NEWSಕೃಷಿನಮ್ಮರಾಜ್ಯ

ಡಿ.23ರಿಂದ ಅನ್ನದಾತರ ಸಂಕಷ್ಟ ಅರಿಯದ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಬಿಸಿ ಬಿಸಿಮುಟ್ಟಿಲು ರೈತರು ಸಜ್ಜು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ರೈತರ ಸಂಪೂರ್ಣ ಸಾಲಮನ್ನಾ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನಿಗೆ ಒತ್ತಾಯಿಸಲು ಇದೇ ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ ಹಮ್ಮಿಕೊಳ್ಳುವ ಸಿದ್ಧತೆ ಭರದಿಂದ ಸಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ಇಂದು ನಗರದ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲು ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ ಪ್ರವಾಹ ಹಾನಿ ಮಳೆಹಾನಿ, ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿ ಬೆಳೆ ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಅದಕ್ಕಾಗಿ ಸಾಲಮನ್ನಾ ಆಗಲೇಬೇಕು ಎಂದು ಆಗ್ರಹಿಸಿದರು.

ಇನ್ನು ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟದ ನೆರವು ಎಂದು 12 ಲಕ್ಷ ಕೋಟಿ ರೂ. ಸಾಲಮನ್ನಾ ಮಾಡಿರುವ ರೀತಿ ರೈತರ ಸಾಲವನ್ನು ಮನ್ನಾ ಆಗಬೇಕು, ಈ ಬಗ್ಗೆ ರೈತರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಡಿ. 23 ರಂದು ಕೋರಿಕೆ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿ ರೈತರನ್ನು ದಿಕ್ಕು ತಪ್ಪಿಸಬಾರದು, ರೈತರು ಸಾಲ ಮನ್ನಾ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ರೈತರ ಸಾಲ ಮನ್ನಾ ಆಗದಂತೆ ವಂಚಿಸಲು ಬ್ಯಾಂಕ್‌ಗಳು ಬಡ್ಡಿ ದುಪ್ಪಟ್ಟುಆಗುತ್ತದೆ ಎಂದು ಹೆದರಿಸಿ ಖಾಲಿಪತ್ರಕ್ಕೆ ರೈತರ ಸಹಿ ಪಡೆದು ಸಾಲ ನವೀಕರಣ ಮಾಡುತ್ತಿದ್ದಾರೆ ಈ ಬಗ್ಗೆ ರೈತರು ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.

ಪ್ರಕೃತಿಯ ಮುನಿಸಿನಿಂದ ಭತ್ತ, ಕಬ್ಬು, ತೊಗರಿ, ಜೋಳ, ರಾಗಿ ಉತ್ಪಾದನೆ ಶೇ. 50ರಷ್ಟು ಕಡಿಮೆಯಾಗಿರುವ ಕಾರಣ ಹೊರದೇಶಕ್ಕೆ ಹೋಗುವ ಆಹಾರಧಾನ್ಯಗಳನ್ನು ರಫ್ತು ನಿಷೇಧ ಮಾಡಿದ್ದಾರೆ. ಈಗಲಾದರೂ ರೈತರ ಶಕ್ತಿ, ಶ್ರಮದ ಬಗ್ಗೆ ಸರ್ಕಾರಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಹೇಳಿದರು.

ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಆಗಬೇಕು. ಸ್ವಾಮಿನಾಥನ್ ಆಯೋಗದ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ಪ್ರಧಾನಿಯವರು ರೈತರಿಗೆ ಭರವಸೆ ನೀಡಿದಂತೆ ಕೇಂದ್ರ ಸರ್ಕಾರ ಕೂಡಲೇ ಈ ಕಾನೂನು ಜಾರಿ ಮಾಡಬೇಕು. ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ, ರಾಜ್ಯ ಸರ್ಕಾರ 2000 ರೂ. ಭಿಕ್ಷಾ ರೂಪದ ಪರಿಹಾರ ನೀಡುವುದು ಬೇಡ, ರೈತರ ನೆರವಿಗೆ ಬಾರದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಚೆಲ್ಲಾಟ ಆಡುತ್ತಿವೆ. ಸಂಪೂರ್ಣ ಬರ ಪರಿಹಾರ ನಷ್ಟ ಎಕರೆಗೆ ಕನಿಷ್ಠ 25 ಸಾವಿರ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಸಕ್ಕರೆ ರಫ್ತು ನಿಷೇಧ, ಯಥನಾಲ್ ಉತ್ಪಾದನೆಗೆ ತಡೆ ಹಾಕಿರುವುದು ಕಬ್ಬು ಬೆಳೆಯುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ರೈತರಿಗೆ ಆತಂಕ ಸೃಷ್ಟಿಯಾಗುತ್ತಿದೆ ಕೇಂದ್ರ ಸರ್ಕಾರ ಮರುಪರಿಶೀಲನೆ ನಡೆಸಲಿ ಎಂದು ಒತ್ತಾಯಿಸುತ್ತೇವೆ ಎಂದ ಅವರು, ಪಂಜಾಬ್ ರಾಜ್ಯದಲ್ಲಿ ಟನ್ ಕಬ್ಬಿಗೆ 4000 ನಿಗದಿ ಮಾಡಿದ್ದಾರೆ, ರಾಜ್ಯದಲ್ಲಿ ಎರಡು ಮೂರು ಸಭೆಗಳಾದರೂ ಸಕ್ಕರೆ ಕಾರ್ಖಾನೆಗಳನ್ನು ಮಣಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ತೂಕದಲ್ಲಿ ಮೋಸ ಇಳುವರಿಯಲ್ಲಿ ಮೋಸ ಹಣ ಪಾವತಿಯಲ್ಲಿ ಮೋಸ ಮಾಡುತ್ತಿದ್ದರೂ ಸರ್ಕಾರ ಕಾರ್ಖಾನೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ಕಬ್ಬು ಉತ್ಪಾದನೆ ವೆಚ್ಚ ಕಡಿಮೆ ಮಾಡಲು ಕಬ್ಬು ಬೇಸಾಯ ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಎನ್ ಆರ್ ಇ ಜಿ ಯೋಜನೆಯನ್ನು ಲಿಂಕ್ ಮಾಡಬೇಕು, ಬಾಳೆ ಬೇಸಾಯಕ್ಕೆ ನೀಡಿರುವ ರೀತಿ ಎಲ್ಲ ಕೃಷಿ ಬೆಳೆಗಳಿಗೂ ಕಬ್ಬಿನ ಬೆಳೆಗೂ ಕಡ್ಡಾಯವಾಗಿ ಬೆಳೆ ವಿಮೆಯನ್ನು ಜಾರಿಗೊಳಿಸಬೇಕು. ಬೆಳೆ ವಿಮೆ ಸರಳೀಕರಣಗೊಳಿಸಬೇಕು. ಅತಿವೃಷ್ಟಿ, ಬರ ನಷ್ಟ ಪರಿಹಾರ ಬೆಳೆ ವಿಮೆ ವ್ಯಾಪ್ತಿಯಲ್ಲಿ ನಷ್ಟ ಪರಿಹಾರ ನೀಡಬೇಕು ಎಂದು ಹೇಳಿದರು.

ದೇಶದ 140 ಕೋಟಿ ಜನರಿಗೆ ಆಹಾರ ಉತ್ಪಾದಿಸಲು ತಮ್ಮ ಜೀವನವನ್ನೆ ತ್ಯಾಗ ಮಾಡುತ್ತಿರುವ 60 ವರ್ಷ ಪೂರೈಸಿದ ರೈತರಿಗೆ ತಿಂಗಳಿಗೆ ಕನಿಷ್ಠ 5000 ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು. ಕೃಷಿ ಪಂಪ್ಸೆಟ್‌ಗಳಿಗೆ ನೀಡುವ ಉಚಿತ ವಿದ್ಯುತ್ ತಪ್ಪಿಸುವಂತ ವಿದ್ಯುತ್ ಖಾಸಗೀಕರಣ ನೀತಿಯನ್ನು ಕೇಂದ್ರ ಸರ್ಕಾರ ಕೈಬಿಡಬೇಕು . ಕೃಷಿ ಪಂಪ್ಸೆಟ್‌ಗಳಿಗೆ ಹಗಲು ವೇಳೆ ನಿರಂತರ 10 ಗಂಟೆಗಳ ವಿದ್ಯುತ್ ನೀಡಬೇಕು. ಪಂಪ್ಸೆಟ್‌ಗಳಿಗೆ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರ ನೀಡುವ 60% ಸಹಾಯಧನ ಕುಸುಮ ಯೋಜನೆಗೆ ರಾಜ್ಯ ಸರ್ಕಾರ ಶೇ. 30ರಷ್ಟು ಸೇರಿಸಿ ಸಹಾಯಧನ ನೀಡಲಿ ಇದರಿಂದ ರೈತರಿಗೆ ಹಗಲು ವೇಳೆ ಯಾವುದೇ ಸಮಸ್ಯೆ ಇಲ್ಲದೆ ವಿದ್ಯುತ್ ಸಿಗುತ್ತದೆ ಎಂದು ತಿಳಿಸಿದರು.

ರೈತನ ಮಗನ ಮದುವೆಯಾಗುವ ವಧುವಿಗೆ ಸರ್ಕಾರಿ ಕೆಲಸದಲ್ಲಿ ಶೇಕಡ 10 ಮೀಸಲಾತಿ ನೀಡುವ ನೀತಿ ಜಾರಿಗೆ ತರಬೇಕು ರೈತರ ಮಕ್ಕಳನ್ನು ಅಪಾಯದಿಂದ ಪಾರು ಮಾಡಬೇಕು. ದೆಹಲಿಯಲ್ಲಿ ವರ್ಷ ಕಾಲ ಹೋರಾಟ ಮಾಡಿದ ರೈತರ ಮೇಲೆ ಹಾಕಿರುವ ಪೊಲೀಸ್ ಮೊಕದಮೆಗಳನ್ನು ವಾಪಸ್ ಪಡೆಯಬೇಕು. ದೇಶದ ರೈತರನ್ನು ಸಂರಕ್ಷಿಸಲು ವಿಶ್ವ ವ್ಯಾಪಾರ ಒಪ್ಪಂದದಿಂದ ಭಾರತ ಸರ್ಕಾರ ಹೊರ ಬರಬೇಕು. ಬಗರ್ ಹುಕುಂ ಸಾಗುವಳಿ ರೈತರಿಗೆ ಅಡೆತಡೆಗಳನ್ನು ನಿವಾರಿಸಿ ಕೂಡಲೇ ಸಾಗುವಳಿ ಪತ್ರ ನೀಡಬೇಕು ಎಂದು ಹೇಳಿದರು.

ಈ ಎಲ್ಲ ಒತ್ತಾಯಗಳ ಬಗ್ಗೆ ರಾಜ್ಯದ ಸಹಸ್ರಾರು ರೈತರ ಸಮ್ಮುಖದಲ್ಲಿ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡರ ನೇತೃತ್ವದಲ್ಲಿ ಬೆಂಗಳೂರಿನ ಅಧಿವೇಶನದಲ್ಲಿ ಚರ್ಚೆ ನಡೆಸಿ ರೈತರನ್ನು ಜಾಗೃತಿ ಮಾಡಿ ದೇಶದ ಎಲ್ಲ ರೈತರು ರಾಜಕೀಯೇತರವಾಗಿ ಹೋರಾಟ ನಡೆಸಲು ತೀರ್ಮಾನಿಸಲಾಗುವುದು. ಈ ಕಾರಣಕ್ಕಾಗಿ ಬೆಂಗಳೂರಿನಲ್ಲಿ ಡಿ.23 ರಂದು ರೈತರ ಬೃಹತ್ ರೈತ ಮಹಾಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಮತ ದಳ ವೆಂಕಟಸ್ವಾಮಿ, ಕರ್ನಾಟಕ ರಾಜ್ಯ ರೈತ ಸಂಘದ ನಾರಾಯಣ ರೆಡ್ಡಿ, ರಾಜ್ಯ ಕಬ್ಬು ಬೆಳೆಗಾರ ಸಂಘದ ಅತ್ತಹಳ್ಳಿ ದೇವರಾಜ್, ಕನ್ನಡ ಚಳವಳಿ ಜಿ. ನಾರಾಯಣ್ ಕುಮಾರ್, ಸಂಘಟನೆ ರಾಜ್ಯಾಧ್ಯಕ್ಷ ಗುರುದೇವ್ ನಾರಾಯಣ ಕುಮಾರ್, ವಕೀಲ ಅಮರೇಶ್, ಗುರುಮೂರ್ತಿ ಇದ್ದರು

ರೈತರಿಗೆ ರೈತರಿಂದಲೇ  ಊಟದ  ವ್ಯವಸ್ಥೆ 

ಒಂದೊಂದು ಜಿಲ್ಲೆ ರೈತರೇ ಒಂದೊಂದು ವ್ಯವಸ್ಥೆ ವಹಿಸಿಕೊಂಡಿದ್ದಾರೆ. ಗುಲ್ಬರ್ಗ ಜಿಲ್ಲೆಯಿಂದ ರೊಟ್ಟಿ ಚಟ್ನಿ, ಚಾಮರಾಜನಗರ ಜಿಲ್ಲೆಯಿಂದ ಬೆಲ್ಲದ ಕಾಯಿ ಮಿಠಾಯಿ ಸಿಹಿತಿಂಡಿ, ಮೈಸೂರು ಜಿಲ್ಲೆಯಿಂದ ಉದ್ದಿನ ಹಪ್ಪಳ ಮತ್ತು ಉಪ್ಪಿನಕಾಯಿ, ಗದಗ್ ಜಿಲ್ಲೆಯಿಂದ ಅನ್ನದ ವ್ಯವಸ್ಥೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಸಾಂಬರ್ ತಯಾರಿಸಲು ತರಕಾರಿ ಎಣ್ಣೆ ಬೇಳೆ, ಶಿವಮೊಗ್ಗ ಜಿಲ್ಲೆಯಿಂದ ಅಡಿಕೆ ಊಟದ ತಟ್ಟೆ ಪೂರೈಸುವುದಾಗಿ ಆಯಾ ಜಿಲ್ಲೆಯ ರೈತರೇ ಸ್ವಯಂ ಪ್ರೇರಿತರಾಗಿ ಒಪ್ಪಿದ್ದಾರೆ. ಸ್ವಾಭಿಮಾನದ ಸ್ವಾವಲಂಬಿ ಚಳವಳಿ ಆಗಬೇಕೆಂಬ ಉದ್ದೇಶದಿಂದ ಈ ಅಧಿವೇಶನ ಆಯೋಜಿಸಲಾಗಿದೆ ಅಧಿವೇಶನಕ್ಕೆ ಬರುವ ರೈತರೆ ಸ್ವಂತ ಖರ್ಚಿನಿಂದ ಬರುತ್ತಿದ್ದು ಖರ್ಚಿಗಾಗಿ ಪ್ರತಿಯೊಬ್ಬರೂ ಐವತ್ತು ರೂಪಾಯಿ ದೇಣಿಗೆ ನೀಡುತ್ತಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...