ಚಾಮರಾಜನಗರ: ಕಂದಾಯ ಇಲಾಖೆಯ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ ಗ್ರಾಮೀಣ ಜನರ ಕುಂದುಕೊರತೆ , ಸಮಸ್ಯೆಗೆ ಆಲಿಸಿ ಆದ್ಯತೆ ಮೇರೆಗೆ ಪರಿಹಾರ ನೀಡಲು ಮುಂದಾಗಬೇಕೆಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಿಗೆ ಅಧಿಕಾರಿಗಳು ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಭೇಟಿಯ ಸಂಬಂಧ ಸಾಕಷ್ಟು ಮೊದಲೇ ಜನರಿಗೆ ಮಾಹಿತಿ ನೀಡಬೇಕು. ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ನೀಡಲು ಕ್ರಮ ವಹಿಸಬೇಕು. ಸಾಧ್ಯವಾಗದಿದ್ದಲ್ಲಿ ಕಚೇರಿಯಲ್ಲಿ ಅಗತ್ಯ ಪ್ರಕ್ರಿಯೆ ಕೈಗೊಂಡು ಜನರ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಬೇಕು ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಪ್ರವಾಹ ಪೀಡಿತ ಗ್ರಾಮಗಳಲ್ಲಿ ಉಂಟಾಗಿರುವ ಮನೆ, ಬೆಳೆಹಾನಿ ಸಂಬಂಧ ಒದಗಿಸಲಾಗಿರುವ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದ ಸಚಿವರು ಬಾಕಿ ಇರುವ ಮನೆ ನಿರ್ಮಾಣ ಕಾಮಗಾರಿಯನ್ನು 2 ತಿಂಗಳ ಕಾಲವಾಧಿಯಲ್ಲಿ ಪೂರ್ಣಗೊಳಿಸಬೇಕು. ಫಲಾನುಭವಿಗಳಿಗೆ ಮನೆ ನಿರ್ಮಾಣ ಸಂಬಂಧ ಮನವರಿಕೆ ಮಾಡಿ ಸೌಲಭ್ಯ ಕಲ್ಪಿಸುವ ಕೆಲಸ ವಿಳಂಬ ಮಾಡಬಾರದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಆಗಿರುವ ಮಳೆ, ಬೆಳೆ, ಕುಡಿಯುವ ನೀರು ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಸಚಿವರು ರೈತರಿಗೆ ಅಗತ್ಯವಿರುವ ಬಿತ್ತನೆಬೀಜ, ರಸಗೊಬ್ಬರ ಸೇರಿದಂತೆ ಅಗತ್ಯ ಪರಿಕರಗಳಿಗೆ ಕೊರತೆಯಾಗಬಾರದು. ಮೇವು ದಾಸ್ತಾನು ಸಹ ಲಭ್ಯವಿರುವಂತೆ ನೋಡಿಕೊಳ್ಳಬೇಕು. ರಾಸುಗಳ ಆರೋಗ್ಯಕ್ಕೆ ಕಾಲಕಾಲಕ್ಕೆ ಅಗತ್ಯವಿರುವ ಲಸಿಕೆ ಇನ್ನಿತರ ಔಷಧೋಪಚಾರಗಳಿಗೆ ಮುಂದಾಗಬೇಕು ಕುಡಿಯುವ ನೀರಿಗೂ ತೊಂದರೆಯಾಗಬಾರದು ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇದೇ ವೇಳೆ ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್ ಮಾತನಾಡಿ ರೈತರ ಬೇಡಿಕೆಗಳಿಗೆ ಅನುಸಾರವಾಗಿ ಬಿತ್ತನೆಬೀಜ ಪೂರೈಕೆ ಮಾಡಬೇಕಿದೆ. ಮುಂಬರುವ ಬಿತ್ತನೆ ಸಂದರ್ಭದಲ್ಲಿ ಯಾವ ಬೆಳೆಗಳನ್ನು ರೈತರು ಬೆಳೆಯಲಿದ್ದಾರೆ ಎಂಬ ಮಾಹಿತಿಯನ್ನು ಮುಂಚಿತವಾಗಿಯೇ ಪಡೆದುಕೊಂಡು ಇದಕ್ಕನುಗುಣವಾಗಿ ಕೃಷಿ ಇಲಾಖೆ ಪೂರಕ ಸಿದ್ದತೆ ಮಾಡಿಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಮಾತನಾಡಿ ಲಾಕ್ಡೌನ್ ಅವಧಿಯಲ್ಲಿ ಜನರಿಗೆ ತೊಂದರೆಯಾಗದಂತೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಪೂರ್ವ ಮುಂಗಾರು ಉತ್ತಮವಾಗಿದೆ. ಬರ ಪರಿಸ್ಥಿತಿಯಲ್ಲಿ ಅವಶ್ಯಕ ಮುಂಜಾಗರೂಕತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ. ಅಶ್ವಿನಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಉಪವಿಭಾಗಾಧಿಕಾರಿ ನಿಖಿತಾ ಎಂ. ಚಿನ್ನಸ್ವಾಮಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail