ಇಂದು ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶರತ್ಕುಮಾರ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಿಕ್ಕಬಳ್ಳಾಪುರದಲ್ಲಿ ಹೂವಿನ ಮಾರುಕಟ್ಟೆಗೆ ಆರ್ಐಡಿಎಫ್ -31 ಯೋಜನೆ ಅಡಿಯಲ್ಲಿ 20 ಕೋಟಿ ರೂ. ಅನುದಾನ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದರು.
ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ 20 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಈ ಯೋಜನೆಯ ನಂತರದಲ್ಲಿ ಹೊಸಕೋಟೆಯಲ್ಲೂ ಹೂವಿನ ಮಾರುಕಟ್ಟೆ ನಿರ್ಮಾಣ ಬೇಡಿಕೆಯನ್ನು ಪರಿಗಣಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶರತ್ಕುಮಾರ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಿಕ್ಕಬಳ್ಳಾಪುರದಲ್ಲಿ ಹೂವಿನ ಮಾರುಕಟ್ಟೆಗೆ ಆರ್ಐಡಿಎಫ್ -31 ಯೋಜನೆ ಅಡಿಯಲ್ಲಿ 20 ಕೋಟಿ ರೂ. ಅನುದಾನ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದರು.
ಹೊಸಕೋಟೆ ತಾಲೂಕಿನಲ್ಲಿ ಒಟ್ಟು 25 ಎಕರೆ ಪ್ರದೇಶದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಪ್ರಾಂಗಣ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಲಾಗಿದೆ. ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಗೋದಾಮು, ಮುಚ್ಚು ಹರಾಜು ಕಟ್ಟೆ, ಆಡಳಿತ ಕಚೇರಿ, ಆರ್ಸಿಸಿ ಡ್ರೈನ್, ವಿದ್ಯುತ್ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಪ್ರಗತಿಯಲ್ಲಿದೆ ಎಂದು ವಿವರಿಸಿದರು.
ಹೂವಿನ ಮಾರುಕಟ್ಟೆ ಅಭಿವೃದ್ಧಿಪಡಿಸಲು ಈಗಾಗಲೇ ಡಿಪಿಆರ್ ಪಡೆದಿದ್ದು, ಮಾರುಕಟ್ಟೆ ಪ್ರಾಂಗಣ ಅಭಿವೃದ್ಧಿ ನಂತರದಲ್ಲಿ ಹೂವು, ತರಕಾರಿ ಹಾಗೂ ಇತರ ಅಧಿಸೂಚಿತ ಕೃಷಿ ಉತ್ಪನ್ನಗಳ ವ್ಯಾಪಾರ ವಹಿವಾಟಿಗೆ ಪೂರಕ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ವಿವರಿಸಿದರು.
Related










