KSRTC ನೌಕರರ ವೇತನ ಹೆಚ್ಚಳ ಸಂಬಂಧ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಿಎಂ ನೇತೃತ್ವದಲ್ಲಿ ಸಭೆ: ಸಚಿವ ರಾಮಲಿಂಗಾರೆಡ್ಡಿ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸಂಬಂಧ ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾರ್ಮಿಕ ಮುಖಂಡರ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಂಸ್ಥೆಗಳಲ್ಲಿ ನೌಕರರ ವೇತನ ಹೆಚ್ಚಳ ವಿಷಯ ಬಿಟ್ಟರೆ ಬೇರೆ ಸಮಸ್ಯೆ ಇಲ್ಲ ಎಂದರು.
ಇನ್ನು ನೌಕರರ ವೇತನ ಹೆಚ್ಚಳದ ಸಂಬಂಧ ಐದು ದಿನಗಳ ಹಿಂದೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಶೀಘ್ರವೇ ಸಭೆ ನಡೆಸೋಣ ಎಂದಿದ್ದಾರೆ ಎಂದು ತಿಳಿಸಿದರು.
ಅಲ್ಲದೆ ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಅಧಿವೇಶನಕ್ಕೂ ಮೊದಲೇ ಸಭೆ ನಡೆಸುವ ಸಂಬಂಧ ಮುಖ್ಯಮಂತ್ರಿ ಅವರ ಗಮನಕ್ಕೆ ತರುತ್ತೇನೆ ಎಂದು ತಿಳಿಸಿರುವುದಾಗಿ ಪ್ರತಿಕ್ರಿಯಿಸಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಏನೂ ಗೊತ್ತಿಲ್ಲ: ಇನ್ನು ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಕಬ್ಬಿನ ದರ ಸೇರಿ ವಿವಿಧ ವಿಷಯಗಳ ಬಗ್ಗೆ ಮಾತನಾಡಲು ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಲು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡುವುದು ವಾಡಿಕೆ. ಏನೇನು ಮಾತುಕತೆ ನಡೆದಿದೆ ಎಂಬುದು ನನಗೆ ಗೊತ್ತಿಲ್ಲ ಪತ್ರಿಕೆಗಳಲ್ಲಿ ಬಂದಿರುವ ಸುದ್ದಿಯನ್ನು ಓದಿದ್ದೇನೆ ಅಷ್ಟೇ ಎಂದು ಹೇಳಿದರು.
ಬರುವ ಡಿಸೆಂಬರ್ 8ರಿಂದ ವಿಧಾನಸಭೆ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿರುವ ಸವರ್ಣಸೌಧದಲ್ಲಿ ನಡೆಯಲಿದೆ. ಅದಕ್ಕೂ ಮುನ್ನ ಸಾರಿಗೆ ನೌಕರರ ವೇತನ ಸಂಬಂಧ ನೌಕರರ ಮುಖಂಡರೊಂದಿಗೆ ಸಭೆ ನಡೆಸುವುದಾಗಿ ಸಚಿವರು ತಿಳಿಸಿದ್ದು, ಇದು ಒಳ್ಳೆಯ ಬೆಳವಣಿಗೆಯಾಗಿದೆ.
ಈ ನಡುವೆ ಸಾರಿಗೆ ನೌಕರರ ಕುಟುಂಬ ಸದಸ್ಯರು ವೇತನ ಹೆಚ್ಚಳ ಮಾಡದಿರುವ ಬಗ್ಗೆ ಹಾಗೂ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡದಿರುವ ಬಗ್ಗೆ ಹೋರಾಟಕ್ಕೆ ಹಣಿಯಾಗುತ್ತಿದ್ದು, ಈಗಾಗಲೇ ಈ ಸಂಬಂಧ ಒಂದೆರಡು ಗೌಪ್ಯ ಸಭೆಗಳು ಕೂಡ ನಡೆದಿವೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎಚ್ಚೆತ್ತುಕೊಂಡು ಸಭೆ ಕರೆದಿರುವುದು ಉತ್ತಮ ಬೆಳವಣಿಗೆ. ಅಲ್ಲದೆ ಸರ್ಕಾರಕ್ಕೆ ಮುಂದೆ ಆಗುವ ಮುಜುಗರವನ್ನು ತಪ್ಪಿಸಿಕೊಳ್ಳಬಹುದಾಗಿದೆ ಎಂದು ನೌಕರರ ಕುಟುಂಬ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ.
Related









