ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂಹೇರಿರುವ ರಾಜ್ಯ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ! ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ? ಮುಖ್ಯಮಂತ್ರಿ ಅವರೇ, ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ಸಿಎಂ ಮತ್ತು ಆರೋಗ್ಯ ಸಚಿವ ಸುಧಾಕರ್ ಹೊಂದಿದ್ದರೆ, ಮೊದಲು ಕೊರೊನಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಮತ್ತು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ನೀಡಬೇಕು ಎಂದು ತಾಕೀತು ಮಾಡಿದ್ದಾರೆ.
ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆಯ ದೂರು ಕೇಳಿಬರತೊಡಗಿದೆ. ಗಿಮಿಕ್ಗಳನ್ನು ಬಿಟ್ಟು ಈ ಕಡೆ ಗಮನಹರಿಸಿ ಎಂದು ಚಾಟಿ ಬೀಸಿದ್ದಾರೆ.
ದೇಶದ ಪಿಎಂ ಮೋದಿ ಅವರ ಅಂಧಾ ದರ್ಬಾರ್ನಿಂದ ರಾಜ್ಯದ ಸಿಎಂ ಸ್ಪೂರ್ತಿ ಪಡೆದರೆ, ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳೇ, ಸ್ವಲ್ಪ ಬುದ್ದಿ ಕಲಿಯಿರಿ ಅವರಿಗೆ ಬುದ್ದಿ ಹೇಳಿ ಎಂದು ಕಾರವಾಗಿ ಹೇಳಿದ್ದಾರೆ.