ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ಬಿಜೆಪಿ ರಾಜ್ಯ ನಾಯಕರು, ಈಗ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ ಎಂದು ರಾಜ್ಯ ಬಿಜೆಪಿ ನಾಯಕರ ನಡೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯಭರಿತವಾಗಿ ತಿವಿದಿದ್ದಾರೆ.
ಔಷಧಿ,ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು ಮೋದಿ ಅವರನ್ನು ಬೇಡುತ್ತಿರುವ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಂಡಾಗ ಕನಿಕರ ಮೂಡುತ್ತಿದೆ. ರಾಜ್ಯದ 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಆಗ್ರಹಿಸಿದ್ದಾರೆ.
ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ
ಬಡವರ ವಿರೋಧಿ ಎಂದು ಹೇಳಿ ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು ಎಂದು ಎಚ್ಚರಿಸಿದ್ದಾರೆ.
ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಸಿಎಂ ಅವರೇ,
ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ ಎಂದು ತಿಳಿಸಿದ್ದಾರೆ.
ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಮೋದಿ ಅವರೆ ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ ಎಂದು ಹೇಳಿದ್ದಾರೆ.
ಲಸಿಕೆ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಕೇಂದ್ರ ಸರ್ಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ಮೋದಿ ಅವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ಒತ್ತಾಯಿಸಿದ್ದಾರೆ.