ಬೆಂಗಳೂರು: ನೆಲಮಂಗಲ ನವಯುಗ ಟೋಲ್ ಸಮೀಪದ ಫ್ಲೈಓವರ್ ಬಳಿ ಡಿವೈಡರ್ ದಾಟಿಹೋಗಿ ಎದುರಿನಿಂದ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಯುವಕರು ಮೃತಪಟ್ಟಿರುವ ಘಟನೆ ನಡುರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ.

ಈ ಅಪಘಾತದಲ್ಲಿ ಬಸ್ನಲ್ಲಿದ್ದ ಕೆಲ ಪ್ರಯಾಣಿಕರು ಸೇರಿದಂತೆ ಡ್ರೈವರ್ ಮತ್ತು ಕಂಡಕ್ಟರ್ಗಳಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಬಸ್ನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಕಾರಿನಲ್ಲಿದ್ದ ದೊಡ್ಡಬಳ್ಳಾಪುರ ನಿವಾಸಿಗಳಾದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಎಂಬುವರು ಮೃತಪಟ್ಟಿದ್ದಾರೆ.
ತುಮಕೂರು ರಸ್ತೆಯಿಂದ ಬೆಂಗಳೂರು ನಗರದ ಕಡೆ ಟಾಟಾ ಇಂಡಿಕಾ ಕಾರಿನಲ್ಲಿ ಯುವಕರು ತೆರಳುತ್ತಿದ್ದ ವೇಳೆ ಜಿಂದಾಲ್ ಆಸ್ಪತ್ರೆ ಸಮೀಪ ಓವರ್ ಸ್ಪೀಡ್ನಲ್ಲಿ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ್ದ ಕಾರು, ಎದುರುಗಡೆಯ ರಸ್ತೆಯಲ್ಲಿ ಬರ್ತಿದ್ದ KSRTC ಬಸ್ಗೆ ಡಿಕ್ಕಿ ಹೊಡೆದಿದೆ.

ಈ ಡಿಕ್ಕಿಯ ರಭಸಕ್ಕೆ ಬಸ್ ಮುಂಭಾಗದ ಗ್ಲಾಸ್ ಪೀಸ್ ಪೀಸ್ ಆಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಮುಂಭಾಗ ಕೂತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ನಲ್ಲಿದ್ದ 42 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಅಪಘಾತ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮೃತಪಟ್ಟ ಈ ಯುವಕರ ಮೃತದೇಹಗಳನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಇತ್ತ ಕುಟುಂಬಸ್ಥರು ಆಸ್ಪತ್ರೆಗೆ ಬಂದಿದ್ದು, ಮಕ್ಕಳನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.
ಇನ್ನು ಮೃತ ಹರ್ಷಿತ್ ಬೆಂಗಳೂರಿನ ರಾಜಾನುಕುಂಟೆಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದ್ದು, ಮತ್ತೊಬ್ಬ ಯುವಕ ಲಲಿತ್ ಸಿಸಿಟಿವಿ ಅಳವಡಿಕೆ ಕೆಲಸ ಮಾಡುತ್ತಿದ್ದನು.
ಈ ಅಪಘಾತ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related










