
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ 2020ರ ಜನವರಿ 1ರಿಂದ ಅನ್ವಯವಾಗಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಆಗಬೇಕಿರುವ ಬಗ್ಗೆ ಚರ್ಚಿಸಲು ಏ.15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೌಕರರ ಎಲ್ಲ ಸಂಘಟನೆಗಳ ಸಭೆ ಕರೆದಿದ್ದಾರೆ.
ಈ ಸಂಬಂಧ ಸಾರಿಗೆ ಇಲಾಖೆಯ ನಾಲ್ಕೂ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳ ಕುರಿತು ಚರ್ಚಿಸುವ ಸಂಬಂಧ ಅಗತ್ಯ ಮಾಹಿತಿ ಒದಗಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟವೂ ನೌಕರರ ವೇತನ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆ ಸಂಬಂಧ ಸಾರಿಗೆ ಸಚಿವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಾರಿಗೆಯ ನಾಲ್ಕೂ ನಿಗಮಗಳ ಎಂಡಿಗಳು ಸೇರಿದಂತೆ ಪ್ರಮುಖರಿಗೆ ಮನವಿ ಸಲ್ಲಿಸಿದ್ದರು.
ಅದಂತೆ ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಸೇರಿದಂತೆ ಇತರೆ ಬೇಡಿಕೆಗಳ ಕುರಿತು ಚರ್ಚಿಸಲು ಏ.15ರ ಸಂಜೆ 4.30ಕ್ಕೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯೊಂದಿಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ಆಯೋಜಿಸಲಾಗಿದೆ. ಆ ಬಳಿಕ ಅಂದರೆ ಸಂಜೆ 5ಗಂಟೆಗೆ ಸಾರಿಗೆ ನೌಕರರ ಒಕ್ಕೂಟದ ಪದಾಧಿಕಾರಿಗಳ ಸಭೆ ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಸಭೆ ನಡೆಸಲು ಎಲ್ಲ ಸೂಕ್ತ ಸಿದ್ಧತೆ ಹಾಗೂ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು, ಮಾಹಿತಿಯನ್ನು ತಪ್ಪದೇ ಸರ್ಕಾರಕ್ಕೆ ಒದಗಿಸುವಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಎಸ್.ಪುಷ್ಪ ಎಂಡಿಗೆಳಿಗೆ ಈ ಮೊದಲೇ ತಿಳಿಸಿದ್ದು ಈಗಾಗಲೇ ಎಂಡಿಗಳು ಅಗತ್ಯ ಸಿದ್ದತೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ 2020ರ ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಇನ್ನು ನೌಕರರಿಗೆ ಸಿಕ್ಕಿಲ್ಲ. ಜತೆಗೆ ಈಗಾಗಲೇ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಪರಿಷ್ಕರಣೆಯ ಅವಧಿ ಮುಗಿದು 14 ತಿಂಗಳು ಕಳೆದರೂ ಆ ಬಗ್ಗೆಯೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
ಈ ಹಿನ್ನೆಲೆಯಲ್ಲಿ ಸರ್ಕಾರ ಏ.15ರಂದು ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟಗಳ ಸಭೆ ಕರೆದಿದ್ದು ಖುದ್ದು ಮುಖ್ಯಮಂತ್ರಿಗಳೇ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಇನ್ನು ಸಭೆಯಲ್ಲಿ ಸರ್ಕಾರ ಚುನಾವಣಾ ಪೂರ್ವದಲ್ಲಿ ನೌಕರರಿಗೆ ಕೊಟ್ಟಿರುವ ಸರಿ ಸಮಾನ ವೇತನ ಕೊಡಲು ಒಪ್ಪುವ ಬಹುತೇಕ ಎಲ್ಲ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ.