NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಾಳೆ ಜಂಟಿ ಕ್ರಿಯಾ ಸಮಿತಿಯಿಂದ ಒಂದು ದಿನದ ಧರಣಿ – ಯಥಾಸ್ಥಿತಿ ಬಸ್‌ ಓಡಾಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇದೇ ಫೆ.22ರಂದು ಅಂದರೆ ನಾಳೆ ಸಾರಿಗೆಯ ನಾಲ್ಕೂ ನಿಗಮಗಳ ವಿಭಾಗೀಯ ಮತ್ತು ಕೇಂದ್ರ ಕಚೇರಿಗಳ ಎದುರು ಹಾಗೂ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಂದು ದಿನದ ಧರಣಿಯನ್ನು ಜಂಟಿ ಕ್ರಿಯಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಾಯಕತ್ವದಲ್ಲಿ ಫೆ.14ರಂದು ಬೆಂಗಳೂರಿನಲ್ಲಿ ನಡೆದ ಸಾರಿಗೆ ನೌಕರರ ರಾಜ್ಯ ಸಮಾವೇಶದ ವೇಳೆ, ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರ ಹಾಗೂ ಆಡಳಿತ ವರ್ಗದ ಮುಂದೆ ಬೇಡಿಕೆಗಳನ್ನು ಇಡಲಾಗಿದೆ. ಈ ಬೇಡಿಕೆಗಳ ಈಡೇರಿಕೆಗಾಗಿ‌ ಫೆ.22ರಂದು ಒಂದುದಿನದ ಧರಣಿ ನಡೆಸಲಾಗುತ್ತಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಡಿ.31, 2023ರ ಮೂಲ ವೇತನದ ಶೇ.25ರಷ್ಟು ಹೆಚ್ಚಳ ಮಾಡಿ ಜ.1, 2024ರಿಂದ ವೇತನ ಶ್ರೇಣಿ ಸಿದ್ಧಪಡಿಸಬೇಕು. ಜ.1, 2020ರಿಂದ ಆಗಿರುವ ಶೇ.15 ವೇತನ ಹೆಚ್ಚಳದ 38 ತಿಂಗಳ ಬಾಕಿ ತಕ್ಷಣ ಬಿಡುಗಡೆ ಮಾಡಬೇಕು. ಜ.1, 2020ರಿಂದ ಫೆ.28, 2023ರ ಅವಧಿ ಮಧ್ಯೆ ನಿವೃತ್ತರಾಗಿರುವ, ಮೃತಪಟ್ಟಿರುವ, ವಜಾಗೊಂಡಿರುವ ಹಾಗೂ ಕಾರಣಾಂತರಗಳಿಂದ ಸೇವೆಯಿಂದ ನಿರ್ಗಮಿಸಿರುವ ಎಲ್ಲ ಸಾರಿಗೆ ನೌಕರರಿಗೆ ಜ.1, 2020ರಿಂದ ಜಾರಿ ಮಾಡಿರುವ ವೇತನ ಶ್ರೇಣಿಗಳನ್ನು ಅನ್ವಯಿಸಿ, ಎಲ್ಲ ರೀತಿಯ ಆರ್ಥಿಕ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಲಾಗುತ್ತಿದೆ.

ಇನ್ನು ಪ್ರತಿ 10 ವರ್ಷಕ್ಕೊಮ್ಮೆ ಆಯ್ಕೆ ಶ್ರೇಣಿ ಬಡ್ತಿ ನೀಡಬೇಕು. ಆ.8, 2023ರಂದು ಸಮಿತಿ ವತಿಯಿಂದ ಸಲ್ಲಿಸಿರುವ ಬೇಡಿಕೆಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದಿರುವ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಚಾಲಕರು, ನಿರ್ವಾಹಕರು, ತಾಂತ್ರಿಕ, ಆಡಳಿತ ಸಿಬ್ಬಂದಿ ಮತ್ತು ಇತರ ಎಲ್ಲ ನೌಕರರಿಗೆ ನೀಡಲಾಗುತ್ತಿರುವ ಭತ್ಯೆಗಳಲ್ಲಿ ಐದು ಪಟ್ಟು ಹೆಚ್ಚಳ ಮಾಡಬೇಕು.

ಎಲ್ಲ ನೌಕರರಿಗೂ ಪ್ರತಿ ತಿಂಗಳು ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯಲು 2000 ರೂ. ನೀಡುವುದರ ಜತೆಗೆ, ಉಚಿತವಾಗಿ ಔಷಧ ವ್ಯವಸ್ಥೆ ಮಾಡಬೇಕು. ನೌಕರರ ಮೂಲ ವೇತನದ ಶೇ.4.5 ಹಾಗೂ ನೌಕರರಿಂದ ಶೇ.0.5 ವಂತಿಗೆ ಸಂಗ್ರಹಿಸಿ ಟ್ರಸ್ಟ್ ರಚಿಸಿ ಈ ಸಾರಿಗೆ ನೌಕರರಿಗೆ ಇಎಸ್‌ಐ ಮಾದರಿಯಲ್ಲಿ ಆಡಳಿತ ವರ್ಗದಿಂದ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸಾ ವ್ಯವಸ್ಥೆ ಮಾಡಬೇಕು. ಈ ಸೌಲಭ್ಯ ನಿವೃತ್ತ ನೌಕರರ ಕುಟುಂಬಗಳಿಗೂ ಲಭಿಸುವಂತಾಗಬೇಕು.

2023ರ ಅವಧಿಗೆ ಕಡಿತಗೊಳಿಸಿರುವ ಅಪಘಾತ ವಿಮೆ ಪ್ರೀಮಿಯಂ ಮರು ಪಾವತಿಸಬೇಕು. 2024ರ ಅವಧಿಯ ವಿಮೆ ಕಂತು ಆಡಳಿತ ವರ್ಗವೇ ಭರಿಸಬೇಕು. ಸೇವಾನಿರತ ಅವಧಿಯಲ್ಲಿ ಸಹಜವಾಗಿ ಅಥವಾ ಅಪಘಾತದಲ್ಲಿ ಮೃತಪಡುವ ಸಾರಿಗೆ ನೌಕರರ ಸಂತ್ರಸ್ತ ಕುಟುಂಬಕ್ಕೆ ಕೆಎಸ್ಸಾರ್ಟಿಸಿ ರೀತಿಯಲ್ಲಿ ಅನುಕ್ರಮವಾಗಿ 10 ಲಕ್ಷ ರೂ. ಹಾಗೂ 1 ಕೋಟಿ ರೂ. ಪರಿಹಾರ ನೀಡುವ ಪದ್ಧತಿ ಜಾರಿಗೊಳಿಸಬೇಕು.

ಮುದ್ರಣಾಲಯ ಮತ್ತು ಕಾರ್ಯಾಗಾರಗಳ ತಾಂತ್ರಿಕ ಸಿಬ್ಬಂದಿಗೆ ಪ್ರತಿ 10 ವರ್ಷಕ್ಕೊಮ್ಮೆ ಮುಂಬಡ್ತಿ ನೀಡಬೇಕು. ಸಾರಿಗೆ ನಿಗಮಗಳ ವಿದ್ಯುತ್ ಚಾಲಿತ ಬಸ್‍ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು. ಶಕ್ತಿ ಯೋಜನೆಯಿಂದ ಚಾಲಕರು ಹಾಗೂ ನಿರ್ವಾಹಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು.

ಎಲ್ಲ ಬೇಡಿಕೆಗಳನ್ನು ಇಟ್ಟು ನಾಳೆ (ಫೆ.22ರಂದು) ಬೆಳಗ್ಗೆ 11 ಗಂಟೆಯಿಂದ ಸಂಜೆ 5ಗಂಟೆ ವರೆಗೂ ಸಾರಿಗೆ ನಿಗಮಗಳ ವಿಭಾಗೀಯ ಕಚೇರಿಗಳು ಮತ್ತು ಕೇಂದ್ರ ಕಚೇರಿಗಳ ಮುಂದೆ ಧರಣಿ ಹಮ್ಮಿಕೊಳ್ಳಲಾಗಿದೆ. ಈ ಧರಣಿ ವೇಳೆ ಬಸ್‌ಗಳ ಸಂಚಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ರಜೆ ಇರುವವರು ಮತ್ತು ನಿವೃತ್ತ ನೌಕರರು ಭಾಗವಹಿಸಲಿದ್ದಾರೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ