NEWSಕೃಷಿನಮ್ಮರಾಜ್ಯ

2026-27ನೇ ಸಾಲಿನ ರಾಜ್ಯ ಬಜೆಟ್ ಪೂರ್ವ ಭಾವಿ ಸಭೆ: ರೈತ ಮುಖಂಡರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೈತ ಸಂಘಟನೆಗಳ ಮುಖಂಡರು ಮತ್ತು ಕೃಷಿ ಸಂಸ್ಥೆಗಳ ಪ್ರತಿನಿಧಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಅಹವಾಲು ಆಲಿಸಿದರು. ಈ ವೇಳೆ ಬಜೆಟ್‌ನಲ್ಲಿ ಸಾಧ್ಯವಾಗುವ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದರು.

ರೈತರ ಬೇಡಿಕೆಗಳು, ನಿರೀಕ್ಷೆಗಳು ಏನು?: ಕಬ್ಬಿನ ಬೆಲೆ ನಿಗದಿ ರೈತರ ಹೊಲದಲ್ಲಿನ ದರ ಎಂದು ನಿಗದಿಪಡಿಸಬೇಕು. ಕಟಾವು ಸಾಗಾಣಿಕೆ ವೆಚ್ಚವನ್ನು ಕಾರ್ಖಾನೆಗಳು ಬರಿಸುವಂತಾಗಬೇಕು. ರಾಜ್ಯಾದ್ಯಂತ ಎಲ್ಲ ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಸಾಗಿಸಬೇಕು.

ಕಿಸಾನ್ ಸಮ್ಮಾನ್ ಯೋಜನೆ ಪುನಾ ಜಾರಿಗೆ ತಂದು ರೈತರಿಗೆ ಹತ್ತು ಸಾವಿರ ಧನ ಸಹಾಯ ನೀಡಬೇಕು. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು.

ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು. ಅಲ್ಲದೆ ಎಪಿಎಂಸಿಗಳಲ್ಲಿ ರೈತರ ಉತ್ಪನ್ನಗಳ ಅಡಮಾನ ಸಾಲ ನೀಡುವ ಯೋಜನೆಗೆ ಹೆಚ್ಚು ಹಣಕಾಸು ನೀಡಿ ಸದೃಢಗೊಳಿಸಬೇಕು. ಕಳಪೆ ಕೀಟನಾಶಕ, ಬೀಜ, ನಕಲಿ ಗೊಬ್ಬರ, ನರ್ಸರಿ ಸಸಿಗಳ ಮಾರಾಟ ಮಾಡುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಬೇಕು.

ರೈತರ ಎಲ್ಲ ಬೆಳೆಗಳಿಗೂ ಬೆಳೆವಿಮೆ ಜಾರಿಗೆ ತರಬೇಕು. ಅತಿವೃಷ್ಟಿ, ಮಳೆಹಾನಿ, ಅನಾವೃಷ್ಟಿ, ಪ್ರಕೃತಿ ವಿಕೋಪ ಬೆಳೆ ನಷ್ಟಕ್ಕೆ ವಿಮಾ ಪರಿಹಾರ ಸಿಗುವಂತಾಗಬೇಕು. ಬ್ಯಾಂಕುಗಳಲ್ಲಿ ಕೃಷಿ ಸಾಲ ನೀತಿ ಬದಲಾಗಬೇಕು. ರೈತರ ಭೂಮಿಯ ಮೌಲ್ಯಕ್ಕೆ ಶೇ.75ರಷ್ಟು ಸಾಲ ನೀಡುವ ಯೋಜನೆ ಜಾರಿಗೆ ತರಬೇಕು.

ಕಬ್ಬಿನ ಅಲ್ಪಾವಧಿ ಬೆಳೆ ಸಾಲ 18 ತಿಂಗಳಿಗೆ ವಿಸ್ತರಣೆ ಮಾಡಬೇಕು. ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಪರೀಕ್ಷೆ ಮಾಡಲು ಪರಿಣಿತ ಅಧಿಕಾರಿಗಳ ಪ್ರತ್ಯೇಕ ತಂಡ ರಚಿಸಬೇಕು. ಕಬ್ಬಿಗೆ ಹೆಚ್ಚುವರಿ ದರ 100 ರೂ. ನಿಗದಿ ಮಾಡಿರುವ ಬಾಪ್ತು ಸರ್ಕಾರದ 50 ರೂ. ಕೂಡಲೇ ಬಿಡುಗಡೆ ಮಾಡಬೇಕು.

ರೈತರ ಮಗನ ಮದುವೆಯಾಗುವ ಹೆಣ್ಣು ಮಗಳಿಗೆ ಸರ್ಕಾರಿ ಕೆಲಸದಲ್ಲಿ ಶೇ.20ರಷ್ಟು ಮೀಸಲಾತಿ ನೀಡುವ ಯೋಜನೆ ಜಾರಿಗೆ ತರಬೇಕು. ರಾಜ್ಯಾದ್ಯಂತ ಟೋಲ್ ಬಂದ್ ಮಾಡಿ ಪಂಜಾಬ್‌ನಲ್ಲಿ ಮಾಡಿರುವ ರೀತಿ ರೈತರಿಗೆ ಸಹಾಯ ಮಾಡಬೇಕು ಎಂಬುದರ ಬಗ್ಗೆ ರಾಜ್ಯ ಸರ್ಕಾರ ಮಂಡಿಸುವ 2026-27 ರಾಜ್ಯ ಬಜೆಟ್‌ನಲ್ಲಿ ಘೊಷಣೆ ಮಾಡಬೇಕು ಎಂದು ಮನವಿ ಮಾಡಿದರು.

ರಾಜ್ಯದ ವಿವಿಧ ಜಿಲ್ಲೆಗಳ ರೈತ ಮುಖಂಡರು, ಕೃಷಿ ಸಚಿವ ಚಲುವರಾಯಸ್ವಾಮಿ, ವೆಂಕಟೇಶ್, ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!