NEWSದೇಶ-ವಿದೇಶರಾಜಕೀಯ

ಲೋಕಸಭಾ ಚುನಾವಣೆ: ಇಂದಿನಿಂದ ನೀತಿ ಸಂಹಿತೆ ಜಾರಿ – ಡಿಸಿ ಡಾ.ಶಿವಶಂಕರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 2024 ರ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಜೂನ್ 04ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಮಾದರಿ ನೀತಿ ಸಂಹಿತೆಯು 16.03.2024 ರಿಂದ ಜಿಲ್ಲೆಯಾದ್ಯಂತ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣೆ ಅಧಿಕಾರಿ ಡಾ.ಶಿವಶಂಕರ. ಎನ್ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಭಾರತ ಚುನಾವಣಾ ಆಯೋಗದ ಚುನಾವಣಾ ವೇಳಾ ಪಟ್ಟಿಯಂತೆ ಚುನಾವಣಾ ಅಧಿಸೂಚನೆ ಮಾ. 28 -2024 (ಗುರುವಾರ), ನಾಮಪತ್ರ ಸಲ್ಲಿಸಲು ಕೊನೆಯ ದಿನ ಏ.4 (ಗುರುವಾರ) ನಾಮಪತ್ರಗಳ ಪರಿಶೀಲನೆ ಏ.5 (ಶುಕ್ರವಾರ), ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏ. 8 (ಸೋಮವಾರ), ಮತದಾನದ ಏ.26 (ಶುಕ್ರವಾರ), ಮತದಾನದ ಸಮಯ- ಬೆಳಗ್ಗೆ 7 ರಿಂದ ಸಂಜೆ 6 ಗಂಟೆ. ಮತ ಎಣಿಕೆ ಜೂನ್‌ 4 – 2024 (ಮಂಗಳವಾರ), ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ದಿನಾಂಕ 6ನೇ ಜೂನ್ 2024 (ಗುರುವಾರ).

ಜಿಲ್ಲೆಯಲ್ಲಿ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಇಲ್ಲಿಯವರೆಗೆ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 8,91,762 ಮತದಾರರು ಇದ್ದಾರೆ. ಇದರಲ್ಲಿ 4,40,884 ಪುರುಷರು,4,50,737 ಮಹಿಳೆಯರು ಹಾಗೂ 141 ಇತರೆ ಮತದಾರರು ಇದ್ದಾರೆ. ಒಟ್ಟು ಮತದಾರರ ಸಂಖ್ಯೆಯಲ್ಲಿ 18 ರಿಂದ 19 ವರ್ಷದೊಳಗಿನ 20,862 ಯುವ ಮತದಾರರು, 85 ವರ್ಷ ಮೇಲ್ಪಟ್ಟ 10,010 ಹಿರಿಯ ಮತದಾರರು, 13,107 ಅಂಗವಿಕಲ ಮತದಾರರು ಹಾಗೂ 123 ಸೇವಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಜಿಲ್ಲೆಯ 4 ತಾಲೂಕುಗಳಲ್ಲಿನ ಮತದಾರರ ಪೈಕಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರೇ ಇದ್ದಾರೆ. ದೊಡ್ಡಬಳ್ಳಾಪುರದಲ್ಲಿ ಒಟ್ಟು 2,18,521 ಮತದಾರರಿದ್ದು, ಅದರಲ್ಲಿ 1,10,406 ಮಹಿಳಾ ಮತದಾರರು ಹಾಗೂ 1,08,090 ಪುರುಷ ಮತದಾರರಿದ್ದಾರೆ. ಸಕೋಟೆಯಲ್ಲಿ ಒಟ್ಟು 2,37,367ಮತದಾರರಿದ್ದು, ಅದರಲ್ಲಿ 1,19,598ಮಹಿಳೆ ಹಾಗೂ 1,17,748 ಪುರುಷ ಮತದಾರರು ಇದ್ದಾರೆ. ದೇವನಹಳ್ಳಿಯಲ್ಲಿ ಒಟ್ಟು 2,15,027 ಮತದಾರರಿದ್ದು, 1,08,548 ಮಹಿಳಾ ಹಾಗೂ 1,06,463 ಪುರುಷ ಮತದಾರರಿದ್ದಾರೆ. ನೆಲಮಂಗಲದಲ್ಲಿ 2,20,847 ಮತದಾರರ ಪೈಕಿ 1,12,161 ಮಹಿಳೆ ಹಾಗೂ 1,08,583 ಪುರುಷ ಮತದಾರರಿದ್ದಾರೆ.

ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ 1 ಸಾವಿರ ಪುರುಷರಿಗೆ 1021 ಮಹಿಳೆಯರಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರದಲ್ಲಿ 1018, ಹೊಸಕೋಟೆಯಲ್ಲಿ 1014, ದೇವನಹಳ್ಳಿ 1017 ಹಾಗೂ ನೆಲಮಂಗಲದಲ್ಲಿ 1018 ಲಿಂಗಾನುಪಾತ ಕಂಡುಬಂದಿದೆ. ಜಿಲ್ಲೆಯಲ್ಲಿ 4 ವಿಧಾನಸಭಾ ಕ್ಷೇತ್ರಗಳಿವೆ. ಇದರಲ್ಲಿ ಒಟ್ಟಾಗಿ 1137 ಮತಗಟ್ಟೆಗಳಿವೆ. ಅದರಲ್ಲಿ ದೊಡ್ಡಬಳ್ಳಾಪುರ 276, ಹೊಸಕೋಟೆ 293, ದೇವನಹಳ್ಳಿ 292 ಹಾಗೂ ನೆಲಮಂಗಲ್ಲಿ 276 ಮತಗಟ್ಟೆಗಳಿದೆ. ಜಿಲ್ಲೆಯ ಒಟ್ಟು ನಾಲ್ಕು ಮತಕ್ಷೇತ್ರಗಳಿಗೆ 21 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿರುತ್ತದೆ. ಪ್ರತಿ ಚೆಕ್ ಪೋಸ್ಟ್ ಗಳಲ್ಲಿ ಎಸ್.ಎಸ್.ಟಿ ತಂಡ ಹಾಗೂ ಪೋಲಿಸ್ ಸಿಬ್ಬಂದಿಗಳನ್ನು ನೇಮಿಸಲಾಗಿರುತ್ತದೆ.

ಜಿಲ್ಲೆಯ ನಾಲ್ಕು ತಾಲೂಕುಗಳಿಂದ 104 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಇತರೆ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಸ್ವೀಕರಿಸುವ ದೂರು ಅಹವಾಲುಗಳನ್ನು ನಿವಾರಿಸುವ ಸಲುವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರ ಚುನಾವಣಾ ಅಧಿಕಾರಿ ಸಹಾಯಕ ಚುನಾವಣಾ ಅಧಿಕಾರಿ ಅವರ ಕಚೇರಿಗಳಲ್ಲಿ ದೂರು ನಿವಾರಣ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ 080 29902025 ದೂರವಾಣಿ ಸಂಖ್ಯೆ, ಉಚಿತ ಸಹಾಯವಾಣಿ ಸಂಖ್ಯೆ 08119-1950.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಅವರ ಕಚೇರಿಯಲ್ಲಿ ದೂರವಾಣಿ ಸಂಖ್ಯೆ 080 27931237, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಅವರ ದೂರವಾಣಿ ಸಂಖ್ಯೆ 080 22122999, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಅವರ ದೂರವಾಣಿ ಸಂಖ್ಯೆ 080 27622037, ನೆಲಮಂಗಲ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಅವರ ದೂರವಾಣಿ ಸಂಖ್ಯೆ 080 27722126 ಸಂಖ್ಯೆಗೆ ಕರೆ ಮಾಡಿ ದೂರು ಅಥವಾ ಅಹವಾಲು ಸಲ್ಲಿಸಬಹುದು.

ಅಂತಿಮ ಮತದಾರ ಪಟ್ಟಿಯನ್ನು ಈಗಾಗಲೇ ಪ್ರಚಾರ ಪಡಿಸಲಾಗಿದ್ದು, ಮತದಾರರ ನಿರಂತರ ನೋಂದಣಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಮುಂದುವರಿಸುತ್ತಾ ಹೊಸದಾಗಿ ನೋಂದಾಯಿಸಬೇಕಾದ ಮತದಾರರಿಗೆ ಮಾರ್ಚ್ 26ರ ವರೆಗೆ ನೋಂದಣಿಗಾಗಿ ಅರ್ಜಿಯನ್ನು ಸ್ವೀಕರಿಸುವ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿರುತ್ತದೆ ಕಾರಣ ಅರ್ಹರಿರುವ ಮತದಾರರು ನಿಗದಿಪಡಿಸಿದ ಕಾಲಮಿತಿಯೊಳಗೆ ನೋಂದಣಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಿ ಸೂಕ್ತ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಮತದಾನದ ಹಕ್ಕನ್ನು ಚಲಾಯಿಸಿ ಸುಭದ್ರವಾದ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಸೂಕ್ತ ಪಾತ್ರ ವಹಿಸಲು ಸಾರ್ವಜನಿಕರಲ್ಲಿ ವಿನಂತಿಸಿದರು ಒಟ್ಟಾರೆಯಾಗಿ ಈ ಚುನಾವಣೆಯು ಅತ್ಯಂತ ಶಾಂತ ರೀತಿಯಿಂದ ಮುಕ್ತವಾಗಿ ನಡೆಸಲು ಸಹಕರಿಸಿ.

ಜಿಲ್ಲೆಯ ಎಲ್ಲ ಮತದಾರರು ನ್ಯಾಯ ಸಮ್ಮತವಾಗಿ ಹಾಗೂ ನಿಷ್ಪಕ್ಷಪಾತವಾಗಿ ಜರುಗುವಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸಲು ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸಿಬ್ಬಂದಿ ವರ್ಗದವರಿಗೆ ಕಟ್ಟುನಿಟ್ಟಾಗಿ ನಿರ್ದೇಶಿಸಲಾಗಿದೆ ಜಿಲ್ಲೆಯ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮತದಾನ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಸಾರ್ವಜನಿಕರಲ್ಲಿ ಕೋರಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಮಾದರಿ ನೀತಿ ಸಂಹಿತೆ ನೋಡಲಾಧಿಕಾರಿ ಡಾ.ಕೆ.ಎನ್ ಅನುರಾಧಾ ಮಾತನಾಡಿ, ಜಿಲ್ಲೆಯಲ್ಲಿ ಮತದಾನ ಹೆಚ್ಚಿಸಲು ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಮುಂದಿನ ದಿನಗಳಲ್ಲಿ ಹಿಂದಿನ ಚುನಾವಣೆಗಳಲ್ಲಿ ಕಡಿಮೆ ಮತದಾನ ನಡೆದ ಮತದಾನ ಕೇಂದ್ರಗಳನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದ್ದು, ಮತದಾನ‌ ಹೆಚ್ಚಿಸಲು ಅಗತ್ಯ ಸಿದ್ಧತೆ ಕೈಗೊಳುತ್ತೇವೆ. ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಉಲ್ಲಂಘನೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆ ನಡೆಸಿದ್ದು ಸಾರ್ವಜನಿಕರು ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಉಲ್ಲಂಘನೆಯಲ್ಲಿ ಮಾಹಿತಿ ನೀಡಬಹುದು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಮಾತನಾಡಿ, ಜಿಲ್ಲೆಯಲ್ಲಿ ಇಂದಿನಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಜಿಲ್ಲೆಯಾದ್ಯಂತ 21 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗುತ್ತಿದ್ದು, ತಮಿಳುನಾಡಿಗೆ ಹೊಂದಿಕೊಂಡಂತೆ ಹೊಸಕೋಟೆ ಬಳಿಯ ಬಾಗೂರು ಬಳಿ ಚೆಕ್ಪೋಸ್ಟ್ ನಿರ್ಮಿಸಲಾಗಿದೆ, ಅಂತರ್ ಜಿಲ್ಲೆಯಲ್ಲಿ 13 ಚೆಕ್ ಪೋಸ್ಟ್ ಗಳು, ಜಿಲ್ಲೆಯ ಒಳಗೆ 08 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಜಿಲ್ಲೆಯಲ್ಲಿರುವ ಎಲ್ಲಾ ಫ್ಲೆಕ್ಸ್ ಬ್ಯಾನರ್ ಗಳನ್ನು ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ತೆರವುಗೊಳಿಸಲಾಗಿದೆ. ಪರವಾನಿಗೆ ಹೊಂದಿದ ಶಸ್ತ್ರಾಸ್ರಗಳನ್ನು ಹಿಂಪಡೆಯಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಂಡು ಶಾಂತ ರೀತಿಯಲ್ಲಿ ಚುನಾವಣೆ ನಡೆಸಲು ಸನ್ನದ್ಧರಾಗಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ