Breaking NewsNEWSಆರೋಗ್ಯಬೆಂಗಳೂರು

ಭಾರತ ಸಂವಿಧಾನ ವಿಶ್ವದಲ್ಲೇ ಅತ್ಯುತ್ತಮ: ಆಡಳಿತಗಾರ ಉಮಾಶಂಕರ್

ವಿಜಯಪಥ ಸಮಗ್ರ ಸುದ್ದಿ
  • ಭಾರತ ರತ್ನ ಡಾ: ಬಿ.ಆರ್. ಅಂಬೇಡ್ಕರ್ ಹಾಗೂ ಪೌರ ಕಾರ್ಮಿಕರ ದಿನಾಚರಣೆ

ಬೆಂಗಳೂರು: ‘ಲಿಖಿತ ರೂಪದಲ್ಲಿರುವ ಅತ್ಯುತ್ತಮ ಸಂವಿಧಾನ ನಮ್ಮ ಭಾರತ ಸಂವಿಧಾನ’ ಎಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಬಿಎಂಪಿ ವತಿಯಿಂದ ಕೇಂದ್ರ ಕಚೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಇಂದು ಹಮ್ಮಿಕೊಂಡಿರುವ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಹಾಗೂ ಪೌರಕಾರ್ಮಿಕರ ದಿನಾಚರಣೆ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಡಾ. ಬಿ.ಆರ್ ಅಂಬೇಡ್ಕರ್ ರವರು ಇಡೀ ದೇಶಕ್ಕೆ ಅತ್ಯುತ್ತಮ ಸಂವಿಧಾನವನ್ನು ಕಲ್ಪಿಸಿಕೊಟ್ಟವರು. ಅದು ಇಡೀ ಪ್ರಪಂಚದಲ್ಲಿಯೇ ಉತ್ತಮವಾದ, ವಿವರಾತ್ಮಕವಾದ ಸಂವಿಧಾನವಾಗಿದೆ. ಇದು ಕೇವಲ ಭಾರತಕ್ಕೆ ಮಾತ್ರವಲ್ಲ, ಮುಂದಿನ ದಿನಗಳಲ್ಲಿ ವಿಶ್ವದ ಅನೇಕ ದೇಶಗಳಿಗೆ ಮುನ್ನುಡಿಯಾಗಲಿದೆ ಎಂದು ಹೇಳಿದರು.

ಪೌರಕರ್ಮಿಕರಿಗಾಗಿ ಒಂಟಿ ಮನೆ ಯೋಜನೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿವಿಧ ಸೌಲಭ್ಯ, ಧನಸಹಾಯ, ಬೋನಸ್ ನೀಡಲಾಗುತ್ತಿದೆ. ಹಲವಾರು ಹಿತರಕ್ಷಣಾ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನವನ್ನು ಆಯವ್ಯಯದಲ್ಲಿ ಮೀಸಲಿಡಲಾಗಿದೆ. ಕಳೆದ ಬಾರಿ ಆಯವ್ಯಯಕ್ಕಿಂತ ಹೆಚ್ಚಿನ ಅನುದಾನವನ್ನು ಈ ಬಾರಿ ಮಿಸಲಿಡಲಾಗಿದೆ ಎಂದು ಹೇಳಿದರು.

12,692 ಪೌರಕಾರ್ಮಿಕರ ಕಾಯಂ: ಪೌರಕಾರ್ಮಿಕರ ಒಳಿತಿಗಾಗಿ ಪಾಲಿಕೆ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ 12,692 ನೇರ ವೇತನ ಪೌರಕಾರ್ಮಿಕರನ್ನು ಕಾಯಂ ಮಾಡಿಕೊಳ್ಳುತ್ತಿದ್ದೇವೆ. ಪೌರಕಾರ್ಮಿಕರ ಕಾಯಂಮಾತಿಗೆ ಪ್ರಮುಖ ಕಾರಣೀಕರ್ತರು ಮುಖ್ಯ ಆಯುಕ್ತರು, ವಿಶೇಷ ಆಯುಕ್ತರು, ವಲಯ ಆಯುಕ್ತರು ಹಾಗೂ ಇನ್ನಿತರೆ ಅಧಿಕಾರಿಗಳು ಮುತುವರ್ಜಿ ವಹಿಸಿದ್ದು, ಅವರೆಲ್ಲರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ.

ಮೇ 1 ರಂದು ನೇಮಕಾತಿ ಆದೇಶ ವಿತರಣೆ: ಪೌರಕಾರ್ಮಿಕರನ್ನು ಖಾಯಂ ಮಾಡುವ ವೇಳೆ ಸಾಕಷ್ಟು ದೂರುಗಳು, ಮೋಸ, ದುರುಪಯೋಗಗಳಿಗೆ ಯಾವ ಅಧಿಕಾರಿಗಳೂ ಆಸ್ಪದ ನೀಡದೆ, ಖಾಯಮಾತಿ ಪ್ರಕ್ರಿಯೆಯನ್ನು ಬಹುತೇಕ ಪೂರ್ಣಗೊಳಿಸಲಾಗಿದೆ. ಖಾಯಂ ಆದ ನಂತರ ಪೌರಕಾರ್ಮಿಕರು ಮುಂದಿನ ದಿನಗಳಲ್ಲಿ ನೆಮ್ಮದಿ ಜೀವನ ಸಾಗಿಸಲು ಅನುಕೂಲವಾಗಲಿದೆ. 1ನೇ ಮೇ 2025 ರಂದು ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಖಾಯಂ ಆದವರಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ರವರ ಕುರಿತಂತಹ ಪುಸ್ತಕಗಳನ್ನು ನಾವೆಲ್ಲರೂ ಓದಿ ಅರಿತುಕೊಳ್ಳಬೇಕಿದೆ. ಅವರ ವ್ಯಕ್ತಿತ್ವವನ್ನು ನಾವು ಎಲ್ಲರಿಗೂ ಪರಿಚಯಿಸಬೇಕು. ಅವರ ಎಲ್ಲಾ ವಿಚಾರಧಾರೆಗಳನ್ನು ಇತರರಿಗೂ ತಿಳಿಯುವ ಹಾಗೆ ಮಾಡಬೇಕೆಂದು ಅಭಿಪ್ರಾಯಪಟ್ಟರು.

ಪೌರಕಾರ್ಮಿಕರ ಮಕ್ಕಳು ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿಯಲ್ಲಿ ಉತ್ತಮ ಅಂಕ ಗಳಿಸಿದವರಿಗೆ ಇಂದು ಸನ್ಮಾನ ಮಾಡಿ, ಅವರೆಲ್ಲರಿಗೂ “ಡಾ. ಬಿ.ಆರ್ ಅಂಬೇಡ್ಕರ್ ರವರ ವಿಚಾರಗಳು” ಎಂಬ ಪುಸ್ತಕವನ್ನು ನೀಡಲಾಗಿದೆ. ಅದನ್ನು ಸಂಪೂರ್ಣವಾಗಿ ಓದಿ ಬೇರೆಯವರಿಗೂ ಅದನ್ನು ಓದಿ ತಿಳಿದುಕೊಳ್ಳಲು ಪ್ರೇರಣೆ ನೀಡಬೇಕೆಂದು ತಿಳಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ: ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆ-2025 ಕಾರ್ಯಕ್ರಮಕ್ಕೂ ಮುಂಚಿತವಾಗಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ಹಾಗೂ ಪೌರಕಾರ್ಮಿಕರ ಪಿತಾಮಹ ಐ.ಪಿ.ಡಿ ಸಾಲಪ್ಪ ರವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು.

ಪೌರಕಾರ್ಮಿಕರ ಮಕ್ಕಳಿಗೆ ಸನ್ಮಾನ: ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿಯಲ್ಲಿ ಉತ್ತಮ ಅಂಕ ಪಡೆದ ಪೌರಕಾರ್ಮಿಕರ 46 ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಅತ್ಯುತ್ತಮ ಪೌರಕಾರ್ಮಿಕರಿಗೆ ಸನ್ಮಾನ: ಪಾಲಿಕೆಯ ಎಂಟು ವಲಯಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 17 ಪೌರಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಪೌರಕಾರ್ಮಿಕರಿಗೆ ಬೋನಸ್: ಡಾ: ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ಖಾಯಂ ಪೌರಕಾರ್ಮಿಕರಿಗೆ 22,000 ರೂ. ಹಾಗೂ ನೇರ ವೇತನ ಪೌರಕಾರ್ಮಿಕರಿಗೆ 8,000 ರೂ. ಗಳ ಬೋನಸ್ ನೀಡಲಾಗುವುದು.

ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಕರೀಗೌಡ, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!