ಬೆಂಗಳೂರು: ಲೋಕಾಯುಕ್ತ ದಾಳಿ ವೇಳೆ ಪುತ್ರನ ಮನೆಯಲ್ಲಿ ಸಿಕ್ಕ ಕೋಟಿ ಕೋಟಿ ಹಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೋರಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.
ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಉಭಯ ವಕೀಲರ ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶವನ್ನು ಕಾಯ್ದಿರಿಸಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಏಕಸದಸ್ಯ ಪೀಠದ ಮುಂದೆ ಬಂದಿತು. ಈ ವೇಳೆ ನಿರೀಕ್ಷಣಾ ಜಾಮೀನು ಅರ್ಜಿ ಸಂಬಂಧ ಲೋಕಾಯುಕ್ತ ಪೊಲೀಸರು ಆಕ್ಷೇಪಣೆ ಸಲ್ಲಿಸಿದರು. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸುವಂತೆ ಮನವಿ ಮಾಡಿದರು.
ಈ ಮಧ್ಯೆ, ಮಾಡಾಳ್ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದರು. ಆದರೆ ಅವರ ಮನವಿಯನ್ನು ನ್ಯಾಯಪೀಠ ನಿರಾಕರಿಸಿ, ಕೂಡಲೇ ವಾದಮಂಡನೆ ಆರಂಭಿಸುವಂತೆ ಸೂಚಿಸಿತು.
ಈ ವೇಳೆ ವಾದ ಮಂಡನೆಗೆ ಮುಂದಾದ ವಕೀಲರು ಮಾಡಾಳ್ ಅವರು ಪ್ರತಿದಿನವೂ ಲೋಕಾಯುಕ್ತ ಪೊಲೀಸರ ತನಿಖೆಗೆ ಹಾಜರಾಗಿದ್ದಾರೆ. ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ತನಿಖೆಯೇ ಮುಕ್ತಾಯದ ಹಂತದಲ್ಲಿರುವಾಗ ಬಂಧನದ ಅಗತ್ಯವಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ವಾದಿಸಿದರು.
ಇಂದಿನ ದಿನಗಳಲ್ಲಿ ಲಂಚವನ್ನು ನೇರವಾಗಿ ಪಡೆಯುವುದಿಲ್ಲ. ಇಲ್ಲೂ ಸಹ ಪುತ್ರನ ಮೂಲಕ ಲಂಚವನ್ನು ಪಡೆದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರು. ಈ ಎರಡೂ ಕಡೆ ವಕೀಲರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಪೀಠ ಆದೇಶವನ್ನು ಕಾಯ್ದಿರಿಸಿತು.