
ಬೆಂಗಳೂರು: ಕೇವಲ ಅಭಿಮಾನದಿಂದ ಭಾಷೆಯ ರಕ್ಷಣೆ ಸಾಧ್ಯ ಇಲ್ಲ. ಪ್ರತಿಯೊಬ್ಬ ಕನ್ನಡಿಗನೂ ರಾಜ್ಯದಲ್ಲಿ ಕನ್ನಡದಲ್ಲೇ ಮಾತನಾಡುವ, ವ್ಯವಹರಿಸುವ ಪ್ರತಿಜ್ಞೆಗೈಯ್ಯೋಣ. ಕನ್ನಡವನ್ನು ಬಳಸೋಣ, ಬೆಳೆಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಎಕ್ಸ್ ಮಾಡಿರುವ ಅವರು, ಕನ್ನಡದ ಭಾಷೆಗೆ ತನ್ನದೇ ಆದ ಅಸ್ಮಿತೆಯಿದೆ. ಅದು ಬಹುತ್ವವನ್ನು ಗೌರವಿಸುವ ಮತ್ತು ಒಕ್ಕೂಟದ ಹಿತವನ್ನು ಕಾಯುವ ಬಾಳನೋಟದ ಅಸ್ಮಿತೆ ಎಂದು ಹೇಳಿದ್ದಾರೆ.
ಇನ್ನು ಇದು ಪಂಪನಿಂದ ಕುವೆಂಪು ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಬೆಳೆದುಬಂದಿರುವ ಜೀವನದರ್ಶನ. ಇದನ್ನೇ ಪಂಪ “ಮಾನವ ಕುಲ ತಾನೊಂದೇ ವಲಂ” ಎಂದು ಹೇಳಿದ್ದು ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ. ಅದು ಕೇವಲ ಶಬ್ದ-ವಾಕ್ಯಗಳಲ್ಲ. ಭಾಷೆಯಲ್ಲಿ ಅದನ್ನಾಡುವ ಮನುಷ್ಯನ ಆಳವಾದ ಭಾವನೆಗಳಿರುತ್ತವೆ, ಪರಸ್ಪರ ಸಂಬಂಧಗಳಿರುತ್ತವೆ, ತನ್ನತನದ ಪ್ರಜ್ಞೆ ಇರುತ್ತದೆ ಎಂದು ಹೇಳಿದ್ದಾರೆ.
ಅದು ನಮ್ಮ ಸಂಸ್ಕೃತಿ, ಇತಿಹಾಸ, ನೆಲ-ಜಲದ ಸಂಪತ್ತು ಸೇರಿದಂತೆ ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಕನ್ನಡ ಭಾಷೆ ಈ ಅಸ್ಮಿತೆಯ ಜೀವಧಾತು ಎಂದು ಅಭಿಪ್ರಾಯ ಪಟ್ಟಿದ್ದಾರೆ.
Related









