ಬಿಡದಿ ಟೌನ್ಶಿಪ್ ವಿರುದ್ಧ ಜೆಡಿಎಸ್ ಬೃಹತ್ ಪಾದಯಾತ್ರೆ- ಇದು ಕೇವಲ ಭಾಷಣಕ್ಕಷ್ಟೇ ಅಲ್ಲ: ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ
ಟೌನ್ಶಿಪ್ ಯೋಜನೆಯಿಂದ ಸಣ್ಣ ರೈತರಿಗೆ ಹೆಚ್ಚು ಅನ್ಯಾಯವಾಗಲಿದೆ. ರೈತರ ಭೂಮಿ ಕಸಿದುಕೊಳ್ಳಲು ದಲ್ಲಾಳಿಗಳನ್ನು ಬಳಸಲಾಗುತ್ತಿದೆ. ರೈತರ ಒಗ್ಗಟ್ಟು ಒಡೆಯುವ ಪ್ರಯತ್ನ ನಡೆಯುತ್ತಿದೆ

ಬೆಂಗಳೂರು ದಕ್ಷಿಣ: ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಇಂದು ನಡೆಯುತ್ತಿರುವ ಪಾದಯತ್ರೆ ಕೇವಲ ಆರಂಭವಷ್ಟೆ, ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದು ಸರ್ಕಾರಕ್ಕೆ ಯುವನಾಯಕ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಪ್ರಾರಂಭವಾಗಿದ್ದು, ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಯೋಜನಾ ವ್ಯಾಪ್ತಿಯ ಎಂಟು ಗ್ರಾಮಗಳಲ್ಲಿ ಇಂದು ಸುಮಾರು 11 ಕಿಲೋಮೀಟರ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.
ಬೆಳಗ್ಗೆ ಅಂಚಿಪುರ ಗ್ರಾಮದ ದಂಡಿನ ಮಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ ಆರಂಭಿಸಿ ಮಾತನಾಡುತ್ತಾ, ಇಂದಿನ ಪಾದಯಾತ್ರೆ ರಾಜಕೀಯ ಲಾಭ-ನಷ್ಟಕ್ಕಾಗಿ ಅಲ್ಲ. ರೈತರ ಬದುಕು ಉಳಿಸುವ ಉದ್ದೇಶದಿಂದ ನಡೆಸಲಾಗುತ್ತಿದೆ. ಇದು ಒಂದು ದಿನದ ಹೋರಾಟವಲ್ಲ. ಕೇವಲ ಭಾಷಣಕ್ಕೆ ಸೀಮಿತವಾಗುವ ಕಾರ್ಯಕ್ರಮವೂ ಅಲ್ಲ. ಇದು ಆರಂಭ ಮಾತ್ರ. ಮುಂದೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತೇವೆ ಎಂದರು.
ಇನ್ನು ಈ ಯೋಜನೆಗೆ ಒಪ್ಪಿಗೆ ಪಡೆಯಲು ಸರ್ಕಾರ ರೈತರಿಗೆ ಆಮಿಷ ಒಡ್ಡುತ್ತಿದೆ. ಕೃಷಿ ಭೂಮಿ ಕಳೆದುಕೊಂಡರೆ ರೈತರ ಬದುಕೇ ಸಂಕಷ್ಟಕ್ಕೆ ಸಿಲುಕಲಿದೆ. ಟೌನ್ಶಿಪ್ ಯೋಜನೆಯಿಂದ ಸಣ್ಣ ರೈತರಿಗೆ ಹೆಚ್ಚು ಅನ್ಯಾಯವಾಗಲಿದೆ. ರೈತರ ಭೂಮಿ ಕಸಿದುಕೊಳ್ಳಲು ದಲ್ಲಾಳಿಗಳನ್ನು ಬಳಸಲಾಗುತ್ತಿದೆ. ರೈತರ ಒಗ್ಗಟ್ಟು ಒಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದರು.
ಯೋಜನೆಯ ಒಟ್ಟು ವೆಚ್ಚ ಸುಮಾರು 18 ಸಾವಿರ ಕೋಟಿ ರೂ. ಎಂದು ಹೇಳಲಾಗುತ್ತಿದೆ. ರೈತರ ಜಮೀನು ಪಡೆದು 33 ಸಾವಿರ ಕೋಟಿ ರೂ. ಲಾಭ ಗಳಿಸುವ ಉದ್ದೇಶ ಇದರ ಹಿಂದೆ ಇದೆ. ಇದರಿಂದ ಯಾರಿಗೆ ಲಾಭವಾಗಲಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು.
ಇದೇ ವೇಳೆ ಕುಮಾರಸ್ವಾಮಿ ಕುಟುಂಬದ ಭೂಮಿ ಕುರಿತು ಕೇಳಿಬಂದ ಆರೋಪಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, ತಮ್ಮ ಕುಟುಂಬದ ಜಮೀನುಗಳನ್ನು ಕಾನೂನುಬದ್ಧವಾಗಿ ಖರೀದಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ನಮ್ಮ ಜಮೀನಿನಲ್ಲಿ ಯಾವುದೇ ವಾಣಿಜ್ಯ ಕಟ್ಟಡ ನಿರ್ಮಿಸಿಲ್ಲ. ರೈತರಿಗೆ ಅನುಕೂಲವಾಗುವ ಯೋಜನೆಗಳಿಗೆ ಬಳಸಲು ಜಮೀನು ಉಳಿಸಿಕೊಂಡಿದ್ದೇವೆ. ಅಗತ್ಯವಿದ್ದರೆ ಶಾಲೆ ಅಥವಾ ಆಸ್ಪತ್ರೆಗೆ ಜಮೀನು ನೀಡಲು ಸಿದ್ಧ ಎಂದು ಹೇಳಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮಾತನಾಡಿ, ಟೌನ್ಶಿಪ್ ಯೋಜನೆ ರೈತ ವಿರೋಧಿ ಯೋಜನೆಯಾಗಿದೆ. ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನದ ವಿರುದ್ಧವೇ ಈ ಹೋರಾಟ ನಡೆಯುತ್ತಿದೆ ಎಂದರು.
ಇನ್ನು ಈ ಹೋರಾಟಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಆಶೀರ್ವಾದವಿದೆ. ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಅವರಿಗೆ ಪತ್ರ ಬರೆಯಲಿದ್ದಾರೆ. ಯೋಜನೆ ಕೈಬಿಡದಿದ್ದರೆ ಸ್ವತಃ ಹೋರಾಟಕ್ಕೆ ಇಳಿಯುವುದಾಗಿ ಪತ್ರದಲ್ಲಿ ತಿಳಿಸಲಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ. ರೈತರ ಹಿತ ಕಾಪಾಡಲು ಜೆಡಿಎಸ್ ಎಲ್ಲ ರೀತಿಯ ಹೋರಾಟ ನಡೆಸಲಿದೆ ಎಂದರು.
ಅಂಚಿಪುರ ಗ್ರಾಮದ ದಂಡಿನ ಮಾರಮ್ಮ ದೇವಾಲಯದಿಂದ ಆರಂಭವಾದ ಪಾದಯಾತ್ರೆ ಅಂಚಿಪುರ ಕಾಲೋನಿ, ಬನ್ನಿಗಿರಿ, ಮೆರೆವೇಗೌಡನದೊಡ್ಡಿ, ಗುಂಡುತೋಪು, ಗೊಲ್ಲಹಳ್ಳಿ, ಕೋಡಿಪಾಳ್ಯ ಹಾಗೂ ಹೊಸೂರು ಗ್ರಾಮಗಳಲ್ಲಿ ಪಾದಯಾತ್ರೆ ಸಾಗಿ ಬಂದಿತು.
ಪಾದಯಾತ್ರೆಯಲ್ಲಿ ಸಾವಿರಾರು ರೈತರು, ಜೆಡಿಎಸ್ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದರು. ಎಂಎಲ್ಸಿ ಜವರಾಯಿಗೌಡ ಹಾಗೂ ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.







