ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಎಚ್.ಡಿ.ಕುಮಾರಸ್ವಾಮಿ, ನಿರ್ಗಮಿತ ರಾಜ್ಯಪಾಲರಾದ ಜಗದೀಪ್ ಧನಕರ್ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 10ಗಂಟೆ ಸುಮಾರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.
ಈ ವೇಳೆ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ.ರಾಧಾಕೃಷ್ಣನ್ ಗೆಲುವು ಸಾಧಿಸಿದ್ದರು. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದು ಪರಾಭವಗೊಂಡಿದ್ದರು.
ರಾಜೀನಾಮೆ ಬಳಿಕ ಕಾಣಿಸಿಕೊಂಡ ಧನಕರ್: ಇನ್ನೂ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ, ರಾಜೀನಾಮೆ ನೀಡಿದ ಉಪರಾಷ್ಟ್ರಪತಿ ಹಾಗೂ ಪ್ರಸ್ತುತ ಉಪರಾಷ್ಟ್ರಪತಿಗಳು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಜಗದೀಪ್ ಧನಕರ್ ರಾಜೀನಾಮೆ ಬಳಿಕ ಮೊದಲ ಬಾರಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಹಲವರ ಅಚ್ಚರಿಗೆ ಕಾರಣವಾಗಿದೆ.

Related









