ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ ಪಾಷ ಅವರ ಅಧ್ಯಕ್ಷತೆಯಲ್ಲಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಸಭೆಯನ್ನು ಮಾ.2ರಂದು ಕರೆಯಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ಫೆ.23ರಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಭೆ ಕರೆಯುವಂತೆ ಮನವಿ ಸಲ್ಲಿಸಿದೆ.
ಈ ಹಿನ್ನೆಲೆಯಲ್ಲಿ ಜಂಟಿ ಕ್ರಿಯಾ ಸಮಿತಿ ಅವರ ಬೇಡಿಕೆಗಳ ಕುರಿತು ಚರ್ಚಿಸಲು ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಮಾ.2 ರಂದು ಮಧ್ಯಾಹ್ನ 3.30ಕ್ಕೆ ನಿಗಮದ ಕೇಂದ್ರ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಸಭೆಯನ್ನು ನಿಗದಿಪಡಿಸಲಾಗಿದೆ.
ಹೀಗಾಗಿ ತಾವು (ಜಂಟಿ ಕ್ರಿಯಾ ಸಮಿತಿ) ಈ ಸಭೆಗೆ ಹಾಜರಾಗಲು ತಿಳಿಸಲಾಗಿದೆ. ಸ್ಥಳಾವಕಾಶದ ಲಭ್ಯತೆಯ ದೃಷ್ಟಿಯಿಂದ ಪ್ರತಿ ಕಾರ್ಮಿಕ ಸಂಘಟನೆಯಿಂದ ಇಬ್ಬರು ಪದಾಧಿಕಾರಿಗಳು ಮಾತ್ರ ಹಾಜರಾಗಬೇಕು ಎಂದು ತಿಳಿಸಿದ್ದಾರೆ.
ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು, ಬಿಎಂಟಿಸಿ, ಎನ್ಡಬ್ಲ್ಯುಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ಕೂಡ ಅಗತ್ಯ ಮಾಹಿತಿಗಾಗಿ ಹಾಗೂ ಅಗತ್ಯ ಮಾಹಿತಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗೆ ಹಾಜರಾಗಲು ಕೋರಿದ್ದಾರೆ.
Related










