ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆಗೆ ಕರ್ನಾಟಕಕ್ಕೆ ಕರ್ನಾಟಕವೇ ತತ್ತರಿಸಿ ಹೋಗಿದೆ. ಕಳೆದ 2020 ರ ಏಪ್ರಿಲ್ ತಿಂಗಳಿನಿಂದ ಇಂದಿನವರೆಗೂ ರಾಜ್ಯದಲ್ಲಿ ಪ್ರತಿನಿತ್ಯ 27 ಪೊಲೀಸ್ ಸಿಬ್ಬಂದಿ ಹಾಗೂ ಹೋಂ ಗಾರ್ಡ್ ಸಿಬ್ಬಂದಿಗೆ ಸೋಂಕು ತಗುಲಿರುವುದು ತಿಳಿದುಬಂದಿದೆ.
ರಾಜ್ಯದಲ್ಲಿ ಈವರೆಗೂ 9990 ಪೊಲೀಸ್ ಸಿಬ್ಬಂದಿ ಹಾಗೂ ಹೋಂ ಗಾರ್ಡ್ ಸಿಬ್ಬಂದಿಗೆ ವೈರಸ್ ಕಾಣಿಸಿಕೊಂಡಿದ್ದು ಇದುವರೆಗೂ 107 ಭದ್ರತಾ ಸಿಬ್ಬಂದಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬವನ್ನು ಕೋವಿಡ್-19 ಮಹಾಮಾರಿ ಯಿಂದ ರಕ್ಷಿಸುವುದಕ್ಕಾಗಿ ಬಹುಪಾಲು ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿಸಿದ್ದು, ಒಂದು ಲಕ್ಷಕ್ಕೂ ಅಧಿಕ ಭದ್ರತಾ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಮೊದಲನೆಯ ಸಂದರ್ಭದಲ್ಲಿ 9696 ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದೆ. 2021 ಏಪ್ರಿಲ್ ಒಂದರಿಂದ ಅಂಕಿಅಂಶದ ಪ್ರಕಾರ 295 ಭದ್ರತಾ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆಡಳಿತ ವಿಭಾಗದ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ತಿಳಿಸಿದ್ದಾರೆ.
ಕಳೆದ ಒಂದು ವರ್ಷದಲ್ಲಿ ರಾಜ್ಯದ ಶೇಕಡ ಹತ್ತರಷ್ಟು ಪೊಲೀಸ್ ಸಿಬ್ಬಂದಿಗೆ ಸೋಂಕು ತಗಲಿದೆ ಎಂದು ಪ್ರವೀಣ್ ಸೂದ್ ಅವರು ತಿಳಿಸಿದ್ದಾರೆ. ಅಲ್ಲದೆ ನಾವು ಶೇಕಡ ಒಂದರಷ್ಟು ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ಕೊರೊನಾ ಸೋಂಕಿನಿಂದ ಜೀವಕಳೆದುಕೊಂಡವರ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಸದ್ಯಕ್ಕೆ 76000 ಪೊಲೀಸ್ ಸಿಬ್ಬಂದಿಗೆ ಕೊರೊನಾ ಲಸಿಕೆಯನ್ನು ನೀಡಿದ್ದು 46000 ಸಿಬ್ಬಂದಿ ಎರಡನೇ ಲಸಿಕೆ ಪಡೆದುಕೊಂಡಿದ್ದಾರೆ. ಬಹುತೇಕ ಎಲ್ಲಾ ಸಿಬ್ಬಂದಿಗೆ ನೀಡಲಾಗುವುದು. ಪೊಲೀಸ್ ಸಿಬ್ಬಂದಿಯ ಕುಟುಂಬದ ಸದಸ್ಯರಿಗೂ ಮುಂಜಾಗ್ರತಾ ದೃಷ್ಟಿಯಿಂದ ಲಸಿಕೆ ನೀಡಲಾಗುವುದು ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.