ಕೊಪ್ಪಳ: ತಾಲೂಕಿನ ಶಹಾಪುರ ರಾಷ್ಟ್ರೀಯ ಹೆದ್ದಾರಿಯ ಟೋಲ್ ಬಳಿ ಲಾರಿ ಹಾಗೂ ಕೆಕೆಆರ್ಟಿಸಿ ಬಸ್ ಮಧ್ಯೆ ಭಯಾನಕ ಆಕ್ಸಿಡೆಂಟ್ ಸಂಭವಿಸಿದ್ದು ಬಸ್ ಚಾಲಕನ ಸಮಯ ಪ್ರಜ್ಞೆಯಿಂದ 65 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಿಜಾಪುರದಿಂದ ಹೊಸಪೇಟೆಗೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ನಡು ರಸ್ತೆಯಲ್ಲಿ ನಿಂತಿದ್ದ ವಿಂಡ್ ಪವರ್ ಲಾರಿಗೆ ಡಿಕ್ಕಿ ಹೊಡೆದಿದೆ ಪರಣಾಮ ಬಸ್ ಲಾರಿ ಬಾಡಿಗೆ ಕಚ್ಚಿಕೊಂಡು ನಿಂತಿದೆ. ಈ ನಡುವೆ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ನಲ್ಲಿದ್ದ 65 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಯಾವುದೇ ಮುಂಜಾಗ್ರತೆ ಇಲ್ಲದೆ ಚಾಲಕ ಲಾರಿಯನ್ನು ರಸ್ತೆ ಮಧ್ಯೆ ಏಕಾಕೇಕಿ ನಿಲ್ಲಿಸಿದ್ದರಿಂದ ಈ ವೇಳೆ ಅದೇ ಮಾರ್ಗವಾಗಿ ಬರುತ್ತಿದ್ದ ಕೆಕೆಆರ್ಟಿಸಿ ಬಸ್ ಲಾರಿಗೆ ರಭಸದಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಅವಘಡ ಸಂಭವಿಸಿದ್ದು ಸುದೈವ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆದರೆ ಬಸ್ ಮುಂದಿನ ಭಾಗ ಸಂಪೂರ್ಣ ಜಖಂ ಆಗಿದ್ದು, ಬಸ್ ಲಾರಿಗೆ ಸಿಕ್ಕಿಕೊಂಡಿದ್ದರಿಂದ ಸ್ಥಳಕ್ಕೆ ಕ್ರೇನ್ ತರಿಸಿ ಲಾರಿ ಮತ್ತು ಬಸ್ ಅನ್ನು ಬೇರ್ಪಡಿಸಲಾಗಿದೆ.
ಲಾರಿ ರಸ್ತೆ ಮಧ್ಯೆ ನಿಲ್ಲಿಸಿದ್ದೇ ಅಪಘಾತಕ್ಕೆ ಮುಖ್ಯ ಕಾರಣ ಎಂದು ಬಸ್ ಚಾಲಕ ಜೀಲಾನಿ ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುನಿರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ಇಬ್ಬರು ಸಾವು
ಹಾಸನ: ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಪ್ರದೀಪ್(30) ಹಾಗೂ ಗುರು(25) ಮೃತರು. ಮೃತ ಪ್ರದೀಪ್ ಹಾಗೂ ಗುರು ಜತೆಗೆ ಸ್ನೇಹಿತರು ಹೋಟೆಲ್ವೊಂದರ ಪೂಜೆಗೆ ಹೊರಟಿದ್ದರು. ಈ ವೇಳೆ ಈಶ್ವರಹಳ್ಳಿ ಕೂಡಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟೈರ್ ಪಂಚರ್ ಆಗಿದ್ದ ಲಾರಿ ನಿಂತಿದ್ದು, ರಿಪೇರಿ ಕೆಲಸ ನಡೆಯುತ್ತಿತ್ತು. ಮುಂಜಾನೆ ರಸ್ತೆಯಲ್ಲಿ ದಟ್ಟ ಮಂಜು ಆವರಿಸಿತ್ತು. ಇದೇ ಮಾರ್ಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.
ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರು ಉರುಳಿ ಬಿದ್ದಿದ್ದು, ಪ್ರದೀಪ್ ಹಾಗೂ ಗುರು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
![](https://vijayapatha.in/wp-content/uploads/2024/02/QR-Code-VP-1-1-300x62.png)