ಜೈಪುರ: ಎರಡು ರಾಜ್ಯಸಭಾ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ರಾಜಸ್ಥಾನದ ಕಾಂಗ್ರೆಸ್ ಪಕ್ಷದ ನಾಯಕ ಅವಿನಾಶ್ ಪಾಂಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇತರ ಪಕ್ಷದ ಶಾಸಕರು ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಲಿದ್ದು ಕಾಂಗ್ರೆಸ್ ಸುಲಭವಾಗಿ ಎರಡು ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಶನಿವಾರ ತಡರಾತ್ರಿ ಹೇಳಿದರು.
ಆದರೆ ಜೂನ್ 19ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ವಾಮಮಾರ್ಗದ ಮೂಲಕ ಗೆಲ್ಲುವ ಪ್ರಯತ್ನ ಮಾಡುತ್ತಿದೆ. ಅದರ ಕುದುರೆ ವ್ಯಾಪಾರದ ತಂತ್ರ ಫಲಿಸುವುದಿಲ್ಲ ಎಂದು ಪಾಂಡೆ ತಿಳಿಸಿದ್ದಾರೆ.
ಅಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಲಿದೆ ಎಂದರು. ಕಾಂಗ್ರೆಸ್ ಕೆ.ಸಿ. ವೇಣುಗೋಪಾಲ್ ಹಾಗೂ ನೀರಜ್ ಡಾಂಗಿ ಅವರನ್ನು ಕಣಕ್ಕೆ ಇಳಿಸಿದೆ. ರಾಜಸ್ಥಾನ ವಿಧಾನಸಭೆಯ ಬಲಾಬಲದ ಪ್ರಕಾರ ಕಾಂಗ್ರೆಸ್ ಎರಡು ಬಿಜೆಪಿ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. ಆದರೆ ಬಿಜೆಪಿ ಎರಡನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವುದು ಕಾಂಗ್ರೆಸ್ನಲ್ಲಿ ಆತಂಕ ಉಂಟು ಮಾಡಿದೆ.