಚಂಡ ಮುನ್ನಡೆ ಸಾಧಿಸಿ, ಗೆಲುವಿನತ್ತ ದಾಪುಗಾಲು ಇಡುತ್ತಿದ್ದಾರೆ.
ಟ್ರೆಂಡ್ ಪ್ರಕಾರ ಒಟ್ಟು 545 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 296ರಲ್ಲಿ ಮತ್ತು ಕಾಂಗ್ರೆಸ್ 226ರಲ್ಲಿ ಹಾಗೂ ಇತರೆ 21ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 18, ಕಾಂಗ್ರೆಸ್ 8 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.