CrimeNEWSನಮ್ಮಜಿಲ್ಲೆ

ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ (76) ನಿಧನರಾಗಿದ್ದಾರೆ. ತಡರಾತ್ರಿ 1.20ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚೆಗೆ ಬಹು ಅಂಗಾಂಗ ವೈಫಲ್ಯದಿಂದಾಗಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ತಡರಾತ್ರಿ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ.

ಶ್ರೀನಿವಾಸ್ ಪ್ರಸಾದ್ ಅವರು ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದರು. ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದರು. ಮೂಲತಃ ಮೈಸೂರಿನ ಅಶೋಕಪುರಂನವರಾದ ಶ್ರೀನಿವಾಸ ಪ್ರಸಾದ್ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಮೃತರು ಪತ್ನಿ ಭಾಗ್ಯಲಕ್ಷ್ಮಿ ಪ್ರಸಾದ್, ಪುತ್ರಿಯರಾದ ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್, ಪೂನಂ ಪ್ರಸಾದ್ ಹಾಗೂ ಅಪಾರ ಬಂಧು-ಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗಿದ್ದು ಜಯಲಕ್ಷ್ಮೀ ಪುರಂನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

1980ರಲ್ಲಿ ಮೊದಲ ಬಾರಿ ಗೆಲುವು: 1947ರ ಆಗಸ್ಟ್ 6ರಂದು ಮೈಸೂರಿನಲ್ಲಿ ಜನಿಸಿದ ವೆಂಕಟಯ್ಯ ಶ್ರೀನಿವಾಸ್ ಪ್ರಸಾದ್ ಅವರು ಮೈಸೂರು ಭಾಗದ ಪ್ರಮುಖ ದಲಿತ ನಾಯಕರಲ್ಲಿ ಒಬ್ಬರಾಗಿದ್ದರು. 1974ರಲ್ಲಿ ರಾಜಕೀಯಕ್ಕೆ ಪದಾರ್ಪಣೆ ಮಾಡಿದ ಅವರು 1980ರಲ್ಲಿ ಮೊದಲ ಬಾರಿಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಂಸದರಾಗಿ ಲೋಕಸಭೆಗೆ ಕಾಲಿಟ್ಟರು. 1984, 1989, 1991ರಲ್ಲೂ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದರು.

1999ರಿಂದ ಜೆಡಿಯು ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ 1999ರಿಂದ 2004ರವರೆಗೆ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಮತ್ತೆ ಕಾಂಗ್ರೆಸ್ ಸೇರಿದ ಅವರು 2008ರಲ್ಲಿ ಮತ್ತು 2013ರಲ್ಲಿ ಕಾಂಗ್ರೆಸ್‌ನಿಂದ ನಂಜನಗೂಡು ಸಂಸದರಾಗಿ ಆಯ್ಕೆಯಾಗಿದ್ದರು.2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಕಾಂಗ್ರೆಸ್, ಜನತಾ ದಳ, ಬಿಜೆಪಿ ಮತ್ತು ಪಕ್ಷೇತರರಾಗಿಯೂ ಒಟ್ಟು 14 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಅವರು 11 ಬಾರಿ ಗೆಲುವು ಸಾಧಿಸಿದ್ದರು. ಅದರಲ್ಲಿ 6 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರೆ, 5 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು.

2016ರಲ್ಲಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಿಂದ ತೆಗೆದಾಗ ಮುನಿಸಿಕೊಂಡು ಬಿಜೆಪಿ ಸೇರಿದ್ದರು. 2019ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದು ಕಾಂಗ್ರೆಸ್‌ನ ಆರ್.ಧ್ರುವನಾರಾಯಣ್ ಅವರನ್ನು ಸೋಲಿಸಿದ್ದರು.

ಸ್ಪರ್ಧಾ ಕಣದಿಂದ ನಿವೃತ್ತಿ ಘೋಷಿಸಿದ್ದರು: ಸುದೀರ್ಘ 50 ವರ್ಷಗಳ ರಾಜಕೀಯ ಜೀವನದ ಅನುಭವ ಹೊಂದಿದ್ದ ಅವರು ಇದೀಗ ನಡೆಯುತ್ತಿರುವ ಲೋಕಸಭಾ ಚುನಾವಣೆಗೂ ಮುನ್ನವೇ ಚುನಾವಣಾ ರಾಜಕಾರಣದಿಂದ ವಯಸ್ಸಿನ ಕಾರಣಕ್ಕೆ ನಿವೃತ್ತಿ ಘೋಷಿಸಿದ್ದರು. ಆದರೆ ತಮ್ಮ ಅಳಿಯ ಹರ್ಷವರ್ಧನ್ ಅವರಿಗೆ ಇಲ್ಲಿ ಟಿಕೆಟ್ ನೀಡುವಂತೆ ಅವರು ಪಕ್ಷವನ್ನು ಒತ್ತಾಯ ಮಾಡಿದ್ದರು. ಆದರೆ ಬಿಜೆಪಿಯಿಂದ ಎಸ್.ಬಾಲರಾಜ್ ಅವರನ್ನು ಕಣಕ್ಕಿಳಿಸಲಾಗಿದೆ.

ಇದರಿಂದ ಅಸಮಾಧಾನಗೊಂಡಿದ್ದ ಅವರು ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್ ಮುಖಂಡರು ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ತೆರಳಿ ಭೇಟಿ ಮಾಡಿ ಕಾಂಗ್ರಸ್‌ ಸೇರುವಂತೆ ಮಾತುಕತೆ ನಡೆಸಿದ್ದರು.

ಇದರಿಂದ ಎಚ್ಚೆತ್ತ ಬಿಜೆಪಿ ಸಹ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆಸಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಧಾನ ನಡೆಸಿದ್ದರು. ಈ ವೇಳೆ ಅವರು ತಾನು ಬಿಜೆಪಿ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದರು.

ಮೈಸೂರಿನಲ್ಲಿ ನಡೆದ ಪ್ರಧಾನಿ ಮೋದಿ ಬಹಿರಂಗ ಸಮಾವೇಶಕ್ಕೆ ಆಹ್ವಾನಿಸಿದಾಗ ವಯಸ್ಸು ಮತ್ತು ಅನಾರೋಗ್ಯದ ಕಾರಣವನ್ನು ನೀಡಿ ನಯವಾಗಿ ತಿರಸ್ಕರಿಸಿದ್ದರು. ಹೀಗಾಗಿ ಮೋದಿ ಸಮಾವೇಶದಲ್ಲಿ ಅವರು ಕಾಣಿಸಿಕೊಂಡಿರಲಿಲ್ಲ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ