NEWSನಮ್ಮಜಿಲ್ಲೆಶಿಕ್ಷಣ-

ಶೈಕ್ಷಣಿಕ ಸಂಸ್ಥೆಗಳು ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಿ ಲಾಭ ಪಡೆಯಿರಿ: ತುಷಾರ್  ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಶೈಕ್ಷಣಿಕ ಸಂಸ್ಥೆಗಳಿಗೆ ಒಂದು ಪರಿಹಾರ ಯೋಜನೆಯಡಿ ಶೇ.25 ರಷ್ಟು ಸೇವಾ ಶುಲ್ಕ ಪಾವತಿಸಬೇಕಾಗಿದ್ದು, ಈ ಯೋಜನೆ ಜುಲೈ 31ಕ್ಕೆ ಮುಗಿಯಲಿದೆ. ಹೀಗಾಗಿ ಈ ಕೂಡಲೆ ಎಲ್ಲರೂ ಬಾಕಿ ಇರುವ ಸೇವಾ ಶುಲ್ಕವನ್ನು ಪಾವತಿಸಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳಿಗೆ ಸೂಚನೆ ನೀಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಾಕಿ ಆಸ್ತಿ ತೆರಿಗೆದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದು ಬಾರಿ ಪರಿಹಾರ ಯೋಜನೆಯ ಕುರಿತು ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಇನ್ನಿತರೆ ಶೈಕ್ಷಣಿಕ ಸಂಸ್ಥೆಗಳ ಜೊತೆ ಇಂದು ಟೌನ್‌ಹಾಲ್‌ನಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ನಗರದಲ್ಲಿ ಒಂದು ಬಾರಿ ಪರಿಹಾರ ಯೋಜನೆಯನ್ನು ಕಾಯ್ದೆ ಅನುಸಾರ ಜಾರಿ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ ಯೋಜನೆಯಡಿ ಬಾಕಿ ಇರುವ ಆಸ್ತಿ ತೆರಿಗೆಯ ಮೇಲೆ ವಿಧಿಸುವ ಬಡ್ಡಿ ಸಂಪೂರ್ಣ ಮನ್ನಾ ಹಾಗೂ ದಂಡವನ್ನು ಅರ್ಧಕ್ಕೆ ಇಳಿಸಲಾಗಿದೆ. ಶೈಕ್ಷಣಿಕ ಸಂಸ್ಥೆಗಳು ಕೂಡಲೆ ಇದರ ಸದುಪಯೋಗವನ್ನು ಪಡೆದುಕೊಂಡು ಕೂಡಲೆ ಬಾಕಿ ಇರುವ ಸೇವಾ ಶುಲ್ಕವನ್ನು ಪಾವತಿಸಲು ಮನವಿ ಮಾಡಿದರು.

ಶೈಕ್ಷಣಿಕ ಸಂಸ್ಥೆಗಳು ಆಸ್ತಿ ತೆರಿಗೆಯಿಂದ ವಿನಾಯಿತಿ ಕೋರಿ ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಲು ಅರ್ಜಿ ಸಲ್ಲಿಸಿ ಅನುಮೋದನೆಯ ನಂತರ ಪಾವತಿಸಲು ಅವಕಾಶ ಕಲ್ಪಿಸಲಾಗಿತ್ತು. ಪ್ರಸ್ತುತ ಒಂದು ಬಾರಿ ಪರಿಹಾರ ಯೋಜನೆ ಅವಧಿಯಲ್ಲಿ ಶೈಕ್ಷಣಿಕ ಸಂಸ್ಥೆಯ ಸ್ವತ್ತುಗಳು ಸರ್ಕಾರದಿಂದ ಮಾನ್ಯತೆ ಪಡೆದಿದ್ದಲ್ಲಿ ಸೇವಾ ಶುಲ್ಕವನ್ನು ಪಾವತಿಸಲು ಶೈಕ್ಷಣಿಕ ಉದ್ದೇಶಕ್ಕೆ ಬಳಸುತ್ತಿರುವ ಅವಧಿಯಿಂದ ಅನ್ವಯವಾಗುವಂತೆ ಅವಕಾಶ ಕಲ್ಪಿಸಲಾಗಿರುತ್ತದೆ. ಇದೇ ಜುಲೈ 31ರ ವರೆಗೂ ಮಾತ್ರ ಒಂದು ಬಾರಿ ಪರಿಹಾರ ಯೋಜನೆ ಚಾಲ್ತಿಯಲ್ಲಿರಲಿದ್ದು, ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಸೇವಾ ಶುಲ್ಕ ಪಾವತಿ ಮಾಡಬಹದು ಎಂದು ಹೇಳಿದರು.

ಡಿಡಿ ಮೂಲಕ ಬಾಕಿ ಸೇವಾ ಶುಲ್ಕ ಪಾವತಿಸಲು ಅವಕಾಶ: ನಗರದಲ್ಲಿ ಶೈಕ್ಷಣಿಕ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಒಂದೊಂದು ಸಂಸ್ಥೆಯಲ್ಲಿ ಒಂದೊಂದು ರೀತಿಯ ಸಮಸ್ಯೆಯಿದೆ. ಅದನ್ನು ಪರಿಶೀಲಿಸಿದಾಗ ಆಸ್ತಿ ತೆರಿಗೆ ತಂತ್ರಾಂಶದಲ್ಲಿ ಬದಲಾವಣೆ ಮಾಡಿಕೊಂಡು ಆನ್ಲೈನ್ ನಲ್ಲಿ ಪಾವತಿಸಲು ಸಮಸ್ಯೆಯಾಗುತ್ತಿರುತ್ತದೆ. ಈ ನಿಟ್ಟಿನಲ್ಲಿ ಆನ್ ಲೈನ್ ನಲ್ಲಿ ಪಾವತಿ ಮಾಡಲು ಸಾಧ್ಯವಿಲ್ಲದವರಿಗೆ ಆಸ್ತಿ ತೆರಿಗೆ ಬ್ಯಾಂಕರ್ಸ್ ಚೆಕ್/ಫೇ ಆರ್ಡರ್/ಡಿಮಾಂಡ್ ಡ್ರಾಫ್ಟ್ ಮೂಲಕ ಪಾವತಿಸಲು ಅವಕಾಶ ನೀಡಲಾಗುವುದು. ಆಯಾ ವಲಯ ಜಂಟಿ ಆಯುಕ್ತರಿಗೆ ನಿಮ್ಮ ಸಂಸ್ಥೆಗಳ ಬಾಕಿ ಸೇವಾ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ ಗಳನ್ನು ಸಲ್ಲಿಸಬಹುದೆಂದು ತಿಳಿಸಿದರು.

ವಿಶೇಷ ಆಯುಕ್ತರಾದ ಶ್ರೀ ಮುನೀಶ್ ಮೌದ್ಗಿಲ್ ರವರು ಮಾತನಾಡಿ, ಸರ್ಕಾರದ ವತಿಯಿಂದ ಪಾಲಿಕೆಯಲ್ಲಿ ಜಾರಿಗೆ ತಂದಿರುವ ಒಂದು ಬಾರಿ ಪರಿಹಾರ ಯೋಜನೆಯ ಲಾಭವನ್ನು ಶೈಕ್ಷಣಿಕ ಸಂಸ್ಥೆಗಳು ಪಡೆದುಕೊಳ್ಳಲು ಮನವಿ ಮಾಡಿದ ಅವರು, ಸದರಿ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಮಾದರಿ ಕಾರ್ಯವಿಧಾನವನ್ನು ನೀಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು: * ಶೈಕ್ಷಣಿಕ ಸಂಸ್ಥೆಗಳು ಈಗಾಗಲೇ ಆಸ್ತಿ ತೆರಿಗೆ ಜಾಲದಲಿದ್ದು, ಸ್ವಯಂ ಘೋಷಣಾ ಪದ್ಧತಿ(ಎಸ್.ಎ.ಎಸ್) ಅಡಿಯಲ್ಲಿ ಅರ್ಜಿ ಸಂಖ್ಯೆ ಹೊಂದಿರುವ ಪ್ರಕರಣಗಳಲ್ಲಿ ಆನ್ಲೈನ್ ಮೂಲಕ ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

  • ಇದುವರೆಗೂ ಆಸ್ತಿ ತೆರಿಗೆ ಪಾವತಿಸದ/ಎಸ್.ಎ.ಎಸ್ ಅರ್ಜಿ ಸಂಖ್ಯೆ ಹೊಂದಿರದ ಎಲ್ಲಾ ಶೈಕ್ಷಣಿಕ ವಿದ್ಯಾ ಸಂಸ್ಥೆಗಳು ಬಾಕಿ ಇರುವ ಸಾಲಿನಿಂದ ಸೇವಾ ಶುಲ್ಕವನ್ನು ಕಟ್ಟಡದ ಅನುಸಾರ ಶೇ. 25 ರಷ್ಟು ಸೇವಾ ಶುಲ್ಕ ಲೆಕ್ಕಾಚಾರ ಮಾಡಿ ಮನವಿ ಪತ್ರದೊಂದಿಗೆ, ಡಿಮ್ಯಾಂಡ್ ಡ್ರಾಫ್ಟ್ ಹಾಗೂ ಸರ್ಕಾರದಿಂದ ಶೈಕ್ಷಣಿಕ ಸಂಸ್ಥೆಗೆ ಮಾನ್ಯತೆ ಪಡೆದಿರುವ ಪ್ರಮಾಣ ಪತ್ರದೊಂದಿಗೆ ಸಂಬಂಧಪಟ್ಟ ಆಯಾ ವಲಯ ಜಂಟಿ ಆಯುಕ್ತರಿಗೆ ಅರ್ಜಿ ಸಲ್ಲಿಸುವುದು.

  • ಬಿಬಿಎಂಪಿ ಕಾಯಿದೆಯಲ್ಲಿ 2021-22ನೇ ಸಾಲಿನ ಖಾಸಗಿ ಶೈಕ್ಷಣಿಕ ಸಂಸ್ಥೆಗಳಿಗೆ ಆಸ್ತಿ ತೆರಿಗೆಯಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ. ನ್ಯಾಯಾಲಯದ ಪ್ರಕರಣಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಮೊತ್ತದ ಆಸ್ತಿ ತೆರಿಗೆಯನ್ನು ಪಾವತಿ ಮಾಡಬೇಕಾಗಿರುತ್ತದೆ.

  • ಒಂದು ಬಾರಿ ಪರಿಹಾರ ಯೋಜನೆಯು ಇದೇ 31ನೇ ಜುಲೈ ವರೆಗೂ ಜಾರಿಯಲ್ಲಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶೈಕ್ಷಣಿಕ ವಿದ್ಯಾ ಸಂಸ್ಥೆಗಳು ಇದರ ಲಾಭವನ್ನು ಪಡೆದುಕೊಂಡು ಶೇ. 25 ರಷ್ಟು ಸೇವಾ ಶುಲ್ಕವನ್ನು ಪಾವತಿಸಬಹುದಾಗಿದ್ದು, ಬಡ್ಡಿ ಮೊತ್ತಕ್ಕೆ ಸಂಪೂರ್ಣ ವಿನಾಯ್ತಿ ಇರಲಿದೆ.

ಈ ವೇಳೆ ವಲಯ ಆಯುಕ್ತರಾದ ಕರೀಗೌಡ, ರಮ್ಯಾ, ಕಂದಾಯ ವಿಭಾಗದ ಜಂಟಿ ಆಯುಕ್ತರಾದ ಲಕ್ಷ್ಮಿದೇವಿ, ವಲಯ ಜಂಟಿ ಆಯುಕ್ತರು, ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು, ಪ್ರತಿನಿಧಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ